ಈ ವರ್ಷದಿಂದಲೇ ಕಾನೂನು ಕಾಲೇಜು ಆರಂಭಿಸಲು ಒತ್ತಾಯ

KannadaprabhaNewsNetwork |  
Published : Jun 08, 2025, 02:36 AM IST
7ಎಚ್‌ವಿಆರ್3- | Kannada Prabha

ಸಾರಾಂಶ

ಪ್ರಸಕ್ತ ವರ್ಷದಿಂದಲೇ ಸರ್ಕಾರಿ ಕಾನೂನು ವಿದ್ಯಾಲಯ ಪ್ರಾರಂಭಿಸುವಂತೆ ಒತ್ತಾಯಿಸಿ, ಕಟ್ಟಡ ನಿರ್ಮಾಣ ವಿಳಂಬ ಖಂಡಿಸಿ ಎಸ್‌ಎಫ್‌ಐ ಹಾವೇರಿ ಜಿಲ್ಲಾ ಸಮಿತಿಯಿಂದ ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ಅವರಿಗೆ ಮನವಿ ಸಲ್ಲಿಸಲಾಯಿತು.

ಹಾವೇರಿ: ಪ್ರಸಕ್ತ ವರ್ಷದಿಂದಲೇ ಸರ್ಕಾರಿ ಕಾನೂನು ವಿದ್ಯಾಲಯ ಪ್ರಾರಂಭಿಸುವಂತೆ ಒತ್ತಾಯಿಸಿ, ಕಟ್ಟಡ ನಿರ್ಮಾಣ ವಿಳಂಬ ಖಂಡಿಸಿ ಎಸ್‌ಎಫ್‌ಐ ಹಾವೇರಿ ಜಿಲ್ಲಾ ಸಮಿತಿಯಿಂದ ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ಅವರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್. ಮಾತನಾಡಿ, ನೂರಾರು ವಿದ್ಯಾರ್ಥಿಗಳು ಪದವಿ ಮುಗಿಸಿ ಉನ್ನತ ಶಿಕ್ಷಣ ಪಡೆದು ಅದರಲ್ಲೂ ವಕೀಲರಾಗಬೇಕು ಎಂಬ ಕನಸು ಕಟ್ಟಿಕೊಂಡಿರುತ್ತಾರೆ. ಆದರೆ ಹಾವೇರಿ ಜಿಲ್ಲೆಯ ರಚನೆಗೊಂಡು 25 ವರ್ಷ ಕಳೆದರೂ ಸರ್ಕಾರಿ ಕಾನೂನು ಕಾಲೇಜು ಇಲ್ಲದೆ ಬೇರೆ ಬೇರೆ ಜಿಲ್ಲೆಗಳ ಕಡೆ ವಿದ್ಯಾರ್ಥಿಗಳು ಮುಖ ಮಾಡುವಂತಾಗಿದೆ. ಇಡೀ ಜಿಲ್ಲೆಯಲ್ಲಿ ಒಂದೇ ಒಂದು ಖಾಸಗಿ ಕಾನೂನು ಕಾಲೇಜು ಇದ್ದು, ಅದು ರಾಣಿಬೆನ್ನೂರಿನಲ್ಲಿದೆ. ಹೀಗಾಗಿ ಬೇರೆ ಬೇರೆ ತಾಲೂಕಿನ ವಿದ್ಯಾರ್ಥಿಗಳಿಗೆ ಸೀಟ್ ಸಿಗದಿರುವುದು ಹಾಗೂ ಸರ್ಕಾರಿ ಶುಲ್ಕಕ್ಕಿಂತ ದುಪ್ಪಟ್ಟು ಶುಲ್ಕ ವಸೂಲಿ ಮಾಡುವುದರಿಂದ ಸಾಮಾನ್ಯ ಬಡ ವಿದ್ಯಾರ್ಥಿಗಳಿಗೆ ಕಾನೂನು ಪದವಿ ಪಡೆಯುವುದು ಅಸಾಧ್ಯವಾಗಿದೆ. ಅನಿವಾರ್ಯವಾಗಿ ದಾವಣಗೆರೆ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಗೆ ಮೊರೆ ಹೋಗುತ್ತಿದ್ದಾರೆ ಎಂದರು.

