ರೈತರ ಕ್ಷಮೆಯಾಚಿಸಿದ ಜಿಲ್ಲಾಧಿಕಾರಿ ಶ್ರೀಧರ್

KannadaprabhaNewsNetwork |  
Published : Aug 06, 2026, 02:15 AM IST
ರೈತರ ಕ್ಷಮೆ ಯಾಚಿಸುತ್ತಿರುವ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್.  | Kannada Prabha

ಸಾರಾಂಶ

ರೈತರೊಂದಿಗೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಏಕವಚನದಲ್ಲಿ ಏರುಧ್ವನಿಯಲ್ಲಿ ಮಾತನಾಡಿದ್ದಲ್ಲದೇ ಬೆದರಿಕೆ ವರ್ತನೆಯನ್ನು ತೋರ್ಪಡಿಸಿ ಕೈ ಇಳಿಸಿ ಮಾತನಾಡಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಗದಗ: ಇತ್ತೀಚೆಗೆ ಮನವಿ ಸಲ್ಲಿಸುವ ವೇಳೆ ರೈತರಿಗೆ ಏಕವಚನದಲ್ಲಿ ಮಾತನಾಡಿ, ಬೆದರಿಕೆ ವರ್ತನೆ ತೋರಿದ್ದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಕ್ಷಮೆ ಯಾಚಿಸಿದ್ದಾರೆ.

ರೈತರೊಂದಿಗೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಏಕವಚನದಲ್ಲಿ ಏರುಧ್ವನಿಯಲ್ಲಿ ಮಾತನಾಡಿದ್ದಲ್ಲದೇ ಬೆದರಿಕೆ ವರ್ತನೆಯನ್ನು ತೋರ್ಪಡಿಸಿ ಕೈ ಇಳಿಸಿ ಮಾತನಾಡಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಕುರಿತು ಆ. 2ರಂದು ಕನ್ನಡಪ್ರಭ ವಿಸ್ತೃತವಾಗಿ ವರದಿ ಪ್ರಕಟಿಸಿದ ಬೆನ್ನಲ್ಲಿಯೇ ಜಿಲ್ಲೆಯ ರೈತ ಸಮುದಾಯದಲ್ಲಿ ದೊಡ್ಡ ಆಕ್ರೋಶಕ್ಕೆ ಕಾರಣವಾಗಿ ಬುಧವಾರ ಸಾವಿರಾರು ರೈತರು ಪ್ರತಿಭಟನೆ ನಡೆಸಿದರು.

ಮಳೆಯನ್ನೂ ಲೆಕ್ಕಿಸದೆ ಸಾವಿರಾರು ರೈತರು ಪಾಳಾ, ಬಾದಾಮಿ ರಾಜ್ಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಬಳಿ ರಸ್ತೆಯಲ್ಲಿ ಧರಣಿ ಸತ್ಯಾಗ್ರಹಕ್ಕೆ ಕುಳಿತ ರೈತರು, ಜಿಲ್ಲಾಧಿಕಾರಿಯನ್ನು ತಕ್ಷಣವೇ ಸೇವೆಯಿಂದ ವಜಾಗೊಳಿಸಬೇಕೆಂದು ಪಟ್ಟು ಹಿಡಿದರು. ಹೋರಾಟಕ್ಕೆ ಭೈರನಹಟ್ಟಿ ದೊರೆಸ್ವಾಮಿ ಮಠದ ಶಾಂತಲಿಂಗ ಶ್ರೀಗಳು, ನಂದಿವೇರಿಮಠದ ಶಿವಕುಮಾರ ಶ್ರೀಗಳು ಸೇರಿದಂತೆ ಅನೇಕ ರೈತ ಮುಖಂಡರು ಭಾಗಿಯಾಗಿದ್ದರು.

