ವಿಮುಕ್ತ ದೇವದಾಸಿ ಮಹಿಳೆಯರ ಸಮಗ್ರ ಗಣತಿಗೆ ಆಗ್ರಹ

KannadaprabhaNewsNetwork |  
Published : Jun 05, 2026, 02:45 AM IST
ಮುಕ್ತ ದೇವದಾಸಿ ಮಹಿಳೆಯರ ಸಮಗ್ರ ಗಣತಿಗೆ ಆಗ್ರಹಿಸಿ ಕಂಪ್ಲಿಯಲ್ಲಿ ತಹಸೀಲ್ದಾರ್ ಜೂಗಲ ಮಂಜು ನಾಯಕಗೆ ಮನವಿ ಸಲ್ಲಿಸಲಾಯಿತು  | Kannada Prabha

ಸಾರಾಂಶ

2007-08ರಲ್ಲಿ ರಾಜ್ಯ ಸರ್ಕಾರ ನಡೆಸಿದ್ದ ಗಣತಿಯಲ್ಲಿ ಸುಮಾರು 46,800 ದೇವದಾಸಿ ಮಹಿಳೆಯರನ್ನು ಗುರುತಿಸಲಾಗಿತ್ತು.

ಕಂಪ್ಲಿ: ವಿಮುಕ್ತ ದೇವದಾಸಿ ಮಹಿಳೆಯರು ಹಾಗೂ ಅವರ ಮೂರು ತಲೆಮಾರುಗಳ ಕುಟುಂಬ ಸದಸ್ಯರ ಸಮಗ್ರ ಮತ್ತು ದೋಷರಹಿತ ಗಣತಿ ನಡೆಸಬೇಕು ಎಂದು ಆಗ್ರಹಿಸಿ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ಪದಾಧಿಕಾರಿಗಳು ಗುರುವಾರ ತಹಸೀಲ್ದಾರ್ ಜೂಗಲ ಮಂಜುನಾಯಕರಿಗೆ ಮನವಿ ಸಲ್ಲಿಸಿದರು.

ಸಂಘದ ತಾಲೂಕು ಅಧ್ಯಕ್ಷೆ ಪಾರ್ವತಿ ಹಾಗೂ ಜಿಲ್ಲಾ ಕಾರ್ಯದರ್ಶಿ ಎ.ಸ್ವಾಮಿ ಮಾತನಾಡಿ, 2007-08ರಲ್ಲಿ ರಾಜ್ಯ ಸರ್ಕಾರ ನಡೆಸಿದ್ದ ಗಣತಿಯಲ್ಲಿ ಸುಮಾರು 46,800 ದೇವದಾಸಿ ಮಹಿಳೆಯರನ್ನು ಗುರುತಿಸಲಾಗಿತ್ತು. ಆದರೆ ಆ ವೇಳೆಯೂ 20 ಸಾವಿರಕ್ಕೂ ಅಧಿಕ ಮಹಿಳೆಯರು ವಿವಿಧ ಕಾರಣಗಳಿಂದ ಪಟ್ಟಿಯಿಂದ ಹೊರಗುಳಿದಿದ್ದರು. ಪ್ರಸ್ತುತ ನಡೆಯುತ್ತಿರುವ ಗಣತಿಯಲ್ಲಿ 1982ರ ನಂತರ ದೇವದಾಸಿ ಪದ್ಧತಿಗೆ ಒಳಗಾದ ಮಹಿಳೆಯರನ್ನು ಪರಿಗಣಿಸದಿರುವುದು ಅನ್ಯಾಯವಾಗಿದ್ದು, ಇದರಿಂದ ಅನೇಕ ಕುಟುಂಬಗಳು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುವ ಸಾಧ್ಯತೆಯಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಇತ್ತೀಚಿನ ಗಣತಿ ಪಟ್ಟಿಯಲ್ಲಿ ಕೇವಲ 23,385 ಮಹಿಳೆಯರನ್ನು ಮಾತ್ರ ಗುರುತಿಸಲಾಗಿದೆ. ಈ ಅಂಕಿ-ಅಂಶಗಳು ವಾಸ್ತವಿಕ ಸ್ಥಿತಿಗೆ ಹೊಂದಿಕೆಯಾಗುವುದಿಲ್ಲ. ರಾಜ್ಯದಲ್ಲಿ ದೇವದಾಸಿ ಮಹಿಳೆಯರು ಹಾಗೂ ಅವರ ಕುಟುಂಬಗಳ ಸಂಖ್ಯೆ ಸುಮಾರು ಎರಡು ಲಕ್ಷಕ್ಕೂ ಅಧಿಕ ಇರಬಹುದೆಂದು ಅಂದಾಜಿಸಲಾಗಿದೆ. ಆದ್ದರಿಂದ ಯಾವುದೇ ಅರ್ಹ ಮಹಿಳೆ ಹೊರಗುಳಿಯದಂತೆ ಮರುಪರಿಶೀಲನೆ ನಡೆಸಿ ಸಮಗ್ರ ಗಣತಿ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ದೇವದಾಸಿ ಮಹಿಳೆಯರಿಗೆ ನೀಡಬೇಕಾದ ಪಿಂಚಣಿ ಹಲವೆಡೆ ಬಾಕಿ ಉಳಿದಿದ್ದು, ಅದನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ಅಲ್ಲದೆ 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ದೇವದಾಸಿ ಮಹಿಳೆಯರ ಮಾಸಿಕ ಪಿಂಚಣಿಯನ್ನು ₹6,000ಕ್ಕೆ ಹೆಚ್ಚಿಸುವ ಮೂಲಕ ಅವರ ಜೀವನೋಪಾಯಕ್ಕೆ ನೆರವಾಗಬೇಕು ಎಂದು ಮನವಿ ಮಾಡಿದರು.

