ಧಾರವಾಡ: ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಮೇಲಿನ ಅಮಾನವೀಯ ಕೆಲಸದ ಒತ್ತಡ, ಬಾಕಿ ವೇತನ ಬಿಡುಗಡೆ ವಿಳಂಬ ಹಾಗೂ ಮಾನಸಿಕ ಕಿರುಕುಳದಿಂದಾಗಿ ಕೊತಬಾಲ ಪಿಡಿಒ ಮುಕ್ತಂಹುಸೇನ ಕರಡಿಗುಡ್ಡ ಆತ್ಮಹತ್ಯೆ ಪ್ರಕರಣದ ಸಮಗ್ರ ತನಿಖೆ ಆಗ್ರಹಿಸಿ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ಹಿಂದೆ ಧಾರವಾಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ದಾಖಲಾಗಿದ್ದ ಪ್ರಕರಣದ ಹಿನ್ನೆಲೆಯಲ್ಲಿ ಅಮಾನತುಗೊಂಡು, ಕಳೆದ ಒಂಭತ್ತು ತಿಂಳುಗಳಿಂದ ಅವರಿಗೆ ಯಾವುದೇ ವೇತನವಾಗಿರಲಿಲ್ಲ. ಎರಡು ತಿಂಗಳ ಹಿಂದೆಯಷ್ಟೇ ಅವರು ಕರ್ತವ್ಯಕ್ಕೆ ಹಾಜರಾಗಿದ್ದರು. ವೇತನವಿಲ್ಲದೆ ಸಂಸಾರ ಸಾಗಿಸಲು ಕಷ್ಟವಾಗಿ, ಅವರ ಪತ್ನಿ ಉದ್ಯೋಗ ಅರಸಿ ಬೆಂಗಳೂರಿಗೆ ಹೋಗುವಂತಹ ಚಿಂತಾಜನಕ ಸ್ಥಿತಿ ಅವರ ಕುಟುಂಬಕ್ಕೊದಗಿತ್ತು.
ಇದಲ್ಲದೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ ಮೇಲೆ ನಡೆಯುತ್ತಿರುವ ನಿರಂತರ ಒತ್ತಡಗಳು ಹಾಗೂ ಸಂಭವಿಸುತ್ತಿರುವ ಅಕಾಲಿಕ ಸಾವುಗಳ ಕುರಿತು ಅಧ್ಯಯನ ಮಾಡಲು ಕಳೆದ ಒಂದು ವರ್ಷದ ಹಿಂದೆ ಮಾನ್ಯ ಮೀನಾಕ್ಷಿ ಸುಂದರಂ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿತ್ತು. ಆದರೆ, ಈ ಸಮಿತಿಯು ಇದುವರೆಗೂ ಸರ್ಕಾರಕ್ಕೆ ವರದಿ ಸಲ್ಲಿಸಿರುವುದಿಲ್ಲ ಎಂದು ಸಂಘ ಸರ್ಕಾರಕ್ಕೆ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ.