ದೌರ್ಜನ್ಯವೆಸಗಿದ ಟಿಟಿ ಅಮಾನತಿಗೆ ಆಗ್ರಹ

KannadaprabhaNewsNetwork |  
Published : Apr 27, 2025, 01:46 AM IST
26ಕೆಪಿಎಲ್23 ಕರವೇ ಕಾರ್ಯಕರ್ತರು ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ, ಮನವಿ ಸಲ್ಲಸಿದರು. | Kannada Prabha

ಸಾರಾಂಶ

ಏ. 21ರಂದು ಭಾಗ್ಯನಗರದ ಮಹ್ಮದ್‌ ಭಾಷಾ ಅತ್ತಾರ ಮೈಸೂರಿನಿಂದ ಕೊಪ್ಪಳಕ್ಕೆ ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಆಗಮಿಸುತ್ತಿದ್ದರು. ಈ ವೇಳೆ ಟಿಸಿ ಟಿಕೆಟ್‌ ಚೆಕ್‌ ಮಾಡುವ ವೇಳೆ ಹಿಂದಿಯಲ್ಲಿ ಮಾತನಾಡಿದ್ದಾರೆ. ಆಗ ಮಹ್ಮದ್‌ಭಾಷಾ ಕನ್ನಡ ಮಾತನಾಡಿ ಎಂದು ಹೇಳಿದ್ದಾರೆ. ಇದರಿಂದ ಕುಪಿತಗೊಂಡ ಟಿಸಿ ಮೊಬೈಲ್‌ ಕಿತ್ತುಕೊಂಡು ದರ್ಪ ಮೆರೆದಿದ್ದಾನೆ.

ಕೊಪ್ಪಳ:

ಹಂಪಿ ಎಕ್ಸ್‌ಪ್ರೆಸ್‌ನಲ್ಲಿ ಬರುವಾಗ ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಪ್ರಯಾಣಿಕ ಮಹ್ಮದ್‌ ಭಾಷಾ ಅತ್ತಾರ ಮೇಲೆ ಟಿಟಿ ಹಲ್ಲೆ ಮಾಡಿರುವುದನ್ನು ಖಂಡಿಸಿ ಕೊಪ್ಪಳ ರೈಲ್ವೆ ನಿಲ್ದಾಣದ ಎದುರು ಕರವೇ ಕಾರ್ಯಕರ್ತರು ಶನಿವಾರ ಪ್ರತಿಭಟನೆ ಮಾಡಿದರು. ಟಿಟಿ ಮೇಲೆ ಕ್ರಮಕೈಗೊಂಡು ಅಮಾನತು ಮಾಡಬೇಕೆಂದು ನಿಲ್ದಾಣದ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಕರವೇ ಜಿಲ್ಲಾಧ್ಯಕ್ಷ ಗಿರೀಶಾನಂದ ಜ್ಞಾನಸುಂದರ ಮಾತನಾಡಿ, ಏ. 21ರಂದು ಭಾಗ್ಯನಗರದ ಮಹ್ಮದ್‌ ಭಾಷಾ ಅತ್ತಾರ ಮೈಸೂರಿನಿಂದ ಕೊಪ್ಪಳಕ್ಕೆ ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಆಗಮಿಸುತ್ತಿದ್ದರು. ಈ ವೇಳೆ ಟಿಸಿ ಟಿಕೆಟ್‌ ಚೆಕ್‌ ಮಾಡುವ ವೇಳೆ ಹಿಂದಿಯಲ್ಲಿ ಮಾತನಾಡಿದ್ದಾರೆ. ಆಗ ಮಹ್ಮದ್‌ಭಾಷಾ ಕನ್ನಡ ಮಾತನಾಡಿ ಎಂದು ಹೇಳಿದ್ದಾರೆ. ಇದರಿಂದ ಕುಪಿತಗೊಂಡ ಟಿಸಿ ಮೊಬೈಲ್‌ ಕಿತ್ತುಕೊಂಡು ದರ್ಪ ಮೆರೆದಿದ್ದಾನೆ. ಜತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ದೌರ್ಜನ್ಯವೆಸಗಿದ್ದು ಬೇಸರದ ಸಂಗತಿ ಎಂದರು.

