ಭಾರತಪ್ರಪಂಚವಿಶೇಷರಾಜಕೀಯಮನರಂಜನೆಅಪರಾಧಕ್ರೀಡೆಕರ್ನಾಟಕಇ- ಪೇಪರ್

ನರೇಗಾ ಹೊರಗುತ್ತಿಗೆ ನೌಕರರ ವೇತನ ಬಿಡುಗಡೆಗೆ ಒತ್ತಾಯ

KannadaprabhaNewsNetwork | Published : Jun 18, 2025 11:48 PM

ಪ್ರಾಮಾಣಿಕವಾಗಿ ದಿನನಿತ್ಯ ದುಡಿದರು ಸ್ವಾಭಿಮಾನದಿಂದ ಬದುಕು ನಡೆಸಲು ಸಾಧ್ಯವಾಗುತ್ತಿಲ್ಲ

ಶಿರಸಿ:ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರ ವೇತನ ಮತ್ತು ಸೇವಾ ಭದ್ರತೆ ನೀಡಲು ಕೇಂದ್ರ ಸರ್ಕಾರದ ಗಮನಕ್ಕೆ ತಂದು, ನೌಕರರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಶಾಸಕ ಭೀಮಣ್ಣ ನಾಯ್ಕಗೆ ಮನವಿ ಸಲ್ಲಿಸಲಾಯಿತು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜಿಪಂ, ತಾಪಂ ಮತ್ತು ಗಾಪಂ ವ್ಯಾಪ್ತಿಯಲ್ಲಿ ವಿವಿಧ ಹುದ್ದೆಯಲ್ಲಿ ೮೩ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಶ್ರಮಿಸುತ್ತಿದ್ದಾರೆ. ಆದರೆ ಈ ಸಿಬ್ಬಂದಿಗೆ ಫೆಬ್ರುವರಿ ೨೦೨೫ರಿಂದ ಇಲ್ಲಿಯವರೆಗೆ ಅನುದಾನ ಕೊರತೆ ಕಾರಣಕ್ಕಾಗಿ ವೇತನ ಪಾವತಿಯಾಗಿರುವುದಿಲ್ಲ. ಇದರಿಂದ ಅವಲಂಬಿತ ಕುಟುಂಬ ಸದಸ್ಯರ ವೈದ್ಯಕೀಯ ವೆಚ್ಚ, ಮಕ್ಕಳ ಶಿಕ್ಷಣ ವೆಚ್ಚ, ಸಾಲ ಮರುಪಾವತಿ, ಮನೆ ಬಾಡಿಗೆ, ದಿನಸಿ ಸಾಮಗ್ರಿ ಖರೀದಿ, ಕಾಮಗಾರಿ ಸ್ಥಳ ವೀಕ್ಷಣೆಗೆ ತೆರಳಲು ಓಡಾಡುವ ಖರ್ಚು ಸೇರಿದಂತೆ ಸಾಕಷ್ಟು ತೊಂದರೆಯನ್ನು ಅನುಭವಿಸುವಂತಾಗಿದೆ. ಪ್ರತಿಯೊಂದಕ್ಕೂ ಬೇರೆಯವರ ಬಳಿ ಸಾಲ ಕೇಳಲು ಕೈ ಒಡ್ಡಬೇಕಾದ ದಯನೀಯ ಸ್ಥಿತಿಯಲ್ಲಿದ್ದು, ಪ್ರಾಮಾಣಿಕವಾಗಿ ದಿನನಿತ್ಯ ದುಡಿದರು ಸ್ವಾಭಿಮಾನದಿಂದ ಬದುಕು ನಡೆಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಈಗಾಗಲೇ ೧೦ ರಿಂದ ೨೦ ವರ್ಷಗಳವರೆಗೆ ಯೋಜನೆಯಲ್ಲಿ ಸಾಕಷ್ಟು ಸಿಬ್ಬಂದಿ ಸೇವೆ ಸಲ್ಲಿಸುತ್ತ ಬಂದಿದ್ದು ಅವರಿಗೆ ಬೇರೆ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ವಯೋಮಿತಿ ಮೀರಿದ್ದು, ಅನಿವಾರ್ಯವಾಗಿ ಈ ಯೋಜನೆಯನ್ನೇ ಅವಲಂಬಿಸಿರುತ್ತಾರೆ. ಇವರ ಅನುಭವ ಮತ್ತು ಬೇರೆ ಉದ್ಯೋಗವನ್ನು ಪಡೆಯಲಾಗದ ಅಸಹಾಯಕತೆಯನ್ನು ಗಮನದಲ್ಲಿಟ್ಟುಕೊಂಡು ಇವರನ್ನು ಅನುಕಂಪದ ಆಧಾರದ ಮೇಲೆ ಈ ಯೋಜನೆಯಡಿ ಖಾಯಂಗೊಳಿಸಲು ಅಗತ್ಯ ಕ್ರಮ ವಹಿಸಬೇಕು ಎಂದರು.

ಯೋಜನೆಯ ಸಫಲತೆಗಾಗಿ ತಳ ಹಂತದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಬಾಕಿ ಇರುವ ಐದು ತಿಂಗಳ ವೇತನ ಪಾವತಿಸಲು ಅಗತ್ಯ ಅನುದಾನವನ್ನು ಕೇಂದ್ರ ಸರ್ಕಾರದಿಂದ ಕೂಡಲೇ ಬಿಡುಗಡೆ ಮಾಡಬೇಕು ಮತ್ತು ಮುಂದಿನ ದಿನಗಳಲ್ಲಿ ಪ್ರತಿ ತಿಂಗಳು ಸಕಾಲದಲ್ಲಿ ವೇತನ ಪಾವತಿಸಲು ಕಾಲಕಾಲಕ್ಕೆ ಅನುದಾನ ಬಿಡುಗಡೆಗೊಳಿಸಲು ಹಾಗೂ ಸಿಬ್ಬಂದಿಗೆ ಸೂಕ್ತ ಸೇವಾ ಭದ್ರತೆ ಒದಗಿಸಲು ತಾವು ನೌಕರರ ಬೇಡಿಕೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು, ನೌಕರರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕೆಂದು ಮನವಿಯಲ್ಲಿ ವಿನಂತಿಸಿದ್ದಾರೆ.

ಮನವಿ ಸಲ್ಲಿಸುವ ವೇಳೆ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಕಾರ್ತಿಕ್ ಹಬ್ಬು, ಶಿರಸಿ, ಸಿದ್ದಾಪುರ, ಹಳಿಯಾಳ ತಾಲೂಕಿನ ನರೇಗಾ ಸಿಬ್ಬಂದಿಗಳು ಇದ್ದರು.