ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಆಗ್ರಹ

KannadaprabhaNewsNetwork |  
Published : Dec 07, 2023, 01:15 AM IST
 | Kannada Prabha

ಸಾರಾಂಶ

ಶಹಾಪುರದ ಸರ್ಕಾರಿ ಗೋದಾಮಿನಲ್ಲಿ ನಡೆದ ಅಕ್ಕಿ ಅಕ್ರಮ ಪ್ರಕರಣದಲ್ಲಿ ಶಂಕಿತ ಆರೋಪಿ ಸನ್ಮಾನಿಸಿದ್ದ ಪೊಲೀಸರ ಅಮಾನತುಗೊಳಿಸಬೇಕೆಂದು ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಚೆನ್ನಪ್ಪ ಆನೆಗುಂದಿ ಪೊಲೀಸ್ ಉಪ ಮಹಾನಿರೀಕ್ಷಕರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷರಿಂದ ಪೊಲೀಸ್ ಉಪ ಮಹಾನಿರೀಕ್ಷಕರಿಗೆ ಮನವಿ

ಕನ್ನಡಪ್ರಭ ವಾರ್ತೆ ಶಹಾಪುರ

ಶಹಾಪುರದ ಸರ್ಕಾರಿ ಗೋದಾಮಿನಲ್ಲಿ ನಡೆದ ಅಕ್ಕಿ ಅಕ್ರಮ ಪ್ರಕರಣದಲ್ಲಿ ಶಂಕಿತ ಆರೋಪಿ ಸನ್ಮಾನಿಸಿದ್ದ ಪೊಲೀಸರ ಅಮಾನತುಗೊಳಿಸಬೇಕೆಂದು ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಚೆನ್ನಪ್ಪ ಆನೆಗುಂದಿ ಪೊಲೀಸ್ ಉಪ ಮಹಾನಿರೀಕ್ಷಕರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಅಕ್ಕಿ ಅಕ್ರಮದ ನಿಷ್ಪಕ್ಷವಾಗಿ ತನಿಖೆ ಮಾಡಬೇಕಾಗಿದ್ದ ಪೊಲೀಸ್ ಅಧಿಕಾರಿಗಳು ಇತ್ತೀಚೆಗೆ ಖಾಕಿ ಸಮವಸ್ತ್ರದಲ್ಲಿ ಅಕ್ರಮ ಅಕ್ಕಿ ಸಾಗಾಣಿಕೆ ವ್ಯಕ್ತಿಗೆ ಸನ್ಮಾನಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇಂತಹ ಪೊಲೀಸ್ ಅಧಿಕಾರಿಗಳಿಂದ ತನಿಖೆ ನಡೆಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿರುವ ಚೆನ್ನಪ್ಪ, ಪೊಲೀಸ್ ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಅಕ್ಕಿ ನಾಪತ್ತೆಯಲ್ಲಿ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟಗಾರರ ಸಹಕಾರ ಸಂಘದ ಅಧ್ಯಕ್ಷ ಗುರುನಾಥರೆಡ್ಡಿ ಹಳಿಸಗರ, ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆಯ ಉಪನಿರ್ದೇಶಕ ಭೀಮರಾಯ ಹಾಗೂ ಅಕ್ರಮ ಪಡಿತರ ಸಾಗಾಣಿಕೆದಾರ ಮಲ್ಲಿಕ್ ಚಾಮನಾಳ ಅವರು ಕಾರಣರಾಗಿದ್ದಾರೆಂದು ಆರೋಪಿಸಿದ ಚೆನ್ನಪ್ಪ, ಪೊಲೀಸ್ ಉಪ ಮಹಾ ನಿರೀಕ್ಷಕರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಡಿ.ಎಚ್.ಎಸ್. ಜಿಲ್ಲಾ ಸಂಚಾಲಕ ಸುಧಾಮ ಧನ್ನಿ, ಜಿಲ್ಲಾ ಮುಖಂಡ ಪಾಂಡುರಂಗ ಮಾವಿನಕರ್ ಇದ್ದರು.

ತನಿಖಾಧಿಕಾರಿಗಳ ಬದಲಾವಣೆಗೆ ಆಗ್ರಹ: ಅನ್ನಭಾಗ್ಯ ಅಕ್ಕಿ ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್‌ ಅಧಿಕಾರಿಗಳ ಪೈಕಿ ಕೆಲವರು, ಅಕ್ರಮದಲ್ಲಿ ಕೇಳಿಬಂದಿರುವ ವ್ಯಕ್ತಿಗೆ ಸನ್ಮಾನ ಮಾಡಿರುವುದರಿಂದ ಅಂತಹವರನ್ನು ತನಿಖೆಯಿಂದ ದೂರವಿಡಬೇಕು ಎಂದು ಆಗ್ರಹಿಸಿ ಪ್ರಾಂತ ರೈತ ಸಂಘವು ಜಿಲ್ಲಾಧಿಕಾರಿ ಡಾ. ಸುಶೀಲಾ.ಬಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಅಕ್ರಮದಲ್ಲಿ ಭಾಗಿಯಾಗಿದ್ದಾರೆನ್ನಲಾದ ವ್ಯಕ್ತಿಯನ್ನು ಪೊಲೀಸ್‌ ಇಲಾಖೆಯ ಮೇಲಧಿಕಾರಿಗಳೆ ಭೇಟಿಯಾಗಿ ಸನ್ಮಾನ ಮಾಡಿರುವುದು ಅಚ್ಚರಿ ಮೂಡಿಸಿದೆ. ಈಗ ಇವರೆ ಅಕ್ಕಿ ನಾಪತ್ತೆ ಪ್ರಕರಣದ ತನಿಖೆಯನ್ನು ನಡೆಸಿದರೆ, ಅಕ್ರಮ ಮುಚ್ಚಿ ಹಾಕುವ ಸಾಧ್ಯತೆಯಿದೆ ಎಂದು ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಚೆನ್ನಪ್ಪ ಆನೆಗುಂದಿ ಹಾಗೂ ಕಾರ್ಯದರ್ಶಿ ಎಸ್‌.ಎಂ. ಸಾಗರ ಜಿಲ್ಲಾಧಿಕಾರಿಯೆದುರು ಆತಂಕ ವ್ಯಕ್ತಪಡಿಸಿದರು. ಅಲ್ಲದೆ, ಆಹಾರ ಇಲಾಖೆಯ ಉಪನಿರ್ದೇಶಕ ಭೀಮರಾಯ ಹಾಗೂ ಆಹಾರ ನಿರೀಕ್ಷಕ ಅಜಯರೆಡ್ಡಿ ಎನ್ನುವವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಮನವಿ ಪತ್ರದಲ್ಲಿ ಕೋರಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತಿವೇಗ ಎಂದರೆ ನಿರ್ಲಕ್ಷ್ಯದ ಚಾಲನೆ ಅಲ್ಲ: ಹೈಕೋರ್ಟ್‌
‘ಜಾಹೀರಾತಲ್ಲಿ ಗಾಂಧೀಜಿ ಬಳಕೆ ಗಾಂಧೀಜಿಯರ ಮೌಲ್ಯಗಳ ಹತ್ಯೆ’