ಹೊಸಪೇಟೆ: ಕನಿಷ್ಠ ವೇತನ ಪುನರ್ ವಿಮರ್ಶೆಗೆ ಆಗ್ರಹಿಸಿ ಹಾಗೂ ಕಾರ್ಮಿಕರ ಮೂಲಭೂತ ಹಕ್ಕುಗಳ ಸಂರಕ್ಷಿಸಲು ಒತ್ತಾಯಿಸಿ ವಿಜಯನಗರ ಜಿಲ್ಲಾ ಕೇಂದ್ರ ಹೊಸಪೇಟೆಯ ತಾಲೂಕು ಕಚೇರಿಯ ಮುಂಭಾಗದಲ್ಲಿ ಮಂಗಳವಾರ ಸಿಐಟಿಯು ಸಂಘಟನೆಯ ಪದಾಧಿಕಾರಿಗಳು ಸಾರ್ವಜನಿಕರ ಸಹಿ ಸಂಗ್ರಹ ಚಳವಳಿ ನಡೆಸಿದರು.ಕಾರ್ಮಿಕ ವರ್ಗದ ಆಶಾಕಿರಣವಾದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನಾರಣೆ ದಿನದಂದು ಕರ್ನಾಟಕ ರಾಜ್ಯಾದ್ಯಂತ ಸಹಿ ಸಂಗ್ರಹ ಚಳವಳಿ ನಡೆಸಬೇಕೆಂಬ ಸಿಐಟಿಯು ಕರೆಯ ಮೇರೆಗೆ ಸಿಐಟಿಯು ವಿಜಯನಗರ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಈ ಕಾರ್ಯಕ್ರಮವನ್ನು ನಡೆಸಲಾಯಿತು. ಸ್ಥಳೀಯ ವಕೀಲರಾದ ಮೈನುದ್ದೀನ್ ಮತ್ತು ವೇಣುಗೋಪಾಲ್ ಅವರು ಸಹಿ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
2025ರ ಏ. 11ರಂದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕರಡು ಅಧಿಸೂಚನೆ ಪ್ರಕಟಿಸಿತು. ಆದರೆ ಇದೂ ಕೂಡ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ವಿರುದ್ಧವಾಗಿದ್ದು, ಕಾರ್ಮಿಕ ವರ್ಗದ ಪರವಾಗಿ ಅಂತಿಮ ಅಧಿಸೂಚನೆ ಪ್ರಕಟಿಸಬೇಕೆಂದು ಸರ್ವ ಕಾರ್ಮಿಕ ಸಂಘಟನೆಗಳು ಒತ್ತಾಯಿಸಿವೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ₹31 ಸಾವಿರ ಕನಿಷ್ಠ ವೇತನ ಜಾರಿಗೆ ಮಾಡಲು ಅಧಿಸೂಚನೆ ಹೊರಡಿಸಬೇಕು. ಅಲ್ಲದೆಕೇಂದ್ರ ಸರ್ಕಾರ 29 ಪ್ರಮುಖ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ, 4 ಸಂಹಿತೆಗಳನ್ನು ಜಾರಿ ಮಾಡುವ ಮೂಲಕ ಸ್ವಾತಂತ್ರ್ಯ ಪೂರ್ವದಿಂದಲೂ ಹೋರಾಟಗಳಿಂದ ಪಡೆದ ಕಾರ್ಮಿಕರ ಹಲವು ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸಿದೆ. ಕೆಲಸದ ಅವಧಿ ಹೆಚ್ಚಳ ಮಾಡಿ ಮೇ ದಿನದ ಮಹತ್ವ ನಾಶ ಮಾಡುವುದು ಬಂಡವಾಳಶಾಹಿಗಳ ಹುನ್ನಾರವಾಗಿದೆ. ಇದು ಅಂಬೇಡ್ಕರ್ ಅವರ ಆಶಯದ ವಿರುದ್ಧವಾಗಿದೆ ಎಂದು ಹೇಳಿದರು.
ಸಂಚಾಲಕರಾದ ಕೆ.ಎಂ. ಸ್ವಪ್ನಾ ಸ್ವಾಗತಿಸಿದರು. ಮುಖಂಡರಾದ ಆರ್. ಭಾಸ್ಕರ್ ರೆಡ್ಡಿ ಕಾರ್ಯಕ್ರಮ ನಿರೂಪಿಸಿದರು. ಕೆ.ಎಂ. ಸಂತೋಷ್ ವಂದಿಸಿದರು.