ಹಾವೇರಿ, ಸವಣೂರು ಬರ ಪೀಡಿತ ಘೋಷಣೆಗೆ ಆಗ್ರಹ

KannadaprabhaNewsNetwork |  
Published : Sep 04, 2026, 02:30 AM IST
ವೆಂಕಟೇಶ ನಾರಾಯಣಿ | Kannada Prabha

ಸಾರಾಂಶ

ಹಾವೇರಿ ಹಾಗೂ ಸವಣೂರು ತಾಲೂಕುಗಳಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿರುವುದರಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಹಾವೇರಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಈ ಎರಡೂ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿ ರೈತರ ನೆರವಿಗೆ ಸರ್ಕಾರ ಬರಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟೇಶ ನಾರಾಯಣಿ ಒತ್ತಾಯಿಸಿದರು.

ಹಾವೇರಿ: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬೆಳೆಗಳ ಇಳುವರಿ ಕುಂಠಿತವಾಗಿದೆ. ಹಾವೇರಿ ಹಾಗೂ ಸವಣೂರು ತಾಲೂಕುಗಳಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿರುವುದರಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಹಾವೇರಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಈ ಎರಡೂ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿ ರೈತರ ನೆರವಿಗೆ ಸರ್ಕಾರ ಬರಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟೇಶ ನಾರಾಯಣಿ ಒತ್ತಾಯಿಸಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಯಲು ಸೀಮೆ ಪ್ರದೇಶವಾಗಿರುವ ಹಾವೇರಿ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಹಾಗೂ ಬೆಳೆ ಬಂದಿಲ್ಲ. ಹೀಗಾಗಿ ಕೆರೆ-ಕಟ್ಟೆಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯದ ಸ್ಥಿತಿ ನಿರ್ಮಾಣವಾಗಿದೆ. ಪ್ರಸಕ್ತ ವರ್ಷವೂ ಮಳೆ ಕೊರತೆಯ ನಡುವೆಯೇ ರೈತರು ಅಲ್ಪ ಪ್ರಮಾಣದಲ್ಲಿ ಬೆಳೆ ಬೆಳೆದಿದ್ದು, ಇದೀಗ ಇಳುವರಿ ಕುಂಠಿತವಾಗಿರುವುದರಿಂದ ಮಾಡಿದ ಖರ್ಚು ಕೂಡ ಕೈಗೆ ಬಾರದೇ ಆತಂಕದಲ್ಲಿದ್ದಾರೆ ಎಂದರು.

ಪ್ರಸಕ್ತ ವರ್ಷ ಅರೆಬರೆ ಮಳೆಯಿಂದ ಮೆಕ್ಕೆಜೋಳ, ಸೋಯಾಬಿನ್, ಹತ್ತಿ ಹಾಗೂ ಶೇಂಗಾ ಬೆಳೆಗಳು ಬಿಸಿಲಿನ ತಾಪಕ್ಕೆ ಒಣಗಿ ಹೋಗಿವೆ. ಇಂತಹ ಪರಿಸ್ಥಿತಿಯಲ್ಲಿಯೂ ಜಿಲ್ಲೆಯಲ್ಲಿ ಬರದ ಪರಿಸ್ಥಿತಿ ಇಲ್ಲ ಎಂಬ ರೀತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರು ನೀಡಿರುವ ಹೇಳಿಕೆ ಸರಿಯಲ್ಲ. ಬೆಳೆ ಹಸಿರಾಗಿದ್ದರೂ ತೆನೆ, ಕಾಳು ಕಟ್ಟುತ್ತಿಲ್ಲ. ಮೆಕ್ಕೆಜೋಳದಲ್ಲಿ ಕೇವಲ ಒಣಗಿದ ಬೆಂಡು ಮಾತ್ರ ಇದೆ. ಸೋಯಾಬಿನ್‌ನಲ್ಲಿ ಸರಿಯಾಗಿ ಕಾಳು ಮೂಡಿಲ್ಲ. ಜಿಲ್ಲೆಯ ವಸ್ತುಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತಂದು ಹಾವೇರಿ ಮತ್ತು ಸವಣೂರು ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲು ಸಚಿವರು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮುಖಂಡ ಹನುಮಂತಪ್ಪ ದಾಸರ ಮಾತನಾಡಿ, ತಾಲೂಕಿನ ಪೂರ್ವ ಭಾಗದಲ್ಲಿರುವ ಬಸಾಪುರ, ಶಿಬಾರ, ಯಲಗಚ್ಚ, ಕೂರಗುಂದ, ಭರಡಿ ಸೇರಿದಂತೆ ಜಿಲ್ಲೆಯಲ್ಲಿ ಬರದ ಛಾಯೆ ಇದ್ದು, ಸರ್ಕಾರ ಕೂಡಲೇ ಹಾವೇರಿ, ಸವಣೂರು ತಾಲೂಕುಗಳನ್ನು ಶೀಘ್ರವೇ ಬರಪೀಡಿತ ಎಂದು ಘೋಷಿಸಬೇಕು. ಇಲ್ಲದಿದ್ದರೆ, ಬಳ್ಳಾರಿ ಚಲೋ ಮಾದರಿಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ, ವೆಂಕಟೇಶ ನಾರಾಯಣಿ ನೇತೃತ್ವದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಮುಖಂಡರಾದ ಆನಂದ ಕಲಾಲ, ಲಲಿತಾ ಗುಂಡೇನಹಳ್ಳಿ, ಶ್ರೀದೇವಮ್ಮ ರಡ್ಡಿ, ದಯಾನಂದ ಭಜಂತ್ರಿ, ರಾಜು ಕಳ್ಳಿಮನಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಡವರ್ಗಕ್ಕೆ ಗ್ಯಾರಂಟಿ ಯೋಜನೆ ವರದಾನ: ಪಿ.ಟಿ. ಪರಮೇಶ್ವರ ನಾಯ್ಕ
ಬಿಜೆಪಿ ಪಾದಯಾತ್ರೆ ಇಂದು ಕಾರಟಗಿ ಪ್ರವೇಶ