ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಬೈಕ್ ರ್ಯಾಲಿಗೆ ಚಾಲನೆಯಲ್ಲಿ ಶಾಸಕ ಸಿ. ಪುಟ್ಟರಂಗಶೆಟ್ಟಿ ಹೇಳಿಕೆ । ಅಂಬೇಡ್ಕರ್ರಿಂದ ಪ್ರತಿಯೊಬ್ಬರಿಗೂ ಮತದಾನದ ಹಕ್ಕು
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ‘ನನ್ನ ಮತ-ನನ್ನ ಹಕ್ಕು’ ಎಂಬ ಮಹತ್ವ ಸಂದೇಶ ಸಾರುವ ಉದ್ದೇಶದೊಂದಿಗೆ ಚಾಮರಾಜನಗರ ಜಿಲ್ಲೆಯಿಂದ ಬೆಂಗಳೂರಿಗೆ ಹೊರಟ ಬೈಕ್ ರ್ಯಾಲಿಗೆ ನಗರದಲ್ಲಿ ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು.
ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ರೋಟರಿ ಸಿಲ್ಕ್ ಸಿಟಿ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ಕರ್ ಅಕ್ಷಯ್ ಅಶೋಕ್ ನೇತೃತ್ವದ ಬೈಕ್ ರ್ಯಾಲಿ ತಂಡಕ್ಕೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ನಿಶಾನೆ ತೋರಿ ಶುಭ ಹಾರೈಸಿದರು.ಬಳಿಕ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ‘ನನ್ನ ಮತ-ನನ್ನ ಹಕ್ಕು’ ಘೋಷವಾಕ್ಯದೊಂದಿಗೆ ಬೆಂಗಳೂರಿನಲ್ಲಿ ನಡೆಯುವ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರತಿ ಜಿಲ್ಲೆಗಳಿಂದ 10 ಮಂದಿ ತಂಡವು ಹೊರಡುತ್ತಿದೆ ಎಂದರು.ಭಾರತ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. 1893ರಲ್ಲಿ ಸ್ವಿಡ್ಜರ್ಲೆಂಡ್ನಲ್ಲಿ ಮೊದಲ ಬಾರಿಗೆ ಪ್ರಜಾಪ್ರಭುತ್ವ ಜಾರಿಯಾಯಿತು. ಪ್ರಸ್ತುತ 90 ರಿಂದ 110 ದೇಶಗಳಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆ ಇದೆ. ಪ್ರಜಾಪ್ರಭುತ್ವದಡಿ ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ, ಪ್ರಜೆಗಳಿಂದ ರಚಿತವಾದ ಸರ್ಕಾರವೇ ಆಡಳಿತ ನಡೆಸಲಿದೆ. ಸಂವಿಧಾನ ರಚನೆ ಮೂಲಕ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಕೊಟ್ಟಿದ್ದಾರೆ. ಎಲ್ಲರಿಗೂ ಸಮಾನತೆ, ಎಲ್ಲಾ ಕ್ಷೇತ್ರಗಳಲ್ಲಿ ಸಮಾನ ಅವಕಾಶಗಳನ್ನು ನೀಡಿದ ಅಂಬೇಡ್ಕರ್ ಅವರನ್ನು ಸ್ಮರಿಸುತ್ತ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಸೆ. 15ರಂದು ಪ್ರತಿವರ್ಷ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಕಾವೇರಿ ಜಲಾನಯನ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ. ಮರಿಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಕರ್ ಅಕ್ಷಯ್ ಅಶೋಕ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಎಚ್.ಎಸ್. ಬಿಂದ್ಯಾ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಕರ್ ಅಕ್ಷಯ್ ಅಶೋಕ್ ನೇತೃತ್ವದ ಬೈಕ್ ರ್ಯಾಲಿ ತಂಡದಲ್ಲಿ ಪೊಲೀಸ್ ಇಲಾಖೆಯ ಮಹಮದ್ ಫಾರೂಖ್, ರೋಟರಿ ಸಿಲ್ಕ್ ಸಿಟಿ ಸಹಾಯಕ ಗರ್ನರ್ ಗಿರೀಶ್, ಸದಸ್ಯರಾದ ಶರತ್ಕುಮಾರ್, ಬಸವರಾಜು, ಮುರುಗೇಂದ್ರಸ್ವಾಮಿ, ಮಹೇಶ್ಕುಮಾರ್, ಕುಮಾರಸ್ವಾಮಿ, ಎಸ್. ಮಹೇಶ್, ಶರತ್ಕುಮಾರ್ ಬೆಂಗಳೂರಿಗೆ ಹೊರಟರು. ಸುರಕ್ಷತೆಯ ಹಿತದೃಷ್ಠಿಯೊಂದಿಗೆ ಪೊಲೀಸ್ ಇಲಾಖೆಯ ಭದ್ರತಾ ವಾಹನ, ಸಿಬ್ಬಂದಿ, ಆರೋಗ್ಯ ಇಲಾಖೆಯ ವೈದ್ಯರು, ಸಹಾಯಕರು ಅಂಬುಲೆನ್ಸ್ನೊಂದಿಗೆ ಬೈಕ್ ರ್ಯಾಲಿ ಜೊತೆ ತೆರಳಿದರು.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ‘ನನ್ನ ಮತ-ನನ್ನ ಹಕ್ಕು’ ಎಂಬ ಮಹತ್ವ ಸಂದೇಶ ಸಾರುವ ಉದ್ದೇಶದೊಂದಿಗೆ ಚಾಮರಾಜನಗರ ಜಿಲ್ಲೆಯಿಂದ ಬೆಂಗಳೂರಿಗೆ ಹೊರಟ ಬೈಕ್ ರ್ಯಾಲಿಗೆ ಚಾಮರಾಜನಗರದಲ್ಲಿ ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು.