ಕೊಡವರಿಗೆ ವಿಶೇಷ ಪ್ರಾತಿನಿಧ್ಯಕ್ಕೆ ಆಗ್ರಹ: ಸಿಎನ್‌ಸಿಯಿಂದ ಶಾಂತಿಯುತ ಸತ್ಯಾಗ್ರಹ

KannadaprabhaNewsNetwork |  
Published : Feb 17, 2025, 12:32 AM IST
ಚಿತ್ರ: 15ಎಂಡಿಕೆ1 : ಸಿಎನ್‌ಸಿಯಿಂದ ಜಿಲ್ಲಾಡಳಿತ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.  | Kannada Prabha

ಸಾರಾಂಶ

ಕೊಡವ ನ್ಯಾಷನಲ್‌ ಕೌನ್ಸಿಲ್‌ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಇತ್ತೀಚೆಗೆ ಶಾಂತಿಯುತ ಸತ್ಯಾಗ್ರಹ ನಡೆಸಿತು. ಸಿಎನ್‌ಸಿ ಅಧ್ಯಕ್ಷ ಎನ್‌.ಯು. ನಾಚಪ್ಪ ನೇತೃತ್ವ ವಹಿಸಿದ್ದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಸಿಕ್ಕಿಂನ ಬೌದ್ಧ ಬಿಕ್ಷುಗಳಿಗೆ ‘ಸಂಘ " ವರ್ಚುವಲ್ ಇಂಟ್ಯಾಂಜಿಬಲ್ (ಅದೃಶ್ಯ) ಮತ ಕ್ಷೇತ್ರದ ರೀತಿಯಲ್ಲಿ ಸಂಸತ್ತು ಮತ್ತು ರಾಜ್ಯ ವಿಧಾನಸಭೆಯಲ್ಲಿ ಆದಿಮಸಂಜಾತ ಕೊಡವರಿಗೆ ವಿಶೇಷ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಇತ್ತೀಚೆಗೆ ಶಾಂತಿಯುತ ಸತ್ಯಾಗ್ರಹ ನಡೆಸಿತು.

ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಸತ್ಯಾಗ್ರಹ ನಡೆಸಿ ಕೊಡವರ ಹಕ್ಕೋತ್ತಾಯಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು.

ಸಿಕ್ಕಿಂನ ಬೌದ್ಧ ಬಿಕ್ಷುಗಳಿಗೆ "ಸಂಘ " ವರ್ಚುವಲ್, ಅಮೂರ್ತ (ಅದೃಶ್ಯ) ಕ್ಷೇತ್ರದ ರೀತಿಯಲ್ಲಿ ಸಂಸತ್ತು ಮತ್ತು ಅಸೆಂಬ್ಲಿಯಲ್ಲಿ ಆದಿಮಸಂಜಾತ ಕೊಡವರಿಗೆ ವಿಶೇಷ ಪ್ರಾತಿನಿಧ್ಯ ನೀಡಬೇಕು. ಕೊಡವರಿಗೆ ಕೊಡವ ಸಂಪ್ರದಾಯಿಕ ಜನ್ಮಭೂಮಿಯಲ್ಲಿ ಪ್ರತ್ಯೇಕ ಲೋಕಸಭೆ ಮತ್ತು ಅಸಂಬ್ಲಿ ಕೊಡವ ಮತ ಕ್ಷೇತ್ರವನ್ನು ರಚಿಸಬೇಕು ಎಂದು ಎನ್.ಯು.ನಾಚಪ್ಪ ಒತ್ತಾಯಿಸಿದರು.

2026ರಲ್ಲಿ ಸಂಸತ್ತಿನ ಮತ್ತು ಅಸೆಂಬ್ಲಿಯ ಕ್ಷೇತ್ರದ ಗಡಿ ಹಾಗೂ ಸಂಖ್ಯೆ ಪುನರ್ ನಿರ್ಣಯಿಸಲಾಗುತ್ತಿದ್ದು, ಇದಕ್ಕಾಗಿ ಪ್ರಕ್ರಿಯೆಯು ಪ್ರಾರಂಭವಾಗಿದೆ. ರಾಜ್ಯದಲ್ಲಿ ಗರಿಷ್ಠ ಪ್ರಾತಿನಿಧ್ಯವನ್ನು ಹೊಂದಿರುವ ಜನಸಂಖ್ಯಾ ಪ್ರಾಬಲ್ಯದ ಕೂಟ ಕೊಡಗಿಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರವನ್ನು ನಿರ್ಮಿಸುವ ನೆಪದಲ್ಲಿ ಸುಳ್ಯ ತಾಲೂಕನ್ನು ಕೊಡಗಿಗೆ ಸೇರಿಸಿ ಪ್ರತ್ಯೇಕ ಕೊಡಗು ಲೋಕಸಭಾ ಕ್ಷೇತ್ರ ನಿರ್ಮಿಸಿ ಶಾಶ್ವತವಾಗಿ ತಾವು ಸಂಸತ್ ಪ್ರಾತಿನಿಧ್ಯ ಪಡೆಯುವುದರೊಂದಿಗೆ ಸಂಸತ್ತಿನಲ್ಲಿ ಕೊಡವರಿಗೆ ಪ್ರಾತಿನಿಧ್ಯ ದಕ್ಕದಂತೆ ಒಳಸಂಚು ರೂಪಿಸಲಾಗುತ್ತಿದೆ ಎಂದು ಆರೋಪಿಸಿದರು.

