ಚಿತ್ರದುರ್ಗ: ವಾಸಿಸಲು ಸ್ವಂತ ಮನೆಗಳಿಲ್ಲದೆ ಅಲೆಮಾರಿ, ಅರೆಅಲೆಮಾರಿ ಜನಾಂಗ ಟೆಂಟ್ಗಳಲ್ಲಿ ಜೀವನ ಸಾಗಿಸುತ್ತಿದ್ದು, ಭೂ ಒಡೆತನ ಸ್ಕೀಂ ಜಾರಿಗೆ ತರುವ ಮೂಲಕ ರಾಜ್ಯ ಸರ್ಕಾರ ವಸತಿ ಸೌಲಭ್ಯ ಒದಗಿಸಬೇಕೆಂದು ಅಲೆಮಾರಿ ಸಂಘಟನೆ ಜಿಲ್ಲಾಧ್ಯಕ್ಷ ನಾಗರಾಜು ಕೆ.ಎಂ. ಒತ್ತಾಯಿಸಿದರು.
ಕೊರಚ ಜನಾಂಗದ ಜಿಲ್ಲಾಧ್ಯಕ್ಷ ವೈ.ಕುಮಾರ್ ಮಾತನಾಡಿ, 2011ರ ಜಾತಿಗಣತಿ ಮಾನದಂಡವಾಗಿಟ್ಟುಕೊಂಡು ರಾಜ್ಯ ಸರ್ಕಾರ ಅಲೆಮಾರಿ ಮತ್ತು ಅರೆಅಲೆಮಾರಿಗಳನ್ನು ವಂಚಿಸುತ್ತ ಬರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾತಿ ಗಣತಿಯನ್ನು ಮುಚ್ಚಿಡಬಾರದು. ಬಹಿರಂಗಪಡಿಸಬೇಕು. ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಹಿಂದುಳಿದಿರುವ ಈ ಜನಾಂಗಕ್ಕೆ ಸರ್ಕಾರ ವಸತಿ ಸೌಲಭ್ಯ ನೀಡಲಿ ಎಂದು ಆಗ್ರಹಿಸಿದರು.
ಅಲಕ್ಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ತಿಪ್ಪೇಸ್ವಾಮಿ ಸಂಪಿಗೆ ಮಾತನಾಡಿ, ಅಲೆಮಾರಿ ಮತ್ತು ಅರೆಅಲೆಮಾರಿಗಳಿಗೆ ಶಾಶ್ವತ ನೆಲೆ ಬೇಕಾಗಿದೆ. ಎಲ್ಲಿ 50 ಕುಟುಂಬಗಳು ವಾಸಿಸುತ್ತಿವೆಯೋ ಅಂತಹ ಪ್ರದೇಶವನ್ನು ಗುರುತಿಸಿ ಪ್ರತ್ಯೇಕ ಕಾಲೋನಿಯನ್ನಾಗಿಸಬೇಕು. ಮೂಲಭೂತ ಸೌಲಭ್ಯಗಳು ಸರ್ಕಾರದಿಂದ ಸಿಕ್ಕಾಗ ಮಾತ್ರ ಈ ಜನಾಂಗ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ಹೇಳಿದರು.ಸುಡುಗಾಡು ಸಿದ್ದ ಜನಾಂಗದ ಜಿಲ್ಲಾಧ್ಯಕ್ಷ ಕೃಷ್ಣಪ್ಪ ಮಾತನಾಡಿ, ವಸತಿಗಾಗಿ ಹಿಂದಿನಿಂದಲೂ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ನಮ್ಮ ಜನಾಂಗದಲ್ಲಿನ ಸಮಸ್ಯೆಗಳನ್ನು ಕೇಳಲು ಯಾರು ಶಾಸಕರಾಗಲಿ, ಸಂಸದರಾಗಲಿ ಇಲ್ಲ. ಶೋಷಿತ ವರ್ಗಕ್ಕೆ ಸೇರಿದ ನಮ್ಮನ್ನು ಹೇಳುವವರು ಕೇಳುವವರೆ ಇಲ್ಲದಂತಾಗಿದ್ದಾರೆ. ಅಹಿಂದ ನಾಯಕ ಎಂದು ಹೇಳಿಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಾಶ್ವತ ನೆಲೆ ಒದಗಿಸಲಿ ಎಂದು ವಿನಂತಿಸಿದರು.