ಕಂಪ್ಲಿ: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಸೆ.25ರಂದು ಬಾಣಂತಿ ಸಿ.ಚಂದ್ರಮ್ಮ ಹಾಗೂ ಮಗು ಸಾವಿಗೀಡಾದ ಪ್ರಕರಣಕ್ಕೆ ಕಾರಣರಾದ ಸ್ತ್ರೀರೋಗ ತಜ್ಞ ಡಾ.ರವೀಂದ್ರ ಕನಕೇರಿ ಹಾಗೂ ಶುಶ್ರೂಷಣಾಧಿಕಾರಿ ರಜನಿಯನ್ನು ತಕ್ಷಣವೇ ಅಮಾನತ್ತುಗೊಳಿಸಬೇಕೆಂದು ಒತ್ತಾಯಿಸಿ, ನಾನಾ ದಲಿತಪರ ಸಂಘಟನೆಗಳ ಪದಾಧಿಕಾರಿಗಳು ಸೋಮವಾರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಎಫ್ಐಆರ್ ದಾಖಲಿಸುವಂತೆ ಒತ್ತಾಯಿಸಿದಾಗ ಪಿಐ ಕೆ.ಬಿ. ವಾಸುಕುಮಾರ್ ಪ್ರತಿಕ್ರಿಯಿಸಿ, ಕಾನೂನು ಪ್ರಕಾರ ಬೇಕಾದ ಕ್ರಮ ಕೈಗೊಳ್ಳಲಾಗುವುದು ಎಂದರು.
ಮನವಿ ಸ್ವೀಕರಿಸಿದ ಜಿಲ್ಲಾ ಆರ್ ಸಿಎಚ್ ಅಧಿಕಾರಿ ಡಾ.ಹನುಮಂತಪ್ಪ ಮಾತನಾಡಿ, ಈಗಾಗಲೇ ಇಬ್ಬರನ್ನು ಬೇರೆಡೆ ವರ್ಗಾಯಿಸಲಾಗಿದೆ. ವಿಚಾರಣಾ ವರದಿ ಆಯುಕ್ತರಿಗೆ ಸಲ್ಲಿಸಲಾಗಿದೆ. ಮುಂದಿನ ಕ್ರಮವನ್ನು ಆಯುಕ್ತರು ಕೈಗೊಳ್ಳಲಿದ್ದಾರೆ. ಎಫ್ಐಆರ್ ದಾಖಲಿಸುವುದು ಪೊಲೀಸ್ ಇಲಾಖೆಯ ವ್ಯಾಪ್ತಿ, ಪರಿಹಾರ ನೀಡುವುದು ಕಂದಾಯ ಇಲಾಖೆಯ ವ್ಯಾಪ್ತಿ ಎಂದು ಸ್ಪಷ್ಟನೆ ನೀಡಿದರು.ಇದೇ ವೇಳೆ ಪ್ರತಿಭಟನಾಕಾರರು ಗ್ರೇಡ್-2 ತಹಸೀಲ್ದಾರ್ ಎಂ.ಆರ್.ಷಣ್ಮುಖಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ರಿಪಬ್ಲಿಕನ್ ಸೇನಾ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ), ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದ ವಿಜಯನಗರ-ಬಳ್ಳಾರಿ ಜಿಲ್ಲಾ ಸಮಿತಿ, ಕರ್ನಾಟಕ ದಲಿತ ರಕ್ಷಣಾ ವೇದಿಕೆ ಜಿಲ್ಲಾ ಸಮಿತಿ, ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘ, ಛಲವಾದಿ ಮಹಾಸಭಾ, ಅಂಬೇಡ್ಕರ್ ಸ್ವಾಭಿಮಾನಿ ಸೇನಾ, ಭೀಮ್ ಆರ್ಮಿ ಸೇರಿದಂತೆ ಅನೇಕ ದಲಿತಪರ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.