ಸ್ಮಶಾನದ ಅಭಿವೃದ್ಧಿ ಕಾಮಗಾರಿ ತ್ವರಿತಗೊಳಿಸಲು ಆಗ್ರಹ

KannadaprabhaNewsNetwork |  
Published : Jan 14, 2026, 03:45 AM IST
ಸ್ಮಶಾನದ ಸ್ಥಳ. | Kannada Prabha

ಸಾರಾಂಶ

ಮಳೆಗಾಲದಲ್ಲಿ ಶವಸಂಸ್ಕಾರಕ್ಕೆ ಅತ್ಯಗತ್ಯವಾಗಿರುವ ಶೆಡ್ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಇದನ್ನು ಕೂಡಲೇ ಪೂರ್ಣಗೊಳಿಸುವಂತೆ ಗ್ರಾಮಸ್ಥರು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಆಗ್ರಹಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕಾರವಾರ

ತಾಲೂಕು ವ್ಯಾಪ್ತಿಯ ಕಡವಾಡ ಗ್ರಾಪಂ ವ್ಯಾಪ್ತಿಯಲ್ಲಿರುವ ಸ್ಮಶಾನದ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗಿದ್ದು, ದಶಕಗಳ ಬೇಡಿಕೆಯಾಗಿದ್ದ ಸುಸಜ್ಜಿತ ಕಾಂಕ್ರೀಟ್ ರಸ್ತೆ ಮತ್ತು ನೀರಿನ ಟ್ಯಾಂಕ್ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ, ಮಳೆಗಾಲದಲ್ಲಿ ಶವಸಂಸ್ಕಾರಕ್ಕೆ ಅತ್ಯಗತ್ಯವಾಗಿರುವ ಶೆಡ್ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಇದನ್ನು ಕೂಡಲೇ ಪೂರ್ಣಗೊಳಿಸುವಂತೆ ಗ್ರಾಮಸ್ಥರು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಆಗ್ರಹಿಸಿದ್ದಾರೆ.

ಹಲವು ವರ್ಷಗಳಿಂದ ಕಡವಾಡ ಸ್ಮಶಾನಕ್ಕೆ ತೆರಳಲು ಸರಿಯಾದ ರಸ್ತೆ ಸಂಪರ್ಕವಿಲ್ಲದೆ, ಶವವನ್ನು ಹೊತ್ತುಕೊಂಡು ಎತ್ತರದ ರೈಲ್ವೆ ಹಳಿ ದಾಟಿ ಹೋಗಬೇಕಾದ ದುಸ್ಥಿತಿ ಇತ್ತು. ಜೊತೆಗೆ ಸ್ಮಶಾನದಲ್ಲಿ ನೀರಿನ ಅಭಾವ ಕೂಡ ಎದುರಾಗಿತ್ತು. ಈ ಗಂಭೀರ ಸಮಸ್ಯೆಯನ್ನು ಅರಿತ ಗ್ರಾಪಂ ಆಡಳಿತ ಮಂಡಳಿ, ಕರವೇ ಸಂಘಟನೆ ಹಾಗೂ ಸ್ಥಳೀಯರು ಶಾಸಕರಿಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ತಕ್ಷಣ ಸ್ಪಂದಿಸಿದ ಕಾರವಾರ ಶಾಸಕ ಸತೀಶ್ ಸೈಲ್, ತಮ್ಮ ಅನುದಾನದಡಿ ಸ್ಮಶಾನಕ್ಕೆ ಸುಸಜ್ಜಿತ ಕಾಂಕ್ರೀಟ್ ರಸ್ತೆ ನಿರ್ಮಿಸಿಕೊಟ್ಟಿದ್ದಾರೆ. ಶಾಸಕರ ಈ ತ್ವರಿತ ಸ್ಪಂದನೆಗೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದು, ಮೆಚ್ಚುಗೆ ಸೂಚಿಸಿದ್ದಾರೆ.

ಇದೇ ವೇಳೆ, ಸ್ಮಶಾನದಲ್ಲಿ ನೀರಿನ ಸಮಸ್ಯೆ ನೀಗಿಸಲು ಕಡವಾಡ ಗ್ರಾಪಂ ವತಿಯಿಂದ 2024-25ನೇ ಸಾಲಿನ 15ನೇ ಹಣಕಾಸು ಯೋಜನೆಯಡಿ ನೂತನ ನೀರಿನ ಟ್ಯಾಂಕ್ ಅಳವಡಿಸಲಾಗಿದೆ. ಆದರೆ, ಶವ ಸಂಸ್ಕಾರಕ್ಕೆ ನಿರ್ಮಿಸಲಾಗುತ್ತಿರುವ ಶೆಡ್ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಸದ್ಯ ಪಿಲ್ಲರ್ ಕೆಲಸ ಮುಗಿದಿದ್ದರೂ, ಮೇಲ್ಛಾವಣಿ ಶೀಟ್ ಅಳವಡಿಕೆ ಹಾಗೂ ಶವ ಸಂಸ್ಕಾರ ಮಾಡುವ ಕಬ್ಬಿಣದ ರಾಡ್ ಅಳವಡಿಕೆ ಬಾಕಿ ಉಳಿದಿದೆ. ಮಳೆಗಾಲ ಆರಂಭವಾಗುವ ಮುನ್ನ ಈ ಶೆಡ್ ಕಾಮಗಾರಿ ಪೂರ್ಣಗೊಳ್ಳದಿದ್ದರೆ ಶವಸಂಸ್ಕಾರ ನೆರವೇರಿಸಲು ತೀವ್ರ ತೊಂದರೆಯಾಗಲಿದೆ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಗ್ರಾಪಂ ಅಧ್ಯಕ್ಷ ಆನಂದು ಆರ್.ನಾಯ್ಕ, ಪ್ರಸ್ತುತ ಸ್ಮಶಾನದ ಹಳೆಯ ಕಬ್ಬಿಣದ ಸರಳುಗಳು ತುಕ್ಕು ಹಿಡಿದು ಮುರಿದು ಬಿದ್ದಿದ್ದು, ಹೊಸದನ್ನು ಅಳವಡಿಸಲು ಹಾಗೂ ಆವರಣದಲ್ಲಿ ಸಿಮೆಂಟ್ ಬ್ಲಾಕ್ ಹಾಕಲು ಪಂಚಾಯಿತಿ ಮಟ್ಟದಲ್ಲಿ ಚಿಂತನೆ ನಡೆಸಲಾಗಿದೆ. ಈಗ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಶಾಸಕರು ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರತಿಯೊಬ್ಬರೂ ಗ್ರಾಹಕರ ಹಕ್ಕುಗಳ ಮಹತ್ವ ತಿಳಿದುಕೊಳ್ಳಲಿ: ಅಪರ ಜಿಲ್ಲಾಧಿಕಾರಿ
ಸ್ವ ಸಹಾಯ ಸಂಘದಿಂದ ಸಮಾಜಮುಖಿ ಕಾರ್ಯ: ರಾಧಾಕೃಷ್ಣ ಭಟ್ಟ