ಇತ್ತೀಚೆಗೆ ಬೆಂಗಳೂರಿನಲ್ಲಿ ವಾಯುಪಡೆಯ ಅಧಿಕಾರಿಯೊಬ್ಬರು ಕನ್ನಡಿಗನ ಮೇಲೆ ಹಲ್ಲೆ ನಡೆಸಿರುವ ಘಟನೆ ಮಾಸುವ ಮುನ್ನವೇ ಈ ಪ್ರಕರಣ ಬೆಳಕಿಗೆ ಬಂದಿರುವುದು ಖೇದಕರ ಸಂಗತಿ. ಪ್ರಯಾಣಿಕರಿಗೆ ಸುರಕ್ಷತೆ ಒದಗಿಸುವ ಅಧಿಕಾರಿಗಳೇ ದೌರ್ಜನ್ಯವೆಸಗಿದರೆ ರೈಲ್ವೆ ಇಲಾಖೆ ಮೇಲಿರುವ ನಂಬಿಕೆ ಹೋಗುತ್ತದೆ ಎಂದಿರುವ ಅವರು, ರಾಜ್ಯದಲ್ಲಿ ಕನ್ನಡ ಮಾತನಾಡಿ ಎಂದಿದ್ದಕ್ಕೆ ಹಲ್ಲೆ ಮಾಡಿದರೆ ನಾವು ಕರ್ನಾಟಕದಲ್ಲಿ ಬದುಕುತ್ತಿದ್ದೇವೆಯೇ ಎಂಬ ಪ್ರಶ್ನೆ ನಮ್ಮನ್ನು ಕಾಡುತ್ತಿದೆ ಎಂದು ಬೇಸರ ವ್ಯಕ್ತಡಿಸಿದರು.

ಅವಾಚ್ಯ ಶಬ್ದಗಳಿಂದ ನಿಂದಿಸಿ ದೌಜ್ಯನ್ಯವೆಸಗಿದ ಟಿಕೆಟ್ ಕಲೆಕ್ಟರ್ ಮೇಲೆ ಸೂಕ್ತ ಕ್ರಮಕೈಗೊಂಡು ಕರ್ತವ್ಯದಿಂದ ಅಮಾನತು ಮಾಡಬೇಕೆಂದು ಇದೇ ವೇಳೆ ಒತ್ತಾಯಿಸಲಾಯಿತು.

ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಗಪ್ಪ ಮೂಗಿನ್, ಜಿಲ್ಲಾ ಗೌರವಾಧ್ಯಕ್ಷ ಶರಣಪ್ಪ ಚಂದನಕಟ್ಟಿ, ಸಂಜಯ ಖಟವಟೆ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ಸಿದ್ದು ಶಶಿಮಠ, ಕೊಪ್ಪಳ ನಗರಾಧ್ಯಕ್ಷ ಪ್ರಫುಲ್ ಪಾಟೀಲ, ಭಾಗ್ಯನಗರ ಅಧ್ಯಕ್ಷ ವೀರೇಶ ಮುಂಡಾಸದ, ಮುಖಂಡರಾದ ನೂರಪಾಶಾ ಕವಲೂರು, ಸಂಜೀವಸಿಂಗ್ ಹಜಾರೆ, ಮಹೇಶ್ವರ ಶಾಸ್ತ್ರಿ, ಹನುಮಂತ ತಳಕಲ್, ಚಂದ್ರು ಭಜಂತ್ರಿ, ಕಿರಣ ಮೇಟಿ, ಆಸೀಫ್‌ ಮೇಸ್ತ್ರೀ ಸೇರಿದಂತೆ ಅನೇಕರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌
ಬ್ಯಾಲೆಟ್‌ ಪೇಪರಲ್ಲೇ ಪಂಚಾಯ್ತಿ ಚುನಾವಣೆಗೆ ಸರ್ಕಾರ ಮಸೂದೆ