ಕನ್ನಡಪ್ರಭವಾರ್ತೆ ಚಾಮರಾಜನಗರಕರ್ನಾಟಕ ರಾಜ್ಯದಲ್ಲಿ ಎಲ್ಲಾ ಕಡೆಗಳಲ್ಲೂ ಕನ್ನಡ ನಾಮಫಲಕವನ್ನು ಕಡ್ಡಾಯವಾಗಿ ಹಾಕಲೇಬೇಕೆಂದು ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅಧ್ಯಕ್ಷತೆಯಲ್ಲಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ನಗರದ ಭುವನೇಶ್ವರಿ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಚಾರ ತಡೆದು ಭಿತ್ತಿಪತ್ರಗಳನ್ನು ಹಿಡಿದು ಘೋಷಣೆಗಳನ್ನು ಕೂಗುವ ಮೂಲಕ ಪ್ರತಿಭಟನೆ ನಡೆಸಿದರು.ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಹಿಂದಿನ ಸರ್ಕಾರ ಸುರ್ಗೀವಾಜ್ಞೆ ಹೊರಡಿಸಿ ರಾಜ್ಯಪಾಲರಿಗೆ ಕಳುಹಿಸಿಕೊಟ್ಟಿತ್ತು. ರಾಜ್ಯಪಾಲರು ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ. ಇದು ಅತ್ಯಂತ ಖಂಡನೀಯವಾದದ್ದು. ರಾಜ್ಯ ಸರ್ಕಾರ ಶೇ.60ರಷ್ಟು ಕನ್ನಡ ನಾಮಫಲಕವನ್ನು ಹಾಕುವಂತೆ ಮಸೂದೆ ತರಲು ಮುಂದಾಗಿದೆ. ಶೇ.60ರ ಬದಲು ಶೇ.80ರಷ್ಟು ಕನ್ನಡ ನಾಮಫಲಕವನ್ನು ಕರ್ನಾಟಕದಲ್ಲಿ ಕಡ್ಡಾಯ ಮಾಡಬೇಕು. ಅಧಿವೇಶನದಲ್ಲಿ ಮಸೂದೆಯನ್ನು ತರಬೇಕು. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಆದ್ದರಿಂದ ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದೂ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಚಾ.ವೆಂ.ರಾಜ್ಗೋಪಾಲ್, ಚಾ.ರ.ಕುಮಾರ್, ಪಣ್ಯದಹುಂಡಿ ರಾಜು, ವೀರಭದ್ರ, ಆಟೋ ನಾಗೇಶ್, ರಾಜಪ್ಪ, ಸೋಮವಾರಪೇಟೆ ಮಂಜು, ಗು.ಪುರುಷೋತ್ತಮ್, ನಂಜುಂಡಸ್ವಾಮಿ ಸೇರಿದಂತೆ ಇನ್ನಿತರರಿದ್ದರು.