ಸ್ವಾತಂತ್ರ್ಯಾನಂತರ ಬಹುಸಂಖ್ಯಾತ ಕಾಡುಗೊಲ್ಲ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಾ ಬಂದಿದ್ದರೂ, ಸಮುದಾಯದ ಒಬ್ಬರೂ ಶಾಸಕನಾಗುವ ಅವಕಾಶ ಸಿಕ್ಕಿಲ್ಲ. ಆದ್ದರಿಂದ ಹಿರಿಯೂರು ಉಪಚುನಾವಣೆಯಲ್ಲಿ ಕಾಡುಗೊಲ್ಲ ಜನಾಂಗಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ನಿವೃತ್ತ ಕೆ.ಇ.ಎಸ್ ಅಧಿಕಾರಿ ಸಣ್ಣಚಿತ್ತಯ್ಯ ಹೇಳಿದರು.
ಕನ್ನಡಪ್ರಭ ವಾರ್ತೆ ಶಿರಾ
ಸ್ವಾತಂತ್ರ್ಯಾನಂತರ ಬಹುಸಂಖ್ಯಾತ ಕಾಡುಗೊಲ್ಲ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಾ ಬಂದಿದ್ದರೂ, ಸಮುದಾಯದ ಒಬ್ಬರೂ ಶಾಸಕನಾಗುವ ಅವಕಾಶ ಸಿಕ್ಕಿಲ್ಲ. ಆದ್ದರಿಂದ ಹಿರಿಯೂರು ಉಪಚುನಾವಣೆಯಲ್ಲಿ ಕಾಡುಗೊಲ್ಲ ಜನಾಂಗಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ನಿವೃತ್ತ ಕೆ.ಇ.ಎಸ್ ಅಧಿಕಾರಿ ಸಣ್ಣಚಿತ್ತಯ್ಯ ಹೇಳಿದರು.
ಅವರು ಶುಕ್ರವಾರ ಶಿರಾ ತಾಲೂಕಿನ ಕಳುವರಹಳ್ಳಿ ಶ್ರೀ ಜುಂಜಪ್ಪನ ಗುಡ್ಡೆಯಲ್ಲಿ ತುಮಕೂರು ಜಿಲ್ಲಾ ಕಾಡುಗೊಲ್ಲರ ಸಂಘ, ಶಿರಾ ತಾಲೂಕು ಕಾಡುಗೊಲ್ಲರ ಸಂಘಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ಕಾಡುಗೊಲ್ಲ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ ಬೆನ್ನೆಲುಬಾಗಿ ನಿಂತು ಪ್ರಾರಂಭದಿಂದಲೂ ರಾಜಕೀಯವಾಗಿ ಪಕ್ಷಕ್ಕೆ ಶಕ್ತಿ ತುಂಬಿದೆ. ಆದರೂ ಕಾಂಗ್ರೆಸ್ ಪಕ್ಷ ಕಾಡುಗೊಲ್ಲ ಸಮುದಾಯವನ್ನು ಗುರುತಿಸಿಲ್ಲ. ಇನ್ನೂ ಮುಂದಾದರೂ ಕಾಡುಗೊಲ್ಲ ಸಮುದಾಯವನ್ನು ಗುರುತಿಸಿ ಹಿರಿಯೂರು ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ನನಗೆ ಟಿಕೆಟ್ ನೀಡಬೇಕು ಎಂದರು.
ನನಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡುವ ಭರವಸೆ ನೀಡಿದೆ. ಈ ಹಿನ್ನೆಲೆಯಲ್ಲಿ ಶಿರಾ ಹಾಗೂ ಹಿರಿಯೂರು ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಕಾಡುಗೊಲ್ಲ ಸಮುದಾಯವು ಒಗ್ಗಟ್ಟಾಗಿ ನನ್ನನ್ನು ಗೆಲುವಿಗೆ ಶ್ರಮಿಸಬೇಕಿದೆ ಎಂದರು.
ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್ ಮಾತನಾಡಿ, ಕಾಡುಗೊಲ್ಲ ಸಮುದಾಯವು ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಬಹುಸಂಖ್ಯಾತವಾಗಿದ್ದರೂ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಂದ ಸಮರ್ಪಕ ರಾಜಕೀಯ ಪ್ರಾತಿನಿಧ್ಯ ದೊರೆತಿಲ್ಲ. ಯಾದವ ಸಮುದಾಯದ ಹೆಸರಿನಲ್ಲಿ ರಾಜಕೀಯವಾಗಿ ವಂಚಿತರಾಗಿರುವ ಕಾಡುಗೊಲ್ಲರಿಗೆ ಸೂಕ್ತ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮಾತನಾಡಿ ನಿವೃತ್ತ ಕೆ.ಇ.ಎಸ್ ಅಧಿಕಾರಿ ಸಣ್ಣಚಿತ್ತಯ್ಯ ಅವರು ಕಷ್ಟದಿಂದ ಮೇಲೆ ಬಂದು ಕೆ.ಇ.ಎಸ್ ಅಧಿಕಾರಿಯಾಗಿ ಉತ್ತಮವಾಗಿ ಸೇವೆ ಸಲ್ಲಿಸಿ ಜನಮಾನಸದಲ್ಲಿ ಉಳಿದಿದ್ದಾರೆ. ಇದಕ್ಕೆ ಸಾಕ್ಷಿ ಇಂದು ಸೇರಿರುವ ಸಾವಿರಾರು ಜನ ಇವರ ಅಭಿಮಾನಿಗಳು. ಇಂತಹ ವ್ಯಕ್ತಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದರೆ ಗೆಲುವು ನಿಶ್ಚಿತ. ಹಿರಿಯೂರು ಉಪಚುನಾವಣೆಗೆ ಟಿಕೆಟ್ ನೀಡಿದರೆ ನಾನು ಸಂಪೂರ್ಣವಾಗಿ ಅವರ ಬೆಂಬಲಕ್ಕೆ ನಿಂತು ಗೆಲ್ಲಿಸಲು ಶ್ರಮಿಸುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ವನಕಲ್ಲು ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಬಸವ ರಮಾನಂದ ಸ್ವಾಮೀಜಿ, ಅಖಿಲ ಭಾರತ ಯಾದವ ಮಹಾಸಂಸ್ಥಾನ ಪೀಠದ ಶ್ರೀಕೃಷ್ಣ ಯಾದವಾನಂದ ಸ್ವಾಮಿಗಳು, ಬೇವಿನಹಳ್ಳಿ ಸುದರ್ಶನ್, ಸೋರೆಕುಂಟೆ ಸತ್ಯನಾರಾಯಣ್, ಸೋರೆಕುಂಟೆ ಸಾಯಿಪ್ರಕಾಶ್, ತುಮಕೂರು ಜಿಲ್ಲಾ ಗೊಲ್ಲರ ಸಂಘದ ಅಧ್ಯಕ್ಷ ಚಂದ್ರಶೇಖರಗೌಡ ಸೇರಿದಂತೆ ಹಲವರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.