ಕೆ.ಸಿ. ವ್ಯಾಲಿ ಮೂರನೇ ಹಂತದ ಶುದ್ಧೀಕರಣ । ಸರ್ಕಾರಿ ಆಸ್ತಿಗಳ ಒತ್ತುವರಿ ತೆರವಿಗೆ ವಿಶೇಷ ತಂಡ ರಚಿಸಲು ಆಗ್ರಹ
ಕೃಷಿ ಉತ್ಪನ್ನ ಮಾರುಕಟ್ಟೆ ಅಭಿವೃದ್ಧಿಗೆ ೧೦೦ ಎಕರೆ ಸರ್ಕಾರಿ ಜಮೀನು ಮಂಜೂರು ಮಾಡಿ, ಕೆ.ಸಿ. ವ್ಯಾಲಿ ಮೂರನೇ ಹಂತದ ಶುದ್ಧೀಕರಣ, ನಕಲಿ ಬಿತ್ತನೆ ಬೀಜ, ಗೊಬ್ಬರ, ಔಷಧಿಗಳ ನಿಯಂತ್ರಣ ಹಾಗೂ ಸರ್ಕಾರಿ ಆಸ್ತಿಗಳ ಒತ್ತುವರಿ ತೆರವಿಗೆ ವಿಶೇಷ ತಂಡ ರಚಿಸಬೇಕೆಂದು ರೈತ ಸಂಘದ ಮುಖಂಡರು ನೂತನ ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ನೂತನ ಜಿಲ್ಲಾಧಿಕಾರಿಗೆ ಗಿಡ ನೀಡಿ ಸ್ವಾಗತಿಸಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ ಮಾತನಾಡಿ, ಕಳೆದ ೨೦ ವರ್ಷಗಳಲ್ಲಿ ಹಲವು ಜಿಲ್ಲಾಧಿಕಾರಿಗಳು, ಸರ್ಕಾರಗಳು ಹಾಗೂ ಜನಪ್ರತಿನಿಧಿಗಳು ಬದಲಾಗಿದ್ದರೂ, ಲಕ್ಷಾಂತರ ರೈತ ಕುಟುಂಬಗಳ ಜೀವನಾಡಿಯಾಗಿರುವ ಟೊಮೇಟೊ ಮಾರುಕಟ್ಟೆ ಅಭಿವೃದ್ಧಿಗೆ ಅಗತ್ಯವಾದ ೧೦೦ ಎಕರೆ ಸರ್ಕಾರಿ ಜಮೀನು ಮಂಜೂರು ಮಾಡುವಲ್ಲಿ ಸರ್ಕಾರ ಹಾಗೂ ಕಂದಾಯ ಇಲಾಖೆಗೆ ಇಚ್ಛಾಶಕ್ತಿ ಕೊರತೆಯಿದೆ ಎಂದು ಆರೋಪಿಸಿದರು.ದೇಶದಲ್ಲೇ ಎರಡನೇ ಅತಿ ದೊಡ್ಡ ಟೊಮೇಟೊ ಮಾರುಕಟ್ಟೆಯಾಗಿ ಗುರುತಿಸಿಕೊಂಡಿರುವ ಕೋಲಾರ ಮಾರುಕಟ್ಟೆಯಿಂದ ದೇಶ-ವಿದೇಶಗಳಿಗೆ ಟೊಮೇಟೊ ರಫ್ತು ಆಗುತ್ತಿದೆ. ಆದರೂ ಜಾಗದ ಕೊರತೆಯಿಂದ ರೈತರು, ವ್ಯಾಪಾರಿಗಳು ಹಾಗೂ ಕಾರ್ಮಿಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಈಗಾಗಲೇ ಕಲ್ಲಂಡೂರು ಹಾಗೂ ಆನೇಪುರದ ಗೋಮಾಳದಲ್ಲಿ ಗುರುತಿಸಿರುವ ೧೦೦ ಎಕರೆ ಜಮೀನಿನ ಕಡತ ಸರ್ಕಾರದ ಮಟ್ಟದಲ್ಲಿದ್ದು, ಅದನ್ನು ಶೀಘ್ರ ವಿಲೇವಾರಿ ಮಾಡಲು ವಿಶೇಷ ತಂಡ ರಚಿಸಬೇಕು ಎಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ನೂತನ ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್ ಮಾತನಾಡಿ, ನಾನು ಸಹ ಕೃಷಿ ಹಿನ್ನೆಲೆಯ ಜಿಲ್ಲೆಯವನಾಗಿದ್ದು, ರೈತರ ಸಮಸ್ಯೆಗಳನ್ನು ಅರಿತಿದ್ದೇನೆ. ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಮಾಹಿತಿ ಪಡೆದು ಹಂತ ಹಂತವಾಗಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.