ಕನ್ನಡಪ್ರಭ ವಾರ್ತೆ ಮಂಡ್ಯ
ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಸೇರಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಿದರು. ತಾಲೂಕಿನ ಬಿ.ಹಟ್ನ ಗ್ರಾಮದ ರೈತ ದಂಪತಿ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಮೀಸೆ ಪುಟ್ಟಸ್ವಾಮಿ, ಪಾಂಡವಪುರ ತಾಲೂಕಿನ ಮಂಡಿಬೆಟ್ಟಹಳ್ಳಿಯ ಎಂ.ಎಸ್.ಮಂಜುನಾಥ್ ಸೇರಿದಂತೆ ಹಲವರು ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದರು.
ರಾಜಕೀಯ ಲಾಭಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಂಡ ನಂತರ ಅವರ ಮನೆಗೆ ಹೋಗಿ ಮೊಸಳೆ ಕಣ್ಣೀರು ಸುರಿಸುವುದು ಪರಿಹಾರವಲ್ಲ. ರೈತ ಮತ್ತು ಕೂಲಿಕಾರನ ಬದುಕು ಉತ್ತಮವಾಗಬೇಕು. ಅವರು ಸತ್ತಂತೆ ಬದುಕುತ್ತಿದ್ದಾರೆ. ಅವರ ಜೀವನವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಆತ್ಮಹತ್ಯೆ ಮಾಡಿಕೊಂಡ ನಾಲ್ವರು ರೈತರ ಕುಟುಂಬಗಳಿಗೆ ತಕ್ಷಣ ತಲಾ ೨೫ ಲಕ್ಷ ರುಪಾಯಿ ಪರಿಹಾರ ನೀಡಬೇಕು. ರಾಜ್ಯದ ಎಲ್ಲಾ ರೈತರ ಬ್ಯಾಂಕ್ ಸಾಲ, ಸಹಕಾರ ಸಂಘಗಳ ಸಾಲ, ಮೈಕ್ರೋ ಫೈನಾನ್ಸ್ ಸಾಲ ಮತ್ತು ಕೈಸಾಲ ಸೇರಿದಂತೆ ಎಲ್ಲಾ ರೀತಿಯ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು. ಈಗಾಗಲೇ ಆತ್ಮಹತ್ಯೆ ಮಾಡಿಕೊಂಡು ಪರಿಹಾರಕ್ಕೆ ಅರ್ಜಿ ಸಲ್ಲಿಸಿರುವ ಎಲ್ಲಾ ರೈತ ಕುಟುಂಬಗಳಿಗೆ ಬಾಕಿ ಇರುವ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕು.ಜೊತೆಗೆ ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ವರದಿಯಂತೆ ಎಲ್ಲಾ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಂಬಲ ಬೆಲೆಯನ್ನು ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.