ಕನ್ನಡಪ್ರಭ ವಾರ್ತೆ ಯಾದಗಿರಿ
ಸಂಘದ ರಾಜ್ಯ ಉಪಾಧ್ಯಕ್ಷ ಲಕ್ಷ್ಮೀಕಾಂತ ಮದ್ದರು ಮಾತನಾಡಿ, ಸುರಪುರ ಸಾಮಾಜಿಕ ವಲಯ ಅರಣ್ಯಾಧಿಕಾರಿ ನರೇಗಾ ಯೋಜನೆಯಡಿ ತಿಂಥಣಿ ಗ್ರಾಪಂ ವ್ಯಾಪ್ತಿಯಲ್ಲಿ ಸಸಿ ನೆಡುವ ಕಾಮಗಾರಿಯಲ್ಲಿ ಎನ್ಎಂಆರ್ ಪ್ರತಿಗಳ ಮೇಲೆ ಅಧಿಕಾರಿ ಕಾರ್ಮಿಕರ ಬದಲು ತಮ್ಮದೇ ಹೆಬ್ಬೆಟ್ಟಿನ ಸಹಿ ಮಾಡಿ, ಹಣ ದುರ್ಬಳಕೆ ಮಾಡಿಕೊಂಡಿದ್ದನ್ನು ಬೆರಳಚ್ಚು ತಜ್ಞರು ನೀಡಿದ ವರದಿಯಲ್ಲಿ ಸಾಬೀತಾಗಿದೆ ಎಂದು ಆರೋಪಿಸಿದರು.
ಈ ಕಾಮಗಾರಿಯಲ್ಲಿ ದಲ್ಲಾಳಿಗಳು ವ್ಯವಸ್ಥಿತವಾಗಿ ಹಣ ದುರ್ಬಳಕೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸಹಾಯ ಮಾಡುವುದು ಬೆಳಕಿಗೆ ಬಂದಿದೆ. ಗ್ರಾಮೀಣ ಭಾಗದ ಜನತೆ ಗೂಳೆ ಹೋಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡುತ್ತಿದೆ. ಆದರೆ, ಅಧಿಕಾರಿಗಳು ಯಂತ್ರಗಳಿಂದ ಸಹಾಯ ಮಾಡಿಕೊಂಡು ಹಣ ದುರುಯೋಗಪಡಿಸಿ, ಬಡವರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಇದೇ ರೀತಿ ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಪಂ ವ್ಯಾಪ್ತಿಯಲ್ಲೂ ಅವ್ಯವಹಾರ ನಡೆದಿದ್ದು, ಬೆರಳಚ್ಚು ತಜ್ಞರ ವರದಿ ಬಂದಿಲ್ಲ. ಹೀಗಾಗಿ ಕೂಡಲೇ ಈ ಬಗ್ಗೆ ಗಮನ ಹರಿಸಿ, ಹಗರಣದಲ್ಲಿ ಶಾಮೀಲಾದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಇಲ್ಲವಾದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.