)
- ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಬೇಕು: ಅಫ್ಸರ್ ಆಗ್ರಹ
ಕನ್ನಡಪ್ರಭ ವಾರ್ತೆ ದಾವಣಗೆರೆ
ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 210 ನೇರ ಪಾವತಿ ಪೌರ ಕಾರ್ಮಿಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಲಿ. ಮಧ್ಯವರ್ತಿಗಳ ಹಾವಳಿಗೆ ಪಾಲಿಕೆ ಆಯುಕ್ತರು ಕಡಿವಾಣ ಹಾಕಲಿ ಎಂದು ದಕ್ಷಿಣ ಕ್ಷೇತ್ರದ ಪರಾಜಿತ ಅಭ್ಯರ್ಥಿ, ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಒತ್ತಾಯಿಸಿದ್ದಾರೆ.ನೇರ ಪಾವತಿ ಪೌರ ಕಾರ್ಮಿಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ಯಾವುದೇ ರೀತಿಯಲ್ಲೂ ಅನ್ಯಾಯ ಆಗದಂತೆ, ಸಂಪೂರ್ಣ ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆಯನ್ನು ಪಾಲಿಕೆ ಆಯುಕ್ತರು ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಪೌರ ಕಾರ್ಮಿಕರು ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಮಹತ್ವದ ಸೇವೆ ಸಲ್ಲಿಸುತ್ತಿದ್ದಾರೆ. ಇಂತಹ ಪೌರ ಕಾರ್ಮಿಕರಿಗೆ ಸಿಗಬೇಕಾದ ಉದ್ಯೋಗ ಅವಕಾಶವನ್ನು ಹಣದ ವ್ಯವಹಾರಕ್ಕೆ ಬಳಸಿಕೊಳ್ಳುವ ಯಾವುದೇ ಪ್ರಯತ್ನವನ್ನು ಪಾಲಿಕೆ ಸಹಿಸಬಾರದು. ನೇಮಕಾತಿಯಲ್ಲಿ ಮಧ್ಯವರ್ತಿಗಳ ಹಸ್ತಕ್ಷೇಪಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ನೇಮಕಾತಿ ಮಾಡುವುದಾಗಿ ಅಭ್ಯರ್ಥಿಗಳಿಂದ ಹಣ ಕೇಳುವ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದು ಪೌರ ಕಾರ್ಮಿಕರ ಹಕ್ಕಾಗಿದೆ. ಉದ್ಯೋಗ ಕೊಡಿಸುವ ಹೆಸರಿನಲ್ಲಿ ಯಾರಿಗೂ ಒಂದು ರುಪಾಯಿ ಸಹ ಕೊಡಬಾರದು. ಅರ್ಹ ಅಭ್ಯರ್ಥಿಗಳು ಧೈರ್ಯದಿಂದ ನೇರವಾಗಿ ಅರ್ಜಿ ಸಲ್ಲಿಸಬೇಕು. ಹಣ ಕೇಳುವವರು ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳಿಗೆ ತಕ್ಷಣವೇ ದೂರು ನೀಡಬೇಕು. ಪೌರ ಕಾರ್ಮಿಕರ ನೇಮಕಾತಿ ಪ್ರಕ್ರಿಯೆ ನ್ಯಾಯಸಮ್ಮುತ, ಪಾರದರ್ಶಕ ಹಾಗೂ ಭ್ರಷ್ಟಾಚಾರ ಮುಕ್ತವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳುವಂತೆ ಪಾಲಿಕೆ ಆಯುಕ್ತರು, ಸಂಬಂಧಿಸಿದ ಅಧಿಕಾರಿಗಳಿಗೆ ಅಪ್ಸರ್ ಕೊಡ್ಲಿಪೇಟೆ ಒತ್ತಾಯಿಸಿದ್ದಾರೆ.
-6ಕೆಡಿವಿಜಿ1: ಅಪ್ಸರ್ ಕೊಡ್ಲಿಪೇಟೆ.