ಒಳ ಮೀಸಲಾತಿ ನೀಡಲು ಆಗ್ರಹ

KannadaprabhaNewsNetwork |  
Published : Jul 27, 2025, 12:01 AM IST
ಫೋಟೊ ಶೀರ್ಷಿಕೆ: 26ಹೆಚ್‌ವಿಆರ್1ಡಿ.ಎಸ್.ಮಾಳಗಿ | Kannada Prabha

ಸಾರಾಂಶ

ಇದುವರೆಗೂ ಯಾವ ಸಿಎಂಗಳು ಮಾಡದ ಕೆಲಸ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಅಧಿಕಾರವಧಿಯಲ್ಲಿ ಎಲ್ಲ ಸಚಿವ ಸಂಪುಟದ ಒಪ್ಪಿಗೆ ಪಡೆದು, ಕೇಂದ್ರ ಸರ್ಕಾರಕ್ಕೆ ಒಳ ಮೀಸಲಾತಿ ಜಾರಿಗೊಳಿಸಲು ಶಿಫಾರಸ್ಸು ಮಾಡಿದ್ದರು

ಹಾವೇರಿ: ಪರಿಶಿಷ್ಟ ಜಾತಿಯ ಮಾದಾರ, ಸಮಗಾರ, ಡೊಹರ, ಮಚಗಾರ ಸಮುದಾಯದವರಿಗೆ ಒಳ ಮೀಸಲಾತಿ ನೀಡುವಂತೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡುವ ಉದ್ದೇಶದಿಂದ ಆ. 1ರಂದು ಜಿಲ್ಲಾಡಳಿತ ಭವನದ ಎದುರು ಶಾಂತಿಯುತ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗುವುದು ಎಂದು ಲಿಡ್ಕರ ನಿಗಮದ ಮಾಜಿ ಉಪಾಧ್ಯಕ್ಷ ಡಿ.ಎಸ್. ಮಾಳಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿವೃತ್ತ ನ್ಯಾ.ಎ.ಜೆ ಸದಾಶಿವ ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಸೇರಿರುವ ಶೇ.15 ಮೀಸಲಾತಿಯಲ್ಲಿ 101 ಜಾತಿಗಳ ಆರ್ಥಿಕ, ಶೈಕ್ಷಣಿಕ, ಉದ್ಯೋಗ,ರಾಜಕೀಯ, ಸಾಮಾಜಿಕ ಬಗ್ಗೆ ಸಮಗ್ರ ಅಧ್ಯಯನ ಮಾಡಿದ್ದು, ಇದರಲ್ಲಿ ಎಡಗೈ ಸಮುದಾಯದ ಮಾದಾರ, ಸಮಗಾರ, ಡೊಹರ, ಮಚಗಾರ ಸಮಾಜದ ಜನಸಂಖ್ಯೆಯ ಆಧಾರದಲ್ಲಿ ಶೇ.6 ಮೀಸಲು ನಿಗದಿಪಡಿಸಿ ವರದಿ ಸಲ್ಲಿಸಿದ್ದಾರೆ. ಇದುವರೆಗೂ ಯಾವ ಸಿಎಂಗಳು ಮಾಡದ ಕೆಲಸ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಅಧಿಕಾರವಧಿಯಲ್ಲಿ ಎಲ್ಲ ಸಚಿವ ಸಂಪುಟದ ಒಪ್ಪಿಗೆ ಪಡೆದು, ಕೇಂದ್ರ ಸರ್ಕಾರಕ್ಕೆ ಒಳ ಮೀಸಲಾತಿ ಜಾರಿಗೊಳಿಸಲು ಶಿಫಾರಸ್ಸು ಮಾಡಿದ್ದರು ಎಂದರು.

ಬದಲಾದ ಕಾಲಘಟ್ಟದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿತು. ಕಳೆದ 2024 ಆ. 1ರಂದು ಸುಪ್ರೀಂಕೋರ್ಟಿನ ಸಂವಿಧಾನ ಪೀಠ ಒಳಮೀಸಲಾತಿ ಜಾರಿ ಮಾಡುವ ಅಧಿಕಾರ ರಾಜ್ಯಗಳಿಗೆ ಕೊಡುವ ಐತಿಹಾಸಿಕ ತೀರ್ಪು ಪ್ರಕಟಿಸಿತು. ಈ ತೀರ್ಪು ಬಂದು ವರ್ಷವಾಗಿದ್ದು, ಒಳಮೀಸಲಾತಿ ಮಾಡುವುದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಅಸ್ಪೃಶ್ಯರಲ್ಲಿ ಅಸ್ಪೃಶ್ಯರಾದ ಎಡಗೈ ಸಮಾಜದವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆ. 15ರೊಳಗಾಗಿ ಅಂತಃಕರಣ ಮನಸ್ಸಿನಿಂದ ಒಳಮೀಸಲಾತಿ ಜಾರಿಗೊಳಿಸಬೇಕು. ಇಲ್ಲದಿದ್ದರೇ ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ. ಇದಕ್ಕೂ ಪೂರ್ವದಲ್ಲಿ ಆ. 1ರಂದು ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗುವುದು. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದವರು ಭಾಗವಹಿಸಬೇಕು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಉಡಚಪ್ಪ ಮಾಳಗಿ, ಹೊನ್ನೇಶ್ವರ ತಗಡಿನಮನಿ, ಅಶೋಕ ಮರೆಣ್ಣನವರ, ಮಾಲತೇಶ ಯಲ್ಲಾಪುರ, ಸುಭಾಸ ಬೆಂಗಳೂರ, ಮಲ್ಲೇಶ ಕಡಕೋಳ, ತಿರಕಪ್ಪ ಚಿಕ್ಕೇರಿ, ಮಾರುತಿ ಬಣಕಾರ ಸೇರಿದಂತೆ ಇತರರು ಇದ್ದರು.

PREV

Recommended Stories

ಕಾರ್ಮಿಕರು ಒಪ್ಪಿದ್ರೆ 10 ಗಂಟೆ ಕೆಲಸಕ್ಕೆ ಓಕೆ : ಲಾಡ್‌
‘ಸಾವಿರಾರು ಶವ ಹೂಳಲು ಧರ್ಮಸ್ಥಳ ಗ್ರಾಮದಲ್ಲಿ ಮಹಾಭಾರತ ಯುದ್ಧ ನಡೆದಿಲ್ಲ’