ಕ್ಷಮೆಯಾಚನೆ: ರೈತರ ಶಕ್ತಿ ಮತ್ತು ಹೋರಾಟದ ತೀವ್ರತೆಗೆ ಬೆದರಿದ ಜಿಲ್ಲಾಡಳಿತ, ಬೆಟಗೇರಿ ಹೊರವಲಯದ ನರಸಾಪುರ ಸಮೀಪದಿಂದಲೇ ವ್ಯಾಪಕ ಪೊಲೀಸ್ ಬಂದೋಬಸ್ತ್ ಕಲ್ಪಿಸಿತ್ತು. ಅವಳಿ ನಗರದ ಪ್ರಮುಖ ಬೀದಿಗಳಲ್ಲಿಯೂ ಪೊಲೀಸ್ ಸರ್ಪಗಾವಲನ್ನೇ ಹಾಕಲಾಗಿತ್ತು. ಇದನ್ನು ಗಮನಿಸಿದ ರೈತರು, ಇಷ್ಟೊಂದು ಪೊಲೀಸ್ ಬಂದೋಬಸ್ತ್‌ನ ಅವಶ್ಯಕತೆ ಇತ್ತೆ? ನಾವು ರೈತರು, ನಮ್ಮ ನ್ಯಾಯಯುತ ಹಕ್ಕು ಕೇಳಲು ಬರುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರಲ್ಲದೇ, ಸ್ವತಃ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ರೈತರ ಬಳಿ ಬಂದು ಬಹಿರಂಗವಾಗಿ ಕ್ಷಮೆಯಾಚಿಸಿದರೂ ರೈತರ ಆಕ್ರೋಶ ತಣ್ಣಗಾಗಲಿಲ್ಲ.

ಡಿಸಿ ಮಾತು: ಆಗಿನ ಪರಿಸ್ಥಿತಿ ಹಾಗಿತ್ತು. ನಾನು ಏರುಧ್ವನಿಯಲ್ಲಿ ಮಾತನಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಜಿಲ್ಲಾಧಿಕಾರಿ ಹೇಳಿದ್ದು, ತಮ್ಮ ತಪ್ಪು ನಡವಳಿಕೆಗೆ ವಿಷಾದಿಸಿದರು. ಅನ್ನದಾತರ ಪ್ರಮುಖ ಬೇಡಿಕೆಗಳು

ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಏಕವಚನದಲ್ಲಿ ನಿಂದಿಸಿ ದರ್ಪ ತೋರಿದ ಡಿಸಿ ಸಿ.ಎನ್. ಶ್ರೀಧರ್ ಅವರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು. ಜಿಲ್ಲೆಯನ್ನು ತಕ್ಷಣವೇ ಅಧಿಕೃತವಾಗಿ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ರೈತರಿಗೆ ಸಿಗಬೇಕಾದ ಬೆಳೆವಿಮಾ ನಷ್ಟ ಪರಿಹಾರವನ್ನು ವಿಳಂಬವಿಲ್ಲದೆ ಪೂರ್ಣ ಪ್ರಮಾಣದಲ್ಲಿ ಮಂಜೂರು ಮಾಡಬೇಕು. ರೈತರ ಸಾಲಮನ್ನಾ ಮಾಡುವುದರ ಜತೆಗೆ ಜಿಲ್ಲೆಯ ಕೆರೆಗಳನ್ನು ತುಂಬಿಸುವ ಕೆಲಸವನ್ನು ತಕ್ಷಣ ಕೈಗೆತ್ತಿಕೊಳ್ಳಬೇಕು ಎನ್ನುವ ಪ್ರಮುಖ ಬೇಡಿಕೆಗಳ ಮನವಿ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೈವಿಕತೆಯಿಂದಲೇ ಮನಶಾಂತಿ ಸಾಧ್ಯ: ಮುಪ್ಪಿನ ಬಸವಲಿಂಗ ಸ್ವಾಮಿಗಳು
ಖಾದಿ ನಗರಕ್ಕೆ ಮೂಲ ಸೌಕರ್ಯ ಒದಗಿಸಿ: ಶಾಸಕ ಸಿ.ಸಿ. ಪಾಟೀಲ