ರೈತರ ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕು ಎಂದು ಆಗ್ರಹಿಸಿ ರೈತ ಸಂಘ ಹಾಗೂ ಕಬ್ಬು ಬೆಳೆಗಾರರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು
ಕನ್ನಡಪ್ರಭ ವಾರ್ತೆ ಜಮಖಂಡಿ
ರೈತರ ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕು ಎಂದು ಆಗ್ರಹಿಸಿ ರೈತ ಸಂಘ ಹಾಗೂ ಕಬ್ಬು ಬೆಳೆಗಾರರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.ರೈತ ಸಂಘದ ಮುಖಂಡ ಹಣಮಂತ ಮಗದುಮ ಮಾತನಾಡಿ, ರೈತರು ಹಲವು ಸಮಸ್ಯೆಗಳಲ್ಲಿ ಸಿಲುಕಿ ಪರದಾಡುತ್ತಿದ್ದಾರೆ. ನೀರಾವರಿ, ಮಾರುಕಟ್ಟೆ, ಬೆಲೆ ಕುಸಿತ, ಕಡಿಮೆ ಇಳುವರಿ, ಮುಂತಾದ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಜಾರಿಗೆ ತಂದಿದೆ. ಕನಿಷ್ಠ ಬೆಂಬಲ ಬೆಲೆಯನ್ನು ಎಲ್ಲಾ ಬೆಳೆಗಳಿಗೆ ವಿಸ್ತರಿಸಬೇಕು. ಕೃಷಿ ಉತ್ಪಾದನೆ ಹೆಚ್ಚಿದಾಗ ಬೆಲೆ ತೀವ್ರವಾಗಿ ಕುಸಿದು ಹೋಗುತ್ತದೆ. ಇಳುವರಿ ಬಂದರೂ ಬೆಲೆ ಸಿಗದ ಕಾರಣ ರೈತರ ಆದಾಯ ಹೆಚ್ಚುತ್ತಿಲ್ಲ. ರೈತರಿಗೆ ಸರಿಯಾದ ಮಾರುಕಟ್ಟೆ ಸೌಲಭ್ಯಗಳಿಲ್ಲ. ಬೆಂಬಲ ಬೆಲೆ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರ ಹಿಸಿ ರೈತ ಸಂಘಟನೆಯ ಕೇಂದ್ರದ ಮುಖಂಡ ಜಗದೀಶಸಿಂಗ ಲೈವಾಲಾ ದೆಹಲಿಯಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದು ಅವರನ್ನು ಬೆಂಬಲಿಸಿ ನಗರದಲ್ಲಿ ಪ್ರತಿಭಟನೆ ಕೈಗೊಂಡಿದ್ದಾಗಿ ತಿಳಿಸಿದರು.
ಶೇ.60ರಷ್ಟು ಜನರು ಕೃಷಿಯನ್ನು ಅವಲಂಬಿಸಿದ್ದು, ಕೃಷಿಕರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಬೇಕು. ಕೇವಲ ಭಾಷಣಗಳಲ್ಲಿ ರೈತರನ್ನು ಹೊಗಳಿ ಅಟ್ಟಕ್ಕೇರಿಸಲಾಗುತ್ತಿದೆ. ಸೂಕ್ತ ಪರಿಹಾರ ಒದಗಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದರು. ರೈತರು ಬೆಳೆದ ಎಲ್ಲಾ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಬೇಕು, ಅದಕ್ಕಾಗಿ ಸೂಕ್ತ ಕಾನೂನು ರೂಪಿಸಬೇಕು. ರೈತರ ಸಾಲ ಮನ್ನಾಮಾಡಬೇಕು. ದೆಹಲಿಯಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತರ ಜತೆ ಕೇಂದ್ರ ಸರ್ಕಾರ ಮಾತುಕತೆ ನಡೆಸಿ ಸಮಸ್ಯೆಗೆ ಪರಿಹಾರ ಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಶ್ರೀಶೈಲ ಭೂಮಾರ, ಕಲ್ಲಪ್ಪ ಬಿರಾದಾರ, ಕರೆಪ್ಪಜಗದಾಳ, ನಾಗು ಗುಡಿ, ಪೈಗಂಬರ ಮೋಮಿನ, ಮಲ್ಲಪ್ಪತಳವಾರ, ಸಿದ್ದಪ್ಪಕುಳಲಿ, ಮುಂತಾದವರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.