ಕನ್ನಡಪ್ರಭ ವಾರ್ತೆ ತುಮಕೂರು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಮುಂದಿನ ಸಿಎಂ ಆಗಿ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಬೇಕು ಎಂದು ಕರ್ನಾಟಕ ರಾಜ್ಯ ಸಮಾನ ಮನಸ್ಕರ ಪ್ರಧಾನ ಸಂಚಾಲಕ ಬಿ.ಎಸ್. ಪ್ರಸನ್ನಕುಮಾರ್ ಮನವಿ ಮಾಡಿದರು. ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದೇಶದಲ್ಲಿ ಪಿ.ಎಚ್.ಡಿ ಪದವಿ ಪಡೆದು, ಮಾಜಿ ಪ್ರಧಾನಿ ದಿವಂಗತ ರಾಜೀವ್ಗಾಂಧಿ ರವರ ಕೋರಿಕೆಯ ಮೇರೆಗೆ ಕಾಂಗ್ರೆಸ್ ಪಕ್ಷವನ್ನು ಸೇರಿ ಅಂದಿನಿಂದ ಇಂದಿನವರೆಗೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಪಕ್ಷವನ್ನು ಸಂಘಟಿಸುತ್ತಾ ಬಂದಿದ್ದಾರೆ. ಇಂತಹ ಪಕ್ಷನಿಷ್ಠ, ಕಾಂಗ್ರೆಸ್ ಕಟ್ಟಾಳು ಡಾ. ಜಿ. ಪರಮೇಶ್ವರ್ ರವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದರು. ಪಕ್ಷ ನಿಷ್ಠೆಗೆ ಹೆಸರಾಗಿರುವ ಡಾ. ಜಿ. ಪರಮೇಶ್ವರ್ ವಿದ್ಯಾವಂತರು, ಪಕ್ಷದ ಎಲ್ಲಾ ಹಂತದ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಪಕ್ಷ ಹಾಗೂ ಸರ್ಕಾರದ ಎಲ್ಲಾ ಹುದ್ದೆಗಳನ್ನು ಸಮರ್ಪಕವಾಗಿ ನಿರ್ವಹಿಸಿದ ಚಾಕುಚಕ್ಯತೆ ಇದೆ. ಎಲ್ಲಾ ನಾಯಕರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಗುಣವಿದೆ. ೨೦೧೩ ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಇಡೀ ರಾಜ್ಯವನ್ನು ಸುತ್ತಿ ಪಕ್ಷವನ್ನು ಅಧಿಕಾರಕ್ಕೆ ತಂದು, ತಾವು ಸೋಲು ಅನುಭವಿಸಿ, ಮುಖ್ಯಮಂತ್ರಿಯಾಗುವ ಅವಕಾಶದಿಂದ ವಂಚಿತರಾದರು. ಮುಖ್ಯಮಂತ್ರಿಯಾಗುವ ಅವಕಾಶ ಸಿದ್ದರಾಮಯ್ಯ ಅವರಿಗೆ ಅನಾಯಾಸವಾಗಿ ದೊರೆಯಿತು. ಈಗಾಗಲೇ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಈಗಾಗಲೇ ಏಳುವರೆ ವರ್ಷ ಪೂರೈಸಿದ್ದಾರೆ. ಸಿದ್ದರಾಮಯ್ಯನವರ ಹಿಂದೆ ಲಕ್ಷ್ಮಣನ ರೀತಿ ಡಾ. ಜಿ. ಪರಮೇಶ್ವರ್ ಗಟ್ಟಿಯಾಗಿ ನಿಂತು ರಾಜ್ಯದ ಆಗು ಹೋಗುಗಳಿಗೆ ಸ್ಪಂದಿಸಿ ಕೆಲಸ ಮಾಡಿದ್ದಾರೆ. ಹಾಗಾಗಿ ಮುಖ್ಯಮಂತ್ರಿಗಳಾಗಿರುವ ಸಿದ್ದರಾಮಯ್ಯ ಅವರು ಪಕ್ಷದ ಹೈಕಮಾಂಡ್ ಮನವೊಲಿಸಿ ಸಜ್ಜನ ರಾಜಕಾರಣಿ ಡಾ. ಜಿ. ಪರಮೇಶ್ವರ್ ಅವರನ್ನು ತಮ್ಮ ಸ್ಥಾನಕ್ಕೆ ಆಯ್ಕೆ ಮಾಡಿ, ಕಾಂಗ್ರೆಸ್ ಸರ್ಕಾರದ ಐದು ವರ್ಷದ ಅವಧಿ ಪೂರ್ಣಗೊಳ್ಳುವವರೆಗೆ ಅವರ ಬೆನ್ನಿಗೆ ನಿಂತು ಕೆಲಸ ಮಾಡಬೇಕು ಎಂದು ಅವರು ಮನವಿ ಮಾಡಿದರು.