ಹಲಗೂರು: ಮಕ್ಕಳಿಗೆ ಪ್ರಾಥಮಿಕ ಹಂತದಲ್ಲೇ ದಂತ ತಪಾಸಣೆ ಮಾಡುವುದರಿಂದ ಮುಂದಿನ ದಿನಗಳಲ್ಲಿ ಹಲ್ಲಿನ ಯಾವುದೇ ತೊಂದರೆಗಳು ಬರದಂತೆ ತಡೆಗಟ್ಟಬಹುದು ಎಂದು ದಂತ ವೈದ್ಯ ಡಾ.ಅರುಣ್ ಕುಮಾರ್ ತಿಳಿಸಿದರು.
ಮನುಷ್ಯನ ಜೀವನದಲ್ಲಿ ಹಲ್ಲುಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ. ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳದಿದ್ದರೆ ಆಹಾರ ಪದಾರ್ಥಗಳನ್ನು ಸೇವಿಸಲು ಕಷ್ಟ ಪಡಬೇಕಾಗುತ್ತದೆ. ಸಕಾಲಕ್ಕೆ ಹಲ್ಲುಗಳ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆಯಂತೆ ಔಷಧ ಸೇವಿಸುವುದರಿಂದ ಹಲ್ಲುಗಳ ಆರೋಗ್ಯ ಕಾಪಾಡಬಹುದು ಎಂದು ತಿಳಿಸಿದರು.
ಮುಖ್ಯ ಶಿಕ್ಷಕ ಸುಂದ್ರಪ್ಪ ಮಾತನಾಡಿ, ಗ್ರಾಮೀಣ ಪ್ರದೇಶದ ಜನತೆ ನಗರ ಪ್ರದೇಶ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಹಣ ವ್ಯಯ ಮಾಡಿಕೊಳ್ಳದೇ ಉಚಿತ ಶಿಬಿರಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.ಶಾಲೆಯಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಏರ್ಪಡಿಸಿದ್ದ ದಂತ ತಪಾಸಣೆ ಶಿಬಿರದಲ್ಲಿ ಸುಮಾರು 30 ವಿದ್ಯಾರ್ಥಿಗಳಿಗೆ ಮತ್ತು ಗ್ರಾಮದ ಐವತ್ತಕ್ಕೂ ಹೆಚ್ಚು ಸಾರ್ವಜನಿಕರಿಗೆ ತಪಾಸಣೆ ನಡೆಸಲಾಗಿದೆ. ಅವಶ್ಯಕತೆ ಇರುವವರಿಗೆ ಟ್ರಸ್ಟ್ ವತಿಯಿಂದ ಉಚಿತವಾಗಿ ಔಷಧ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮವನ್ನು ಸಿದ್ದರಾಜು ಉದ್ಘಾಟಿಸಿ ಮಾತನಾಡಿದರು. ಎಸ್.ಡಿ.ಎಂ.ಸಿ.ಅಧ್ಯಕ್ಷ ಜಯಶಂಕರ್, ಶಿಕ್ಷಕ ಸಿದ್ದರಾಜು, ದೇವಿಕಾ, ಬಸವರಾಜು ಸೇರಿದಂತೆ ಹಲವರು ಭಾಗವಹಿಸಿದ್ದರು.