ಬಳ್ಳಾರಿ: ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷಾ ವರದಿಯನ್ನು ಬಿಡುಗಡೆಗೊಳಿಸುವಂತೆ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಕಳಿಸಿಕೊಟ್ಟರು.
ಜಾತಿಗಣತಿಯನ್ನು ಬಿಡುಗಡೆಗೊಳಿಸಲು ರಾಜ್ಯ ಸರ್ಕಾರ ಮೀನಾಮೇಶ ಎಣಿಸುವ ಅಗತ್ಯವಿಲ್ಲ. ಸುಮಾರು ₹159 ಕೋಟಿ ಖರ್ಚು ಮಾಡಿ ತಯಾರಿಸಿರುವ ಈ ವರದಿಯು ತಕ್ಷಣ ಫಲಪ್ರದ ಆಗಬೇಕು ಎಂದು ಒಕ್ಕೂಟದ ಸದಸ್ಯರು ಒತ್ತಾಯಿಸಿದರು.ಸಾಮಾಜಿಕ ನ್ಯಾಯದ ಪರವಾಗಿರುವ ಕರ್ನಾಟಕ ಈಗ ಜಾತಿ ಜನಗಣತಿ ಅಥವಾ ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ಸಮೀಕ್ಷಾವರದಿಯನ್ನು ತಯಾರಿಸಿರುವುದು ಇಡೀ ದೇಶಕ್ಕೆ ಮಾದರಿಯಾಗಿದೆ.
ರಾಜ್ಯದ ಜನಸಂಖ್ಯೆಯ ಮುಕ್ಕಾಲು ಭಾಗಕ್ಕೂ ಜಾಸ್ತಿ ಇರುವ ಅಹಿಂದ ವರ್ಗಗಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧ್ಯ, ಉದ್ಯೋಗದ ಅವಕಾಶಗಳು ಮತ್ತು ವಿದ್ಯಾಭ್ಯಾಸದ ಅವಕಾಶಗಳು ಲಭಿಸಿಲ್ಲ. ಅಹಿಂದ ವರ್ಗಗಗಳಲ್ಲಿ ಅರಿವು ಮತ್ತು ಸಂಘಟನೆಯ ಕೊರತೆಯ ಕಾರಣಕ್ಕಾಗಿ ಅವಕಾಶಗಳು ಸಿಕ್ಕಿಲ್ಲ ಎನ್ನುವುದರ ಜೊತೆಗೆ ನಿರ್ಧಿಷ್ಟವಾಗಿ ಅವರ ಜನಸಂಖ್ಯಾ ಪರಿಸ್ಥಿತಿ ಗೊತ್ತಿಲ್ಲದಿರುವುದು ಪ್ರಮುಖ ಕಾರಣವಾಗಿದೆ. ಜಾತಿ ಜನಗಣತಿಯ ವರದಿ ಬಂದರೆ ಜಾತಿಗಳ ವಸ್ತುಸ್ಥಿತಿ ತಿಳಿಯಲಿದೆ. ಅದಕ್ಕೆ ಪೂರಕವಾಗಿ ಸರ್ಕಾರಗಳು ಕಾರ್ಯಕ್ರಮಗಳನ್ನು ರೂಪಿಸಬಹುದಾಗಿದೆ. ರಾಜ್ಯದ ಸುಮಾರು ಆರೂವರೆ ಕೋಟಿ ಜನಸಂಖ್ಯೆಯ ಅಧ್ಯಯನವಾಗಿರುವುದರಿಂದ ಜಾತಿ ಜನಗಣತಿಯನ್ನು ಸರ್ಕಾರ ಒಪ್ಪಿಕೊಳ್ಳುವುದರಿಂದ ಎಲ್ಲಾ ಜಾತಿಗಳಿಗೂ ಒಂದಲ್ಲ ಒಂದು ರೀತಿಯಲ್ಲಿ ಅನುಕೂಲ ಆಗಲಿದೆ. ಹಾಗಾಗಿ ಎಲ್ಲಾ ಜಾತಿಗಳು ಕೂಡ ಜಾತಿ ಜನಗಣತಿ ವರದಿ ಬಿಡುಗಡೆಗೆ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಹೇಳಿದರು.ಒಕ್ಕೂಟದ ಜಿಲ್ಲಾಧ್ಯಕ್ಷ ಡಾ. ಗಾದಿಲಿಂಗನಗೌಡ, ಗೌರವಾಧ್ಯಕ್ಷ ಮುಂಡರಗಿ ನಾಗರಾಜ್, ಉಪಾಧ್ಯಕ್ಷ ಹುಮಾಯೂನ್ ಖಾನ್ , ಗೌರವಾಧ್ಯಕ್ಷ ಎ.ಮಾನಯ್ಯ, ಗೌರವಧ್ಯಕ್ಷರಾದ ಪಿ.ಗಾದೆಪ್ಪ, ವಿ.ಎಸ್.ಶಿವಶಂಕರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಂಗನಕಲ್ಲು ವಿಜಯಕುಮಾರ್, ಕೆ ಎರಿಸ್ವಾಮಿ, ತಳವಾರ್ ದುರ್ಗಪ್ಪ, ಜಂಟಿ ಕಾರ್ಯದರ್ಶಿ ಜೋಗಿನ್ ವಿಜಯಕುಮಾರ್, ಚಂದ್ರಶೇಖರ್, ಚಲವಾದಿ ನರಸಪ್ಪ, ಪಿ ಜಗನ್ನಾಥ್, ಕೆರೆಕೊಡಪ್ಪ, ರಾಮುನಾಯಕ್, ಕುಡಿತಿನಿ ರಾಮಾಂಜಿನಿ, ಎಂಎಸ್ ಮಂಜುಳಾ, ಸರಗು ನಾಗರಾಜ್ ಇತರರಿದ್ದರು.ಜಾತಿ ಸಮೀಕ್ಷೆ ಬಿಡುಗಡೆಗೆ ಒತ್ತಾಯಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಕಳಿಸಿಕೊಟ್ಟರು.