ಕನ್ನಡಪ್ರಭ ವಾರ್ತೆ ಲೋಕಾಪುರ
ಅಪಘಾತ ತಡೆಗೆ ಪಟ್ಟಣದಲ್ಲಿ ಬಸವೇಶ್ವರ ವೃತ್ತದಿಂದ ಶಿವಾಜಿ ವೃತ್ತದವರೆಗೆ ರಸ್ತೆ ವಿಸ್ತರಣೆ ಕಾರ್ಯ ನಡೆಯುತ್ತಿದೆ. ಲೋಕಾಪುರದಿಂದ ಮುಧೋಳ ರಸ್ತೆ ಅಗಲೀಕರಣ ಕಾಮಗಾರಿಯಿಂದಾಗಿ ನಿತ್ಯ ಅಪಘಾತಗಳು ಸಂಭವಿಸುತ್ತಿವೆ. ರಸ್ತೆ ವಿಭಜನೆ ಸಲುವಾಗಿ ರಸ್ತೆ ಅಗೆದಿದ್ದು ವಾಹನಸವಾರರಿಗೆ ತಗ್ಗು ಕಾಣಲಾರದೆ ದಿನಂಪ್ರತಿ ಅಪಘಾತಗಳು ಸಂಭವಿಸುತ್ತಿವೆ.
ಬೈಕ್ಗಳು ಸ್ಕಿಡ್ ಆಗಿ ನೆಲಕ್ಕೆ ಬೀಳುತ್ತಿದ್ದು, ಹಲವು ಅಪಘಾತಗಳು ಸಂಭವಿಸಿ ವಾಹನ ಸವಾರರಿಗೆ ಗಾಯಗಳಾಗಿ ತೊಂದರೆ ಉಂಟಾಗಿದೆ. ಈ ರಸ್ತೆ ಮೂಲಕ ವಿಜಯಪುರ, ಮುಧೋಳ, ಮೀರಜ್, ಕೊಲಾಪುರ, ಜಮಖಂಡಿ ಸಂಪರ್ಕ ಮಾಡುವ ರಾಜ್ಯ ಹೆದ್ದಾರಿ ಇದಾಗಿದ್ದು, ನಿತ್ಯ ನೂರಾರು ವಾಹನಗಳು ಈ ಮಾರ್ಗದಲ್ಲಿ ಸಂಚರಿಸುತ್ತಿವೆ. ಕಳೆದ ಕೆಲ ವರ್ಷಗಳಿಂದ ಹದಗೆಟ್ಟಿದ್ದ ರಸ್ತೆಯನ್ನು ಎರಡು ವರ್ಷದ ಹಿಂದೆ ಲೋಕೋಪಯೋಗಿ ಇಲಾಖೆ ರಸ್ತೆ ವಿಸ್ತರಣೆ ಕಾಮಗಾರಿ ಕೈಗೊಂಡಿತ್ತು. ಆದರೆ, ಕಳೆದ ಒಂದುವರೆ ವರ್ಷದಿಂದ ಕಾಮಗಾರಿ ನಡೆಸುತ್ತಿದ್ದರೂ ಈವರೆಗೂ ರಸ್ತೆ ಅಗಕಲೀಕರಣ ಕಾಮಗಾರಿ ಸಂಪೂರ್ಣಗೊಂಡಿಲ್ಲ. ಕೂಡಲೇ ಕಾಮಗಾರಿ ಪೂರ್ಣಗೊಳಿಸಬೇಕೆಂಬುದು ಜನರ ಆಗ್ರಹವಾಗಿದೆ.