ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಖಾಲಿ ಕೊಡ, ಖಾಲಿ ಚೆಂಬನ್ನು ತಲೆ ಮೇಲೆ ಹೊತ್ತು ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿದರು.ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಮಾತನಾಡಿ, ರಾಜ್ಯದಲ್ಲಿ ಬರಗಾಲ ಎದುರಾಗಿದ್ದರೂ ತಮಿಳುನಾಡು ನೀರು ಬಿಡುವಂತೆ ಖ್ಯಾತೆ ತೆಗೆಯುತ್ತಿದೆ. ಇದುವರೆವಿಗೂ ರಾಜ್ಯದಲ್ಲಿ ಆಡಳಿತ ನಡೆಸಿದ ಎಲ್ಲಾ ಸರ್ಕಾರಗಳು ಕಾವೇರಿ ನದಿ ನೀರಿನ ವಿಚಾರವಾಗಿ ಕೇಂದ್ರ ಸರ್ಕಾರಕ್ಕಾಗಲಿ, ತಮಿಳುನಾಡು ಸರ್ಕಾರಕ್ಕಾಗಲಿ ನೀರು ಬಿಡುವುದಿಲ್ಲವೆಂಬ ಖಡಕ್ ಸಂದೇಶವನ್ನು ನೀಡಲೆ ಇಲ್ಲ. ಅಧಿಕಾರಕ್ಕಾಗಿ ಹಾತೊರೆಯುವ ಬದಲು ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಎಲ್ಲಾ ಚುನಾಯಿತ ಪ್ರತಿನಿಧಿಗಳು ರಾಜಿನಾಮೆ ನೀಡಿ ಕನ್ನಡ, ನಾಡು, ನುಡಿ, ನೆಲ, ಜಲದ ಬಗ್ಗೆ ಅಭಿಮಾನ ತೋರುವುದು ಒಳ್ಳೆಯದೆಂದು ಆಗ್ರಹಿಸಿದರು.