ಕನ್ನಡಪ್ರಭ ವಾರ್ತೆ ಹಿರಿಯೂರು
ಬೆಂಗಳೂರಿನಲ್ಲಿ ಸಾರಿಗೆ ಸಚಿವರನ್ನು ಭೇಟಿ ಮಾಡಿದ ಸಚಿವ ಡಿ.ಸುಧಾಕರ್ ಅವರು
ಹಿರಿಯೂರು ನಗರ ಬಸ್ ನಿಲ್ದಾಣದ 4 ವಿಭಾಗಗಳಿಂದ ಸುಮಾರು 800ಕ್ಕೂ ಹೆಚ್ಚು ಬಸ್ಸುಗಳು ಸಂಚಾರ ಮಾಡುತ್ತಿದ್ದು ಸರ್ಕಾರದ ಶಕ್ತಿ ಯೋಜನೆ ಜಾರಿಗೆ ಬಂದ ನಂತರ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಆದರೆ ರಾತ್ರಿ 7 ಗಂಟೆಯ ನಂತರ ಹಲವು ಬಸ್ಸುಗಳು ಹಿರಿಯೂರು ನಗರದ ಬಸ್ ನಿಲ್ದಾಣದ ಒಳಗೆ ಪ್ರವೇಶಿಸದೇ ಬೈಪಾಸ್ ಮೂಲಕ ಸಂಚರಿಸುತ್ತಿರುವುದರಿಂದ ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತಿದೆ. ಸಂಜೆ 7 ಗಂಟೆಯ ನಂತರ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಹೊರಟು ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಯ ಮುಖಾಂತರ ಸಂಚರಿಸುವ ಬಸ್ಸುಗಳು ಹಿರಿಯೂರು ನಗರದ ಒಳಗೆ ಬರದೇ ಬೈಪಾಸ್ ಮೂಲಕ ಹೋಗುವ ಬಗ್ಗೆ ಈಗಾಗಲೇ ಸಾಕಷ್ಟು ದೂರುಗಳು ಬಂದಿವೆ. ಪ್ರಯಾಣಿಕರ ಹಿತದೃಷ್ಟಿಯಿಂದ ಎಲ್ಲಾ ಬಸ್ಸುಗಳು ಹಿರಿಯೂರು ನಗರದ ಒಳಗೆ ಕಡ್ಡಾಯವಾಗಿ ಸಂಚರಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.ಜಿಲ್ಲಾ ಉಸ್ತುವಾರಿ ಸಚಿವರ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವರು ಈ ವಿಷಯವನ್ನು ತುರ್ತಾಗಿ ಗಮನಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.