ಗದಗ: ಅರ್ಹ ಫಲಾನುಭವಿಗಳಿಗೆ ವಸತಿ ಯೋಜನೆ ಕಲ್ಪಿಸಲು ಆಗ್ರಹಿಸಿ ಜಿಲ್ಲಾ ಸ್ಲಂ ಸಮಿತಿಯಿಂದ ಸ್ಲಂ ಬೋರ್ಡ್ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಸ್ಥಳೀಯ ಜನಪ್ರತಿನಿಧಿಗಳು ತಮ್ಮ ಪ್ರಭಾವದಿಂದ ಸ್ಲಂರಹಿತ ಪ್ರದೇಶದಲ್ಲಿ ಮನೆಗಳನ್ನು ನಿರ್ಮಿಸಲು ಸೂಚಿಸಿದ್ದರಿಂದ ನಗರದ ಅರ್ಹ ಸ್ಲಂ ನಿವಾಸಿಗಳಿಗೆ, ವಸತಿರಹಿತರಿಗೆ ಜನಪ್ರತಿನಿಧಿಗಳಿಂದ ಅನ್ಯಾಯ ಮಾಡಲಾಗುತ್ತಿದೆ. ಕೂಡಲೇ ಇದನ್ನು ಸರಿಪಡಿಸಿ ಸ್ಲಂ ಪ್ರದೇಶಗಳಲ್ಲಿ ಮಾತ್ರ ಸರ್ಕಾರದ ವಸತಿ ಯೋಜನೆಯ ಮನೆಗಳನ್ನು ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.
ನಗರದ ಸ್ಲಂ ಪ್ರದೇಶಗಳ ಜಲ್ವಂತ ಸಮಸ್ಯೆಗಳಾದ ಮಹಿಳೆಯರಿಗಾಗಿ ಶೌಚಾಲಯ ನಿರ್ಮಾಣ ಮಾಡಬೇಕು. ಸ್ಲಂ ಭವನ ನಿರ್ಮಾಣಕ್ಕಾಗಿ ಅನುದಾನ ಮಂಜೂರುಗೊಳಿಸಬೇಕು. ಕೊಳಗೇರಿಗಳ ಅಭಿವೃದ್ಧಿ ಅನುದಾನ ಮಂಜೂರು ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲು, ಅಘೋಷಿತ ಗುಡಿಸಲು ಪ್ರದೇಶಗಳ ಘೋಷಣೆಗೆ ತಕ್ಷಣ ಕ್ರಮ ಕೈಗೊಳ್ಳಲು, ನಗರದ ಸ್ಲಂ ಜನಸಂಖ್ಯೆಗೆ ಅನುಗುಣವಾಗಿ ಮನೆಗಳನ್ನು ನಿರ್ಮಿಸಲು ಭೂಮಿಯನ್ನು ಖರೀದಿಸಲು, ಸ್ಲಂ ಜನರ ಸಮಸ್ಯಗಳ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತಕ್ಷಣ ಕುಂದುಕೊರತೆಗಳ ಸಭೆ ಆಯೋಜಿಸಬೇಕು ಎಂದರು.ಇದಕ್ಕೆ ಸ್ಪಂದಿಸಿದ ಸ್ಲಂ ಬೋರ್ಡ್ ಅಧಿಕಾರಿಗಳು ಸ್ಲಂ ಜನರ ಸಮಸ್ಯೆಗಳಿಗೆ ಹಂತ- ಹಂತವಾಗಿ ಕೆಲಸ ಮಾಡಲಾಗುವುದು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆಯಲು ಪತ್ರವನ್ನು ಕಳುಹಿಸಿ ನೇರವಾಗಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಸಭೆಯ ದಿನಾಂಕವನ್ನು ನಿಗದಿಗೊಳಿಸಲಾಗುವುದೆಂದು ಭರವಸೆ ನೀಡಿದರು.