ಹಳಿಯಾಳ: ರಾಜ್ಯ ಸರ್ಕಾರ 7ನೇ ವೇತನ ಆಯೋಗದ ವರದಿ ಸೇರಿದಂತೆ ಹಳೆ ಪಿಂಚಣೆ ಯೋಜನೆಯನ್ನು ಮರು ಜಾರಿಗೊಳಿಸಬೇಕು ಮತ್ತು ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಟಾನಗೊಳಿಸಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘದ ಹಳಿಯಾಳ ತಾಲೂಕು ಘಟಕವು ಸರ್ಕಾರವನ್ನು ಆಗ್ರಹಿಸಿದೆ.
ಬೇಡಿಕೆಗಳು:ರಾಜ್ಯ 7ನೇ ವೇತನ ಆಯೋಗದಿಂದ ಶೀಘ್ರ ವರದಿ ಪಡೆದು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಷ್ಕರಿಸಿ ಆದೇಶ ಹೊರಡಿಸಬೇಕು. ಸರ್ಕಾರ ರಾಜ್ಯ 7ನೇ ವೇತನ ಆಯೋಗದಿಂದ ಶೀಘ್ರವಾಗಿ ವರದಿ ಪಡೆದು ಈಗಾಗಲೇ ನೀಡಿರುವ 17% ಮಧ್ಯಂತರ ಪರಿಹಾರ ಭತ್ಯೆಯು ಸೇರಿದಂತೆ 40% ಫಿಟ್ಮೆಂಟ್ ಸೌಲಭ್ಯ ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕೊಳ್ಳಪಡುವ ನೌಕರರಿಗೆ ದಿ 1-7-2022ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಬೇಕು
ಹಳೇ ಪಿಂಚಣಿ ಯೋಜನೆ ಮರು ಜಾರಿಗೊಳಿಸಿ. ರಾಜ್ಯದ ಎನ್.ಪಿ.ಎಸ್ ನೌಕರರ ವೇತನ ನಿರ್ವಹಣೆ ಹಾಗೂ ಸಂಧ್ಯಾ ಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್ ನೌಕರರನ್ನು ಓ.ಪಿ.ಎಸ್ ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಈಗಾಗಲೇ ಪಂಜಾಬ್, ರಾಜಸ್ಥಾನ, ಛತ್ತಿಸಘಡ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೇ ಪಿಂಚಣಿ ಯೋಜನೆ ಜಾರಿಗೆ ತಂದಿರುವಂತೆ ಹಾಗೂ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ರಾಜ್ಯದಲ್ಲೂ ಸಹ ಎನ್.ಪಿ.ಎಸ್ ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಬೇಕು.ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಭಿತ ಕುಟುಂಬ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (ಕೆ.ಎ.ಎಸ್.ಎಸ್)ಯನ್ನು ಕೂಡಲೇ ಜಾರಿಗೊಳಿಸಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.