ಕನ್ನಡಪ್ರಭ ವಾರ್ತೆ ಉಡುಪಿ
ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನ ಮಾಡುವುದರ ಮೂಲಕ ಕೇಂದ್ರ ಸರ್ಕಾರದ ಅನುದಾನ ಪಡೆದು ಕರಾವಳಿ ಪ್ರದೇಶದಲ್ಲೂ ಮಹತ್ವದ ರೈಲ್ವೆ ಯೋಜನೆ ಅನುಷ್ಠಾನ ಮಾಡಲು ಅವಕಾಶ ಮಾಡಿಕೊಡುವಂತೆ ಉಡುಪಿ - ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದ ಉಡುಪಿಯ ಶಾಸಕರ ನಿಯೋಗ ರಾಜ್ಯ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲರನ್ನು ಭೇಟಿಯಾಗಿ ಮನವಿ ಮಾಡಿದೆ.ಜಾರ್ಜ್ ಫರ್ನಾಂಡಿಸ್ ಕೇಂದ್ರ ರೈಲ್ವೆ ಸಚಿವರಾಗಿದ್ದಾಗ ಅನುಷ್ಠಾನಕ್ಕೆ ತಂದ ಮಹತ್ವದ ಕೊಂಕಣ ರೈಲ್ವೆ ಯೋಜನೆಗೆ ಸುಮಾರು 30 ವರ್ಷಗಳು ತುಂಬುತ್ತಿದ್ದು, ಪ್ರಸ್ತುತ ಕೊಂಕಣ ರೈಲ್ವೆಯಲ್ಲಿ ಏಕ ಹಳಿಯ ಪ್ರಯಾಣ ಸೌಲಭ್ಯ ಇರುವುದರಿಂದ ಹೆಚ್ಚುವರಿ ರೈಲ್ವೆ ಓಡಾಡಲು ಕಷ್ಟವಾಗುತ್ತಿದೆ ಮತ್ತು ಕೊಂಕಣ ರೈಲ್ವೆಯಲ್ಲಿ ಅನುದಾನದ ಕೊರತೆ ಇರುವುದರಿಂದ ನೂತನ ರೈಲ್ವೆ ನಿಲ್ದಾಣಗಳೂ ಸೇರಿದಂತೆ, ಮೂಲಭೂತ ಸೌಕರ್ಯ ವ್ಯವಸ್ಥೆಗೆ ಆರ್ಥಿಕ ಕೊರತೆ ಉಂಟಾಗುತ್ತಿದೆ. ಆದ್ದರಿಂದ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಇಲಾಖೆಯಲ್ಲಿ ವಿಲೀನ ಮಾಡಬೇಕು ಎಂದವರು ಮಾಡಿಕೊಡಬೇಕು ಎಂದು ಮನವಿ ಸಲ್ಲಿಸಿ, ಸುದೀರ್ಘವಾಗಿ ಚರ್ಚಿಸಿತು.ಭಾರತೀಯ ರೈಲ್ವೆಯಲ್ಲಿ ವಿಲೀನಗೊಂಡರೆ, ಮುಂದಿನ ದಿನಗಳಲ್ಲಿ ಸಿಂಗಲ್ ಲೈನನ್ನು ಹೊರತುಪಡಿಸಿ, ಡಬ್ಲಿಂಗ್ ಮಾಡುವುದು ಸೇರಿದಂತೆ ಅನೇಕ ಅಭಿವೃದ್ಧಿ ಯೋಜನೆ ಅನುಷ್ಠಾನವಾಗುವ ಲಭ್ಯ ಅವಕಾಶವನ್ನು ಸಚಿವರಿಗೆ ನಿಯೋಗ ಮನವರಿಕೆ ಮಾಡಿತು.ನಿಯೋಗದ ಬೇಡಿಕೆಗೆ ಸಹಮತ ವ್ಯಕ್ತಪಡಿಸಿದ ಎಂ. ಬಿ. ಪಾಟೀಲ್ ತಕ್ಷಣವೇ ಇಲಾಖಾ ಪ್ರಧಾನ ಕಾರ್ಯದರ್ಶಿ ಅವರಿಗೆ ದೂರವಾಣಿ ಮೂಲಕ ಸೂಚನೆ ನೀಡಿ ತಕ್ಷಣ ಕಡತ ಸಿದ್ಧಪಡಿಸುವಂತೆ ಸೂಚಿಸಿದರು ಮತ್ತು ಮುಂದೆ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದು, ಭಾರತೀಯ ರೈಲ್ವೆಯಲ್ಲಿ ವಿಲೀನ ಮಾಡುವ ಬಗ್ಗೆ ನಿಯೋಗಕ್ಕೆ ಭರವಸೆ ನೀಡಿದರು.ನಿಯೋಗದಲ್ಲಿ ಶಾಸಕರಾದ ವಿ. ಸುನಿಲ್ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ ಮತ್ತು ಯಶ್ಪಾಲ್ ಸುವರ್ಣ ಭಾಗವಹಿಸಿದ್ದರು.