2023 ಮತ್ತು 2024 ರಲ್ಲಿ ಸಿಎನ್‌ಸಿ ಸತ್ಯಾಗ್ರಹ ನಡೆಸುವ ಮೂಲಕ ಸಾಂಕೇತಿಕವಾಗಿ ಈ ವಿಷಯವನ್ನು ಪ್ರಸ್ತಾಪಿಸಿತು. ಫೆ.3ರಂದು ಸಿಎನ್‌ಸಿ ಕಾರ್ಯಕರ್ತರು ಪವಿತ್ರ ಕೊಡವ ಯಾತ್ರಾಸ್ಥಳವಾದ ತಲಕಾವೇರಿಯಲ್ಲಿ ಪುಣ್ಯ ಪ್ರಾರ್ಥನೆಯ ಮೂಲಕ ಪ್ರತಿಜ್ಞೆ ಮಾಡಿ ಜನರ ಮಂಜೂರಾತಿಯನ್ನು ಪಡೆಯಲು ಕೊಡವಲ್ಯಾಂಡ್ ನಾದ್ಯಂತ ವರ್ಷವಿಡೀ ಪ್ರಚಾರ ಕಾರ್ಯಕ್ಕಾಗಿ ದೈವಿಕ ಜೀವಜಲ ಕಾವೇರಿ ನದಿಯಿಂದ ಆಶೀರ್ವಾದ ಪಡೆದಿದ್ದೇವೆ ಎಂದರು.

ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಸ್ವಯಂ ಆಡಳಿತ, ಆದಿಮಸಂಜಾತ ಕೊಡವರ ಆಂತರಿಕ ರಾಜಕೀಯ ಸ್ವಯಂ ನಿರ್ಣಯ ಹಕ್ಕುಗಳಿಗಾಗಿ ಸಂವಿಧಾನ 371 ಮತ್ತು 244 ವಿಧಿ ಹಾಗೂ 6ನೇ ಮತ್ತು 8ನೇ ಶೆಡ್ಯೂಲ್, ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಆದಿಮಸಂಜಾತ ಕೊಡವರಿಗೆ ವಿಶ್ವ ರಾಷ್ಟ್ರ ಸಂಸ್ಥೆಯ ಇಂಡಿಜಿನಸ್ ಹಕ್ಕುಗಳ ಮಾನ್ಯತೆ ಮತ್ತು ಸಂವಿಧಾನದ 340-342 ವಿಧಿಗಳ ಅಡಿಯಲ್ಲಿ ಆದಿಮಸಂಜಾತ ಕೊಡವರಿಗೆ ಆದಿಮ ಬುಡಕಟ್ಟು ವರ್ಗೀಕರಣ ಹಾಗೂ ನಮ್ಮ ಭೂಮಿ, ಭಾಷೆ, ಸಾಂಸ್ಕೃತಿಕ ಪರಂಪರೆ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯಕ್ಕೆ ಸಂವಿಧಾನದ ವಿಶೇಷ ಖಾತರಿಗಾಗಿ ಒತ್ತಾಯಿಸಿದರು.

ಕಲಿಯಂಡ ಮೀನಾ ಕಾರ್ಯಪ್ಪ, ರೇಖಾ ನಾಚಪ್ಪ, ಪಟ್ಟಮಾಡ ಲಲಿತಾ ಗಣಪತಿ, ಚೋಳಪಂಡ ಜ್ಯೋತಿ ನಾಣಯ್ಯ, ಮುದ್ದಿಯಾಡ ಲೀಲಾವತಿ, ಕಲಿಯಂಡ ಪ್ರಕಾಶ್, ಅಳ್ಮಂಡ ಜೈ ಗಣಪತಿ, ಕಾಂಡೇರ ಸುರೇಶ್, ಅಜ್ಜಿಕುಟ್ಟೀರ ಲೋಕೇಶ್, ಅರೆಯಡ ಗಿರೀಶ್, ಬೊಟ್ಟಂಗಡ ಗಿರೀಶ್ ಮತ್ತಿತರರು ಪಾಲ್ಗೊಂಡಿದ್ದರು.

ಜ್ಞಾಪನಾ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ
ಬೆಂಗಳೂರಲ್ಲಿ ಬಸವಣ್ಣ ಜೀವ ವೈವಿಧ್ಯ ಉದ್ಯಾನವನ