ಎಸ್‌ಎಫ್‌ಐ ಅನೇಕ ವರ್ಷಗಳಿಂದ ಹಾವೇರಿ ಜಿಲ್ಲೆಗೊಂದು ಕಾನೂನು ಕಾಲೇಜು ಮಂಜೂರು ಮಾಡುವಂತೆ ಹೋರಾಟ ಮಾಡಿದ ಪ್ರತಿಫಲವಾಗಿ ಹಿಂದಿನ ಸರ್ಕಾರದ ಬಜೆಟ್‌ನಲ್ಲಿ ಘೋಷಣೆ ಮಾಡಿತ್ತು. ಕಾನೂನು ಪದವಿ ಪಡೆಯ ಬಯಸುವ ನೂರಾರು ವಿದ್ಯಾರ್ಥಿಗಳು ಹಾವೇರಿಯಲ್ಲಿ ಸರ್ಕಾರಿ ಕಾಲೇಜು ಪ್ರಾರಂಭವಾಗಬಹುದು ಎಂದು ಎದುರು ನೋಡುತ್ತಾ ಕುಳಿತಿದ್ದಾರೆ. ನೆಲೊಗಲ್ ಗುಡ್ಡದಲ್ಲಿ ಕಟ್ಟಡ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿದೆ. ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು, ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಇತ್ತ ಗಮನಹರಿಸಿ, ಪ್ರಸಕ್ತ ವರ್ಷದಲ್ಲೇ ನಗರದ ಮುನ್ಸಿಪಲ್ ಮೈದಾನದ ಹತ್ತಿರದ ನಗರಸಭೆಯ ವ್ಯಾಪ್ತಿಯಲ್ಲಿ ಬರುವ ಕಾಲೇಜಿನಲ್ಲಿ ಕಾನೂನು ತರಗತಿಗಳನ್ನು ಪ್ರಾರಂಭಿಸುವಂತೆ ಒತ್ತಾಯಿಸಿದರು.

ಖಾಸಗಿ ಕಾಲೇಜ್‌ಗಳಿಗೆ ಅನುಮತಿ ನೀಡುವ ಸರ್ಕಾರ, ತನ್ನದೇ ಸರ್ಕಾರಿ ವಿದ್ಯಾಲಯ ಪ್ರಾರಂಭಿಸಲು ಹಿಂದೇಟು ಹಾಕುವಂತೆ ಕಾಣಲು ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯ ಪ್ರಮುಖ ಕಾರಣವಾಗಿದೆ. ಶೀಘ್ರವಾಗಿ ಕಟ್ಟಡ ನಿರ್ಮಾಣ ಮಾಡಿ, ಇಲ್ಲವೇ ಪರ್ಯಾಯವಾಗಿ ಬೇರೆ ಯಾವುದಾದರೂ ಒಂದು ಸರ್ಕಾರಿ ಕಾಲೇಜಿನಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕಾತಿ ಮಾಡಿಕೊಂಡು ಪ್ರಸಕ್ತ ವರ್ಷದಿಂದಲೇ ಪ್ರಾರಂಭಿಸಬೇಕು. ಯಾವುದೇ ರೀತಿಯ ಪ್ರತಿಕ್ರಿಯೆ ದೊರೆಯದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸುನೀಲ್ ಕುಮಾರ್ ಎಲ್., ನಾಗರಾಜ ಕುರಬಗೊಂಡ, ನೆಹರು ಸೋಮಸಾಗರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ
ಬಿಜೆಪಿ ಶಾಸಕ ಬೈರತಿ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಜಾರಿ?