ಭಾರತದಲ್ಲಿ ಉಳಿದಿರುವ ಪಾಕಿಸ್ತಾನದ ಪ್ರಜೆಗಳನ್ನು ದೇಶದಿಂದ ಓಡಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಮುಖಂಡರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ತುಮಕೂರುಭಾರತದಲ್ಲಿ ಉಳಿದಿರುವ ಪಾಕಿಸ್ತಾನದ ಪ್ರಜೆಗಳನ್ನು ದೇಶದಿಂದ ಓಡಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಮುಖಂಡರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ನಿರ್ದೇಶನ ನಿರ್ಲಕ್ಷಿಸಿ ಪಾಕ್ ಪ್ರಜೆಗಳನ್ನು ಗುರುತಿಸಿ ವಾಪಸ್ ಕಳಿಸಲು ಉದಾಸೀನ ಮಾಡುತ್ತಿರುವ ರಾಜ್ಯ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿಪತ್ರ ಸಲ್ಲಿಸಿದರು. ನಗರಪಾಲಿಕೆ ಆವರಣದ ಡಾ.ಅಂಬೇಡ್ಕರ್ ಪ್ರತಿಮೆ ಬಳಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆಯಲ್ಲಿ ಆಗಮಿಸಿದ ಬಿಜೆಪಿ ಮುಖಂಡರು ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಮ್ಮು-ಕಾಶ್ಮೀರದ ಪೆಹಲ್ಗಾಮ್ನಲ್ಲಿ ಪಾಕಿಸ್ತಾನ ಪ್ರಚೋದಿತ ಭಯೋತ್ಪಾದಕರು ಹಿಂದೂ ಪ್ರವಾಸಿಗರ ಹತ್ಯೆನಡೆಸಿದ ಪ್ರಕರಣ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪಾಕಿಸ್ತಾನಕ್ಕೆ ಉತ್ತರ ನೀಡಲು 5 ರಾಜತಾಂತ್ರಿಕ ಕೈಗೊಂಡಿದೆ. ಅದರಲ್ಲಿ ಭಾರತದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ಘಟನೆ ನಡೆದ 48 ಗಂಟೆಗಳೊಳಗೆ ಅವರ ದೇಶಕ್ಕೆ ವಾಪಸ್ ಕಳಿಸಬೇಕು ಎಂದು ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿತ್ತು. ಆದರೆ, ಕರ್ನಾಟಕ ಸೇರಿದಂತೆ ಬಿಜೆಪಿಯೇತರ ರಾಜ್ಯಗಳ ಸರ್ಕಾರಗಳು ಈ ವಿಚಾರವನ್ನು ಉದಾಸೀನ ಮಾಡಿ ಪಾಕ್ ಪ್ರಜೆಗಳ ರಕ್ಷಣೆ ಮಾಡುತ್ತಿವೆ ಎಂದು ಟೀಕಿಸಿದರು.ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ವಾಪಸ್ ಕಳಿಸುವ ಪ್ರಯತ್ನ ಮಾಡದೆ ನಿರ್ಲಕ್ಷ್ಯ ಮಾಡಿದೆ.ಈ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ರಾಜ್ಯಪಾಲರಿಗೆ ಈ ಮೂಲಕ ಮನವಿ ಮಾಡುತ್ತಿದ್ದೇವೆ. ಜಿಲ್ಲೆಯಲ್ಲೂ ಪಾಕಿಸ್ತಾನ ಪ್ರಜೆಗಳನ್ನು ಪತ್ತೆ ಮಾಡಿ ಕಳುಹಿಸುವ ಕಾರ್ಯ ಮಾಡುತ್ತಿಲ್ಲ. ಗೃಹ ಸಚಿವರು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಮಾತನಾಡಿ, ಪೆಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿ ನಡೆದು 26 ಜನ ಅಮಾಯಕ ಪ್ರವಾಸಿಗರು ಹತ್ಯೆಗೀಡಾದ ನಂತರ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ದೇಶದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ಭಾರತದಿಂದ ಕಳುಹಿಸಬೇಕೆಂದು ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದ್ದರೂ ಕಾಂಗ್ರೆಸ್ ಆಡಳಿತವಿರುವ ಸರ್ಕಾರಗಳ ಪಾಲನೆ ಮಾಡದೆ ಪಾಕಿಸ್ತಾನಿಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಅಪಾದಿಸಿದರು. ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ತುಷ್ಠೀಕರಣದಲ್ಲಿ ತೊಡಗಿದೆ. ಪಾಕಿಸ್ತಾನಿಗಳನ್ನು ಗುರುತಿಸಿ ವಾಪಸ್ ಕಳಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಸಾರ್ವಜನಿಕರಿಂದ ಸಹಿ ಸಂಗ್ರಹಿಸಿ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೋರಲಾಗಿದೆ ಎಂದರು. ಜಿಲ್ಲಾ ಬಿಜೆಪಿ ಹಿರಿಯ ಉಪಾಧ್ಯಕ್ಷ ವೈ.ಎಚ್.ಹುಚ್ಚಯ್ಯ ಅವರು, ಪಾಕಿಸ್ತಾನಿ ಪ್ರೇರಿತ ಭಯೋತ್ಪಾದಕರು ನಮ್ಮದೇಶದಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಸಿ ಅಭದ್ರತೆ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪಾಕಿಸ್ತಾನಿಗಳು ದೇಶ ಬಿಟ್ಟುತೊಲಗಬೇಕು, ಆಯಾ ರಾಜ್ಯ ಸರ್ಕಾರಗಳ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ದೇಶದ ಮುಸ್ಲಿಮರು ಪಾಕಿಸ್ತಾನಿಗಳ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಲು ಸಹಕರಿಸಬೇಕು ಎಂದು ಕೋರಿದರು. ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಬ್ಯಾಟರಂಗೇಗೌಡ ಮಾತನಾಡಿ, ಸ್ವಾತಂತ್ರ ಪೂರ್ವದಿಂದ ಸ್ವಾತಂತ್ರ್ಯ ನಂತರದಲ್ಲೂ ಕಾಂಗ್ರೆಸ್ ಮುಸಲ್ಮಾನರ ತುಷ್ಠಿಕರಣ ಮಾಡುವ ಇಬ್ಬಗೆಯ ನೀತಿ ಅನುಸರಿಸುತ್ತಿದೆ. ಪೆಹಲ್ಗಾಮ್ ಹತ್ಯಾಕಾಂಡ ನಡೆದು 15 ದಿನ ಸಮೀಪಿಸಿದರೂ ಪಾಕಿಸ್ತಾನಿಗಳನ್ನು ಪತ್ತೆ ಮಾಡಿ ಹೊರದಬ್ಬಬೇಕಾದ ರಾಜ್ಯದ ಕಾಂಗ್ರೆಸ್ ಸರ್ಕಾರ ಅವರಿಗೆ ರಕ್ಷಣೆ ನೀಡುತ್ತಿದೆ ಎಂದು ಟೀಕಿಸಿದರು.ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂದೀಪ್ಗೌಡ, ನಗರ ಅಧ್ಯಕ್ಷ ಧನುಷ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನವಚೇತನ್, ಜಿಲ್ಲಾ ವಕ್ತಾರ ಟಿ.ಆರ್.ಸದಾಶಿವಯ್ಯ, ಮುಖಂಡರಾದ ಭೈರಣ್ಣ, ಟಿ.ಎಚ್.ಹನುಮಂತರಾಜು, ಸಿ.ಎನ್.ರಮೇಶ್, ವಿಷ್ಣುವರ್ಧನ್, ಪುಟ್ಟರಾಜು, ಸತ್ಯಮಂಗಲ ಜಗದೀಶ್, ವಿರೂಪಾಕ್ಷಪ್ಪ, ಗಣೇಶ್ಪ್ರಸಾದ್, ಹನುಮಂತರಾಯಪ್ಪ, ಬಂಬೂ ಮೋಹನ್, ನಿಸರ್ಗ ರಮೇಶ್, ಗಂಗಾಧರ್, ಸಿದ್ಧಗಂಗಯ್ಯ, ವೆಂಕಟೇಶಾಚಾರ್, ದಯಾನಂದ ಅಕ್ಷಯ್ ಚೌಧರಿ, ಜಿ.ಎಸ್.ನಂದಿನಾಥ್ ಮೊದಲಾದವರು ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.