ನರೇಗಾದ ಕೂಲಿ ಕಾರ್ಮಿಕರ ಬಾಕಿ ವೇತನಕ್ಕೆ ಆಗ್ರಹ

KannadaprabhaNewsNetwork |  
Published : Jun 06, 2025, 01:37 AM IST
4ಡಿಡಬ್ಲೂಡಿ2ನರೇಗಾ ಯೋಜನೆಯಡಿ ಕೆಲಸ ಮಾಡಿದ ಕೂಲಿ ಕಾರ್ಮಿಕರ ಬಾಕಿ ವೇತನ ಬಿಡುಗಡೆಗೊಳಿಸಲು ಒತ್ತಾಯಿಸಿ ಬುಧವಾರ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಯಿತು. | Kannada Prabha

ಸಾರಾಂಶ

ಪ್ರತಿವರ್ಷ ನರೇಗಾ ಕೆಲಸ ಮಾಡಿದ 5 ರಿಂದ 10 ದಿನಗಳಲ್ಲಿ ಕೂಲಿ ಹಣ ಪಾವತಿಯಾಗುತ್ತಿತ್ತು. ಆದರೆ, ಈ ವರ್ಷ ಇದಕ್ಕೆ ವಿರುದ್ಧವೆಂಬಂತೆ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವರ್ಷ ಜಿಲ್ಲೆಯಲ್ಲಿನ ಕೂಲಿ ಕಾರ್ಮಿಕರು ಸಾಕಷ್ಟು ಕಷ್ಟದಲ್ಲಿದ್ದಾರೆ.

ಧಾರವಾಡ: ನರೇಗಾ ಯೋಜನೆಯಡಿ ಕೆಲಸ ಮಾಡಿದ ಕೂಲಿ ಕಾರ್ಮಿಕರ ಬಾಕಿ ವೇತನ ಬಿಡುಗಡೆಗೊಳಿಸಲು ಒತ್ತಾಯಿಸಿ ಬುಧವಾರ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಜಿಲ್ಲಾಧ್ಯಕ್ಷೆ ದೀಪಾ ಧಾರವಾಡ ಮಾತನಾಡಿ, ಪ್ರತಿವರ್ಷ ನರೇಗಾ ಕೆಲಸ ಮಾಡಿದ 5 ರಿಂದ 10 ದಿನಗಳಲ್ಲಿ ಕೂಲಿ ಹಣ ಪಾವತಿಯಾಗುತ್ತಿತ್ತು. ಆದರೆ, ಈ ವರ್ಷ ಇದಕ್ಕೆ ವಿರುದ್ಧವೆಂಬಂತೆ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವರ್ಷ ಜಿಲ್ಲೆಯಲ್ಲಿನ ಕೂಲಿ ಕಾರ್ಮಿಕರು ಸಾಕಷ್ಟು ಕಷ್ಟದಲ್ಲಿದ್ದಾರೆ, ಮೆಣಸಿನಕಾಯಿ ಬೆಳಗಾರರೂ ಮತ್ತು ಭತ್ತ ಬೆಳೆಗಾರರು ತಾವು ಈ ಬಾರಿ ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ತುಂಬಾ ನಷ್ಟ ಅನುಭವಿಸಿದ್ದಾರೆ ಎಂದರು.

