ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಿಸಲು ಆಗ್ರಹ

KannadaprabhaNewsNetwork | Published : May 27, 2025 11:57 PM
ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡುವಂತೆ ಒತ್ತಾಯಿಸಿ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಗದಗ:ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡುವಂತೆ ಒತ್ತಾಯಿಸಿ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ಜಿಲ್ಲಾ ಘಟಕದ ವತಿಯಿಂದ

ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ವೇಳೆ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ. ಲಮಾಣಿ ಮಾತನಾಡಿ, ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಅನೇಕ ಕಾರಣಗಳಿಂದ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು 2000ನೇ ಸಾಲಿನವರೆಗೆ ಅವಕಾಶ ನೀಡಿರುತ್ತೀರಿ. ಆದರೆ ಒಳಮೀಸಲಾತಿ ಜಾರಿ ಕಾರಣ ಹಾಗೂ ಸರ್ಕಾರದ ತಂತ್ರಾಂಶದ ಕಾರಣ ಇಲ್ಲಿಯವರೆಗೆ ಅವಕಾಶ ಇರುವುದಿಲ್ಲ. ಅದಕ್ಕಾಗಿ ಸರಕಾರಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರನ್ನು ತುಂಬಿಕೊಳ್ಳುವಂತೆ ಆದೇಶ ಮಾಡಿರುವಿರಿ. ಅದರಂತೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಆದೇಶ ಆಗುವವರೆಗೆ ಖಾಸಗಿ ಶಾಲೆಗಳಗೂ ಸರ್ಕಾರವೇ ಅತಿಥಿ ಶಿಕ್ಷಕರನ್ನು ವೇತನದೊಂದಿಗೆ ನೇಮಿಸಿಕೊಳ್ಳಲು ಆದೇಶ ನೀಡಬೇಕೆಂದು ಆಗ್ರಹಿಸಿದರು.ಈಗಾಗಲೇ ರಾಜ್ಯದಲ್ಲಿ ಹಲವಾರು ಜನಪರ ಹಾಗೂ ಬಡವರ ಪರ ವಿನೂತನ ಕಾರ್ಯಕ್ರಮಗಳನ್ನು ನೀಡಿ ನಾಡಿನ ಜನರ ಗೌರವ ಪ್ರೀತಿಗೆ ಪಾತ್ರರಾಗಿರುವಿರಿ. ಅದರಂತೆ ಸಮಾಜದಲ್ಲಿ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಸಿಗುವಂತಹ ವ್ಯವಸ್ಥೆ ಇರುವುದು ಶಿಕ್ಷಣ ಇಲಾಖೆಯಲ್ಲಿ ಹಾಗೂ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಶಿಕ್ಷಣ ಇಲಾಖೆಯೇ ಭದ್ರ ಬುನಾದಿ ಅದು ಖಾಸಗಿಯಾಗಿರಲಿ ಅಥವಾ ಸರ್ಕಾರಿಯಾಗಿರಲಿ ಅದಕ್ಕಾಗಿ ಮಕ್ಕಳ ಶಿಕ್ಷಣ ಸಮಗ್ರವಾಗಿ ಪೂರೈಸಲು ಶಿಕ್ಷಕರ ಅನಿವಾರ್ಯತೆ ಹಾಗೂ ಅವಶ್ಯಕತೆ ಇಲಾಖೆಗೆ ಇರುತ್ತದೆ. ನಿವೃತ್ತಿಯಿಂದಾಗ ಮರಣದಿಂದಾಗಲಿ ಖಾಲಿ ಇರುವ ಹುದ್ದೆಗಳಿಗೆ ತಕ್ಷಣವೇ ಅತಿಥಿ ಶಿಕ್ಷಕರನ್ನು ನೇಮಿಸುವ ಪ್ರಕ್ರಿಯೆಗೆ ಸರ್ಕಾರ ಪ್ರಥಮ ಅದ್ಯತೆ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿಯಲ್ಲಿ ತಿಳಿಸಿದರು.

ಈ ವೇಳೆ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.