ಬೆಳಗಾವಿ ಅಧಿವೇಶನದಲ್ಲಿ ರೈತರ ಸಮಸ್ಯೆಗಳನ್ನು ಚರ್ಚಿಸಲು ರೈತರ ಆಗ್ರಹ

KannadaprabhaNewsNetwork | Published : Dec 10, 2024 12:32 AM

ಸಾರಾಂಶ

ಪ್ರಸಕ್ತ ಸಂಸತ್, ಬೆಳಗಾವಿ ಅಧಿವೇಶನದಲ್ಲಿ ರೈತರ ಸಮಸ್ಯೆಗಳನ್ನು ಚರ್ಚಿಸಿ ನಿರ್ಲಕ್ಷ್ಯ ಮಾಡಬೇಡಿ ಎಂದು ಇಲ್ಲಿಯ ರೈತರು ನಗರದಲ್ಲಿ ಸೋಮವಾರ ದೆಹಲಿ ರೈತ ಹೋರಾಟ ಬೆಂಬಲಿಸಿ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಗೀತಾ ಹುಡೇದ ಅವರ ಮೂಲಕ ಸಂಸದ ಸುನೀಲ್ ಬೋಸ್ ಅವರಿಗೆ ಮನವಿ ಸಲ್ಲಿಸಿದರು.

ರೈತರ ಪ್ರತಿಭಟನೆ । ದೆಹಲಿ ರೈತ ಹೋರಾಟಕ್ಕೆ ಬೆಂಬಲ । ಎಡಿಸಿ ಗೀತಾ ಹುಡೇದ ಮೂಲಕ ಸಂಸದ ಸುನೀಲ್‌ ಬೋಸ್‌ಗೆ ಮನವಿ ಸಲ್ಲಿಕೆ । ಪ್ರತಿಭಟನಾ ಮೆರವಣಿಗೆ

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಪ್ರಸಕ್ತ ಸಂಸತ್, ಬೆಳಗಾವಿ ಅಧಿವೇಶನದಲ್ಲಿ ರೈತರ ಸಮಸ್ಯೆಗಳನ್ನು ಚರ್ಚಿಸಿ ನಿರ್ಲಕ್ಷ್ಯ ಮಾಡಬೇಡಿ ಎಂದು ಇಲ್ಲಿಯ ರೈತರು ನಗರದಲ್ಲಿ ಸೋಮವಾರ ದೆಹಲಿ ರೈತ ಹೋರಾಟ ಬೆಂಬಲಿಸಿ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಗೀತಾ ಹುಡೇದ ಅವರ ಮೂಲಕ ಸಂಸದ ಸುನೀಲ್ ಬೋಸ್ ಅವರಿಗೆ ಮನವಿ ಸಲ್ಲಿಸಿದರು.

ನಗರದ ಜಿಲ್ಲಾಡಳಿತ ಭವನದ ಪ್ರವೇಶದ್ವಾರದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಜಿಲ್ಲಾಡಳಿತ ಭವನದ ಆವರಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಅಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಮೂಲಕ ಸಂಸದ ಸುನೀಲ್ ಬೋಸ್ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘಟನೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮೂಕಹಳ್ಳಿ ಮಹದೇವಸ್ವಾಮಿ, ಜಿಲ್ಲಾ ರೈತ ಸಂಘದ ಅಧ್ಯಕ್ಷ ಹೊನ್ನೂರು ಪ್ರಕಾಶ್, ದೇಶದ ರೈತರ ಒಳಿತಿಗಾಗಿ ಹೋರಾಟ ನಡೆಸುತ್ತಿರುವ ದಹಲಿ ರೈತ ಹೋರಾಟದ ಮುಖಂಡ ಜಗಜಿತ್ ಸಿಂಗ್ ದಲೈವಾಲ ಉಪವಾಸ ಸತ್ಯಾಗ್ರಹ ೧೪ನೇ ದಿನಕ್ಕೆ ಮುಂದುವರಿದಿದೆ. ಆರೋಗ್ಯ ಸ್ಥಿತಿ ಹದಗೆಟ್ಟಿದೆ ಎಂದು ಹೇಳಿದರು.

