ಕುಂದಗೋಳ: ಪಟ್ಟಣದ ತಹಸೀಲ್ದಾರ್ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿದ ಜಿಲ್ಲಾಧಿಕಾರಿ ದಿವ್ಯಪ್ರಭು, ಅಲ್ಲಿನ ಕಾರ್ಯವೈಖರಿ ಪರಿಶೀಲಿಸಿದರು. ಅಲ್ಲದೇ, ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
ಉಪನೋಂದಣಿ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಪರಿಶೀಲಿಸಿದರು. ಕಚೇರಿಗೆ ಬಂದಿದ್ದ ಸಾರ್ವಜನಿಕರನ್ನು ಮಾತನಾಡಿಸಿ, ಕೆಲಸದ ವಿಳಂಬ, ಮಧ್ಯವರ್ತಿಗಳ ಹಾವಳಿ ಸೇರಿದಂತೆ ಇತರ ವಿಷಯಗಳ ಬಗ್ಗೆ ಸಮಸ್ಯೆಗಳಿದ್ದರೆ ತಿಳಿಸುವಂತೆ ಹೇಳಿದರು. ನಂತರ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
ಅಹವಾಲು ಸ್ವೀಕಾರವಿವಿಧ ಕಚೇರಿಗೆ ಭೇಟಿ ಹಾಗೂ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿದ ನಂತರ ತಹಸೀಲ್ದಾರ್ ಕಚೇರಿಯಲ್ಲಿಯೇ ಕಂದಾಯ ಇಲಾಖೆ ಅಧಿಕಾರಿಗಳ ಹಾಗೂ ಸಿಬ್ಬಂದಿ ಸಭೆ ನಡೆಸಿದರು. ಸಾರ್ವಜನಿಕರಿಂದ ಯಾವುದೇ ದೂರು ಬರದಂತೆ ತಮ್ಮ ಜವಾಬ್ದಾರಿಗಳನ್ನು ಅಧಿಕಾರಿ, ಸಿಬ್ಬಂದಿ ನಿರ್ವಹಿಸಬೇಕು. ಕಂದಾಯ ಇಲಾಖೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ, ಅನುಷ್ಠಾನಗೊಳಿಸಬೇಕು. ಅಧಿಕಾರಿ, ಸಿಬ್ಬಂದಿ ಮೇಲೆ ಕೆಲಸದ ವಿಳಂಬ, ತಪ್ಪು ಮಾಹಿತಿ ಕುರಿತು ಸಾರ್ವಜನಿಕ ದೂರುಗಳು ಬಂದಲ್ಲಿ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.