ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಅನಂತ್ ರಾಮ್ ವೃತ್ತದ ಆವರಣದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಜಮೀರ್ ವಿರುದ್ಧ ಘೋಷಣೆ ಕೂಗಿದರು. ಸಚಿವ ಸ್ಥಾನದಿಂದ ವಜಗೊಳಿಸುವಂತೆ ಆಗ್ರಹಿಸಿದರು.
ಪುರಸಭೆ ಸದಸ್ಯ ನಂದಕುಮಾರ್ ಮಾತನಾಡಿ, ಮಾಜಿ ಪ್ರಧಾನಿ ದೇವೇಗೌಡ ಹಾಗೂ ಕುಮಾರಸ್ವಾಮಿಯವರ ಸಹಕಾರದೊಂದಿಗೆ ರಾಜಕೀಯದಲ್ಲಿ ಬೆಳೆದ ಜಮೀರ್ ಅಹ್ಮದ್ ಖಾನ್ ಈಗ ಅವರ ವಿರುದ್ಧವೇ ಬಾಯಿಗೆ ಬಂದಂತೆ ಮಾತನಾಡುತ್ತಿರುವುದನ್ನು ಖಂಡಿಸಿದರು.ಬಣ್ಣದ ಬಗ್ಗೆ ಮಾತನಾಡಿರುವ ಸಚಿವ ಜಮೀರ್ ಅವರ ಅವಹೇಳನಕಾರಿ ಮಾತನ್ನು ಸರ್ಕಾರ ಸಮರ್ಥಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎನ್.ಕೃಷ್ಣ ಮಾತನಾಡಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಜಮೀರ್ ಅಹಮದ್ ಖಾನ್ ಉರ್ದು ಭಾಷೆಯಲ್ಲಿ ಅವಾಚ್ಯ ಪದ ಬಳಕೆ ಮಾಡಿ ನಿಂದಿಸಿದ್ದಾರೆ. ವಕ್ಫ್ ಸಚಿವರಾಗಿ ಜಾತಿ, ಧರ್ಮಗಳ ಮೇಲೆ ದ್ವೇಷ ಹುಟ್ಟುವಂತೆ ಮಾಡುತ್ತಿದ್ದಾರೆ. ಸರ್ಕಾರ ಜಮೀರ್ ರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನಂತರ ಪಟ್ಟಣದ ಅನಂತ್ರಾಂ ವೃತ್ತದಿಂದ ಪ್ರತಿಭಟನೆ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ತಹಸೀಲ್ದಾರ್ ಬಿ.ವಿ.ಕುಮಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ, ಉಪಾಧ್ಯಕ್ಷ ಎನ್.ಬಸವರಾಜು, ಸದಸ್ಯರಾದ ಎಂ.ಟಿ.ಪ್ರಶಾಂತ್, ನಾಗೇಶ್, ಮುಖಂಡರಾದ ಹನುಮಂತು, ನಾಗೇಶ್, ಪೊತ್ತಂಡೆ ನಾಗರಾಜು, ಕಾಂತರಾಜು, ಅಂಕರಾಜು, ಸಿದ್ದಾಚಾರಿ, ವೇಣು, ಪ್ರಭು, ನಾಗರಾಜು, ಸದಾನಂದ, ಗುಂಡ, ಕಂಬರಾಜು ಹಲವರು ಭಾಗವಹಿಸಿದ್ದರು.