ಪಂಜಾಬ್, ಹರಿಯಾಣ ಭಾಗದಲ್ಲಿ ನಿರಂತರವಾಗಿ ಚಳವಳಿ ನಡೆಸುತ್ತಿರುವ ರೈತರು ಎರಡು ದಿನಗಳ ಹಿಂದೆ ದೆಹಲಿಗೆ ಕಾಲ್ನಡಿಗೆ ಮೂಲಕ ಹೋಗಲು ಬರುತ್ತಿದ್ದಾಗ ಪೊಲೀಸರು ತಡೆದು ಅಶ್ರುವಾಯು ಸಿಡಿಸಿ ಜಲ ಪಿರಂಗಿ ಪ್ರಯೋಗ ಮಾಡಿದ್ದಾರೆ. ಹಲವು ರೈತರು ಆಸ್ಪತ್ರೆ ಸೇರಿದ್ದಾರೆ. ಇಂತಹ ದಬ್ಬಾಳಿಕೆಯ ಪೊಲೀಸ್ ದೌರ್ಜನ್ಯವನ್ನು ಖಂಡಿಸುತ್ತೇವೆ ಎಂದರು.

ಇಂಥ ದಬ್ಬಾಳಿಕೆ ನಡೆದರೂ ಸಂಸತ್ ಅಧಿವೇಶನದಲ್ಲಿ ಚರ್ಚಿಸದೆ ಇರುವುದು ನಮಗೆ ನೋವಿನ ಸಂಗತಿಯಾಗಿದೆ. ನಮ್ಮ ಪ್ರತಿನಿಧಿಯಾಗಿ ನೀವು ಏಕೆ ಧ್ವನಿ ಎತ್ತುತ್ತಿಲ್ಲ ಎಂದು ಸಂಸದರನ್ನು ಪ್ರಶ್ನಿಸಿದರು.

ಕೇಂದ್ರ ಸರ್ಕಾರ ಗಂಭೀರವಾಗಿ ಪ್ರತಿಕ್ರಿಯೆ ನೀಡದೆ ಮಾತುಕತೆಗೂ ಆಹ್ವಾನಿಸದೆ ನಿರ್ಲಕ್ಷ್ಯ ತೋರುತ್ತಿದೆ. ಆದ್ದರಿಂದ ತಾವು ಈ ಕೂಡಲೇ ಸರ್ಕಾರದ ಗಮನಸೆಳೆದು ರೈತರ ಹಿತ ಕಾಪಾಡಬೇಕು. ದೇಶದ ರೈತರ ಸಮಸ್ಯೆಯನ್ನು ಬಗೆಹರಿಸಬೇಕು ಕೇಂದ್ರ ಸರ್ಕಾರ ಚಳವಳಿ ನಿರತ ಮುಖಂಡರ ಜತೆ ಕೂಡಲೇ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿ ಎಂದು ಮನವಿ ಮಾಡಿದರು.

ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ತರಬೇಕು, ಡಾ ಸ್ವಾಮಿನಾಥನ್ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು. ರೈತರ ಸಾಲ ಸಂಪೂರ್ಣ ಮನ್ನಾ ಆಗಬೇಕು. ೬೦ ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿಗೆ ಬರಬೇಕು. ರೈತರಿಗಾಗಿ ಹೋರಾಟ ಮಾಡಿದ ರೈತರ ಮೇಲೆ ಇರುವ ಎಲ್ಲಾ ಪ್ರಕರಣಗಳನ್ನು ಕೇಂದ್ರ, ರಾಜ್ಯ ಸರ್ಕಾರಗಳು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಉಡಿಗಾಲದ ರೇವಣ್ಣ, ಮೂಡಲಪುರ ಪಟೇಲ್ ಶಿವಮೂರ್ತಿ. ನಂಜೆದೇವನಪುರ ಸತೀಶ್ ಉಡಿಗಾಲ ಸುಂದ್ರಪ್ಪ, ಹೆಗ್ಗೋಠಾರ ಶಿವಸ್ಥಾಮಿ, ಉಡಿಗಾಲ ಗುರು, ಇಂದುವಾಡಿ ಮಾದೇಶ್, ಹಿರಿಯೂರು ಮಹೇಶ್, ರಾಜು ಎಂ ಬಿ, ರಘು, ಮಹೇಶ್, ಮ.ನಾಗಪ್ಪ, ಇತರರು ಭಾಗವಹಿಸಿದ್ದರು.

Share this article