ಸರ್ವೇ ಪಟ್ಟಿಯಿಂದ ಹೊರಗುಳಿದಿರುವ ದೇವದಾಸಿ ಮಹಿಳೆಯರ ಮಕ್ಕಳಿಗೆ ಶಿಕ್ಷಣ, ವಿದ್ಯಾರ್ಥಿವೇತನ ಹಾಗೂ ಇತರೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ತಾಯಿಯ ದೇವದಾಸಿ ದೃಢೀಕರಣ ಪತ್ರ ನೀಡುವ ವ್ಯವಸ್ಥೆ ಮಾಡಬೇಕು. ಜೊತೆಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಮಹಿಳೆಯರಿಗೆ ₹2 ಲಕ್ಷದವರೆಗೆ ಸಾಲಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಇದಲ್ಲದೆ ಭೂಹೀನ ದೇವದಾಸಿ ಮಹಿಳೆಯರಿಗೆ ಕೃಷಿ ಚಟುವಟಿಕೆ ನಡೆಸಲು ತಲಾ ಐದು ಎಕರೆ ಕೃಷಿ ಭೂಮಿ ಮಂಜೂರು ಮಾಡಬೇಕು. ನಿವೇಶನ ರಹಿತ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನಿವೇಶನ ಹಾಗೂ ವಸತಿ ಸೌಲಭ್ಯ ಕಲ್ಪಿಸುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಪುನರ್ವಸತಿಗೆ ಸರ್ಕಾರ ವಿಶೇಷ ಯೋಜನೆಗಳನ್ನು ರೂಪಿಸಬೇಕು ಎಂದು ಮನವಿ ಮಾಡಿದರು.

ಮನವಿ ಸಲ್ಲಿಸುವ ವೇಳೆ ವಿಮುಕ್ತ ದೇವದಾಸಿ ಮಹಿಳೆಯರಾದ ತಾಯಮ್ಮ, ಲಕ್ಷ್ಮೀದೇವಿ, ಗಂಗಮ್ಮ, ಮರಿಯಮ್ಮ, ಹೊನ್ನೂರಮ್ಮ, ಹುಲಿಗೆಮ್ಮ, ಶಿವಮ್ಮ ಸೇರಿದಂತೆ ರಾಜ್ಯ ದೇವದಾಸಿ ಮಹಿಳೆಯರ ಮಕ್ಕಳ ಹೋರಾಟ ಸಮಿತಿ ತಾಲೂಕು ಕಾರ್ಯದರ್ಶಿ ರಾಮ, ಓಬಳೇಶ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ಗೆ ಅಭಿನಂದನೆ
ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ಪ್ರೇಮ ಕುಮಾರ್