ಜಿಲ್ಲಾಧ್ಯಕ್ಷ ಪರಸಪ್ಪ ಕೂಸೂರ ಅವರ ನೇತೃತ್ವದಲ್ಲಿ ತಹಸೀಲ್ದಾರ್ ಡಾ. ಸುಮಂತ್ ಅವರಿಗೆ ಮನವಿ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಹೊಸ ಪಿಂಚಣಿ ವ್ಯವಸ್ಥೆ ರದ್ದುಗೊಳಿಸಿ, ಹಳೇ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕೆಂದು ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.ಈ ಸಂಬಂಧ ಸಂಘದ ಜಿಲ್ಲಾಧ್ಯಕ್ಷ ಪರಸಪ್ಪ ಕೂಸೂರ ಅವರ ನೇತೃತ್ವದಲ್ಲಿ ತಹಸೀಲ್ದಾರ್ ಡಾ. ಸುಮಂತ್ ಅವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು. ಈಗಾಗಲೇ ಸರ್ಕಾರ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಓಪಿಎಸ್ ಜಾರಿಗೊಳಿಸುವ ಭರವಸೆ ನೀಡಿತ್ತು.
ಅನುದಾನಿತ ಶಾಲಾ ಕಾಲೇಜುಗಳ ನೌಕರರಿಗೆ ಓಪಿಎಸ್ ಜಾರಿ ವಿಳಂಬವಾದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೀಡುತ್ತಿರುವ ಎನ್ಪಿಎಸ್ನ್ನು ಯಥಾವತ್ತಾಗಿ ಜಾರಿ ಮಾಡಬೇಕು. ನೇಮಕಾತಿ, ಪ್ರಾಧಿಕಾರದ ವಂತಿಗೆಯನ್ನು ಆಡಳಿತ ಮಂಡಳಿಗಳ ಬದಲಾಗಿ ಸರ್ಕಾರ ಭರಿಸಲು ಕ್ರಮ ವಹಿಸಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.ರಾಜ್ಯದ ಖಾಸಗಿ ಅನುದಾನಿತ ಶೈಕ್ಷಣಿಕ ಸಂಸ್ಥೆಗಳ ಸಿಬ್ಬಂದಿ ವೇತನ, ನಿವೃತ್ತಿ ವೇತನ ಮತ್ತು ಇತರೆ ಸೌಲಭ್ಯಗಳ ನಿಯಂತ್ರಣ ವಿಧೇಯಕಕ್ಕೆ ತಿದ್ದುಪಡಿ ತರಬೇಕು ಎಂದು ತಿಳಿಸಿದರು.ಅನುದಾನಿತ ನೌಕರರಿಗೆ ಕೂಡ ಸರ್ಕಾರಿ ನೌಕರರಂತೆ ಜ್ಯೋತಿ ಸಂಜೀವಿನಿ ಯೋಜನೆಯಡಿ ಯಥಾವತ್ತಾಗಿ ಜಾರಿ ಯಾಗಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ದಶಕಗಳಿಂದ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರದಲ್ಲೇ ಕ್ರಮ ಕೈ ಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.ಹೀಗಾಗಿ ಅನುದಾನಿತ ನೌಕರರಿಗೆ ಪ್ರಮುಖ ಬೇಡಿಕೆಗಳನ್ನು ಮಾನವೀಯ ಕಾಳಜಿ ಹಿನ್ನೆಲೆಯಲ್ಲಿ ಈಡೇರಿಸಲು ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕು. ಸಹನೂಭೂತಿಯಿಂದ ಅನುದಾನಿತ ಶಾಲೆ ಕಾಲೇಜುಗಳ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ತರುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ಈಡೇರಿಕೆಗೆ ಮುಂದಾಗಬೇಕು ಎಂದು ಹೇಳಿದ್ದಾರೆ.ಪ್ರಸ್ತುತ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ವರ್ಷ ಪೂರೈಸುತ್ತಿದೆ. ಹೀಗಾಗಿ ವಿಳಂಬ ನೀತಿ ಅನುಸರಿಸದೇ ಅನುದಾನಿತ ಶಿಕ್ಷಣ ಸಂಸ್ಥೆಗಳ ಸಾವಿರಾರು ನೌಕರರನ್ನು ಮತ್ತೆ ಹೋರಾಟಕ್ಕೆ ಅವಕಾಶ ನೀಡದಂತೆ ನ್ಯಾಯಯುತ ಬೇಡಿಕೆಗಳನ್ನು ತ್ವರಿತಗತಿಯಲ್ಲಿ ಈಡೇರಿಸಿ ನೌಕರರ ಜೀವನ ಸುಧಾರಣೆಗೆ ಅನುಕೂಲ ಮಾಡಿಕೊಡಬೇಕು ಎಂದು ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಸಂಘದ ತಾಲುಕು ಅಧ್ಯಕ್ಷ ರಘು, ಉಪಾಧ್ಯಕ್ಷ ಗಂಗಾಧರ್, ಕಾರ್ಯದರ್ಶಿ ಪ್ರಕಾಶ್, ಸದಸ್ಯರಾದ ನಟರಾಜ್, ಧನಂಜಯ್, ಜೆಲ್ಲಿ ಕೆ. ಜಾರ್ಜ್, ಸುಜಾತ, ಸಂತೋಷ್, ಅಣ್ಣಪ್ಪಶೆಟ್ಟಿ, ವೆಂಕಟೇಶ್, ಪ್ರಸನ್ನ, ಶಿವರುದ್ರಪ್ಪ, ಎನ್.ಜಿ.ಚಂದ್ರಪ್ಪ, ಮಹೇಂದ್ರಕುಮಾರ್ ಹಾಜರಿದ್ದರು. 6 ಕೆಸಿಕೆಎಂ 5:ಹಳೇ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕೆಂದು ಆಗ್ರಹಿಸಿ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಜಿಲ್ಲಾಧ್ಯಕ್ಷ ಪರಸಪ್ಪ ಕೂಸೂರ ಅವರ ನೇತೃತ್ವದಲ್ಲಿ ತಹಸೀಲ್ದಾರ್ ಡಾ. ಸುಮಂತ್ ಅವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.