ಕನ್ನಡಪ್ರಭ ವಾರ್ತೆ ಮದ್ದೂರು
ಮಳೆ ನಡುವೆಯೂ ಗ್ರಾಮಸ್ಥರು ಶವವನ್ನು ತಾಲೂಕು ಕಚೇರಿಗೆ ತಂದು ಧರಣಿ ನಡೆಸಲು ಮುಂದಾದರು. ಈ ವೇಳೆ ಎಚ್ಚೆತ್ತ ಅಧಿಕಾರಿಗಳು ಕಚೇರಿ ಪ್ರವೇಶ ದ್ವಾರದ ಎಲ್ಲಾ ಗೇಟ್ ಬಂದ್ ಮಾಡಿ ನಿರ್ಬಂಧ ವಿದಿಸಿದರು.
ಈ ವೇಳೆ ಪ್ರತಿಭಟನಾಕಾರರು ಕಚೇರಿ ಮುಂಭಾಗದ ಬೆಂಗಳೂರು- ಮೈಸೂರು ಹೆದ್ದಾರಿ ಸರ್ವೀಸ್ ರಸ್ತೆಯಲ್ಲಿ ಶವವಿಟ್ಟು ಪ್ರತಿಭಟಿಸಿ ಇಲ್ಲೇ ಶವವನ್ನು ಅಂತ್ಯಸಂಸ್ಕಾರ ಮಾಡುವುದಾಗಿ ಎಚ್ಚರಿಸಿದರು.ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಪರಶುರಾಮ್ ಸತ್ತೀಗೇರಿ ನಡುವೆ ಪ್ರತಿಭಟನಾಕಾರರ ಮಾತಿನ ಚಕಮಕಿ ನಡೆಸಿದರು. ನಂತರ ಮಧ್ಯ ಪ್ರವೇಶ ಮಾಡಿದ ಪೊಲೀಸರು ಸಮಾಧಾನ ಪಡಿಸಿದರು.
ಗ್ರಾಮದ ಮುಖಂಡರು ಮಾತನಾಡಿ, ನಮ್ಮ ಪೂರ್ವಜರ ಕಾಲದಿಂದಲೂ ನಾವು ಸರ್ವೇ ನಂ 203ರ ಗೋಮಾಳದ ಜಾಗದಲ್ಲಿ ಶವ ಸಂಸ್ಕಾರದ ಪ್ರಕ್ರಿಯೆ ನಡೆಸುತ್ತಿದ್ದೇವೆ. ಆದರೆ, ಈಗ ನಾಗರಾಜ್ ಎನ್ನುವ ವ್ಯಕ್ತಿ ಈ ಜಮೀನನ್ನು ಸರ್ಕಾರ ನಮಗೆ ಮಂಜೂರು ಮಾಡಿಕೊಟ್ಟಿದೆ ಎಂದು ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ದೂರಿದರು.
ನಾವು ಈ ಜಮೀನು ಬಿಟ್ಟು ಬೇರೆ ಕಡೆ ಅಂತ್ಯ ಸಂಸ್ಕಾರ ಮಾಡುವುದಿಲ್ಲ. ಹೀಗಾಗಿ ತಾಲೂಕು ಆಡಳಿತ ನಮಗೆ ಸ್ಮಶಾನ ಭೂಮಿ ನೀಡಬೇಕು. ಇಲ್ಲದಿದ್ದರೆ ಇಲ್ಲಿಯೇ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದರು.ನಂತರ ಎಸಿ ಶಿವಮೂರ್ತಿ, ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರು ಗ್ರಾಮಸ್ಥರ ಮನವಿ ಆಲಿಸಿ ಈಗಾಗಲೇ ಈ ಜಮೀನು ವಿಚಾರವಾಗಿ ಉಪ ವಿಭಾಗಾಧಿಕಾರಿ ನ್ಯಾಯಾಲಯದಲ್ಲಿ ಪ್ರಕರಣಕ್ಕೆ ತೀರ್ಪು ನೀಡಲಾಗಿದೆ. ಆದರೆ, ನಾಗರಾಜ್ ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಯುತ್ತಿರುವುದರಿಂದ ತೀರ್ಪು ಬರುವವರೆಗೂ ನಾವು ಯಾವುದೇ ತೀರ್ಮಾನ ಕೈಗೊಳ್ಳಲಾಗುವುದಿಲ್ಲ. ಯಾರ ಪರ ತೀರ್ಪು ಬರುತ್ತದೆಯೋ ಅವರಿಗೆ ಜಮೀನು ಹಸ್ತಾಂತರ ಮಾಡಲಾಗುವುದು ಎಂದು ಗ್ರಾಮಸ್ಥರನ್ನು ಮನವೊಲಿಸಿದ ಬಳಿಕ ಗ್ರಾಮಸ್ಥರು ಶವವನ್ನು ಗೆಜ್ಜಲಗೆರೆ ಬಳಿಯ ವಿ.ಸಿ.ಕಾಲುವೆ ದಡದಲ್ಲಿ ರಾತ್ರಿ 11 ಗಂಟೆ ವೇಳೆಗೆ ಅಂತ್ಯ ಸಂಸ್ಕಾರ ನಡೆಸಿದರು.
ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಗ್ರಾಮಾಂತರ ಇನ್ಸ್ ಪೆಕ್ಟರ್ ವೆಂಕಟೇಗೌಡ ಅವರ ನೇತೃತ್ವದಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.