ಈ ಭಾಗದಲ್ಲಿ ಜನರಿಗೆ ದೊರೆಯುವ ನರೇಗಾ ಕೆಲಸದ ಆಧಾರದ ಮೇಲೆ ಇಲ್ಲಿನ ಜನ ಗುಳೆ ಹೋಗುವುದನ್ನು ನಿಲ್ಲಿಸಿದ್ದಾರೆ. ಆದರೆ, ಈ ಯೋಜನೆಯಲ್ಲಿ ಈಗ ಕೆಲಸ ಮಾಡಿ, ಎರಡು ತಿಂಗಳು ಕಳೆದರೂ ಸಹ ಅವರಿಗೆ ದೊರೆಯಬೇಕಿದ್ದ ಕೂಲಿಯು ಇನ್ನು ದೊರೆತಿಲ್ಲ. ಅವರನ್ನು ಮತ್ತು ಅವರ ಕುಟುಂಬವನ್ನು ಸಂಕಷ್ಟಕ್ಕೆ ನೂಕಿದಂತಾಗಿದೆ. ಇಂದಿನ ದಿನಮಾನಗಳಲ್ಲಿ ಅಡುಗೆ ಎಣ್ಣೆ, ಬೆಳೆ-ಕಾಳುಗಳು, ಗ್ಯಾಸ್, ಪೆಟ್ರೋಲ್, ಡೀಸೆಲ್ ಸೇರಿದಂತೆ ಹಲವಾರು ಜೀವನಾವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರುತ್ತಿದ್ದು, ಈಗ ಅವರು ಜೀವನ ನಡೆಸಲು ಕೂಡಲೇ ಅವರಿಗೆ ಹಣದ ಅವಶ್ಯಕತೆ ಇದೆ. ಆದ್ದರಿಂದ ಕೂಲಿ ಕಾರ್ಮಿಕರ ಹಿತ ದೃಷ್ಟಿಯಿಂದ ಕೂಡಲೇ ಇವರ ಬಾಕಿ ಇರುವ ವೇತನ ಬಿಡುಗಡೆಗೊಳಿಸಬೇಕು ಎಂದರು.

ಜಿಲ್ಲಾ ಕಾರ್ಯದರ್ಶಿ ಶರಣು ಗೋನವಾರ ಮಾತನಾಡಿ, ವೇತನ ನೀಡದೇ ಇರುವುದು ಕೂಲಿ ಕಾರ್ಮಿಕರ ಬದುಕಿಗೆ ತೊಂದರೆಯಾಗಿದೆ. ಜತೆಗೆ ಈ ಯೋಜನೆಯಡಿ ಸಿಗಬೇಕಾಗಿದ್ದ 100 ದಿನದ ಕೆಲಸ ಮತ್ತು ಪೂರ್ಣ ಕೂಲಿ ₹370ಗಳು ದೊರೆಯದೆ ಹೋಗಬಹುದು ಎಂಬ ಆತಂಕವೂ ಕಾರ್ಮಿಕರದ್ದಾಗಿದೆ. ಕೆಲವು ಪಂಚಾಯಿತಿಗಳಲ್ಲಿ ನಿರಂತರವಾಗಿ ಕೆಲಸ ನೀಡುವ ಕಾರ್ಯವು ಆಮೆಗತಿಯಲ್ಲಿ ಸಾಗುತ್ತಿದೆ ಎಂದರು.

ಪ್ರತಿಭಟನೆ ಅಧ್ಯಕ್ಷತೆಯನ್ನು ಬಾಳೇಶ ಬೋಗೆನ್ನವರ ವಹಿಸಿದ್ದರು. ಈ ಸಂದರ್ಭದಲ್ಲಿ ರಾಣಪ್ಪ ಸಾವಂತನವರ, ಮಾರತಿ ಪೂಜಾರ , ವಿಜಯಲಕ್ಷ್ಮಿ ನಿಕ್ಕಂ, ಹನುಮವ್ವ, ಗಂಗಾಧರ ಜಾಧವ್ ಮುಂತಾದವರು ಇದ್ದರು.

PREV

Recommended Stories

ನನ್ನ ಬಗ್ಗೆ ಮಾತನಾಡುವವರಿಗೆ ಸಿಗಂದೂರು ಚೌಡೇಶ್ವರಿ ತಕ್ಕ ಬುದ್ಧಿ ಕಲಿಸಲಿದ್ದಾಳೆ : ಮಧು ಬಂಗಾರಪ್ಪ
ಡಾ.ಪ್ರಭಾಕರ್‌ ಕೋರೆ 78ನೇ ಜನ್ಮದಿನ ಅರ್ಥಪೂರ್ಣ ಆಚರಣೆ