ಕನ್ನಡಪ್ರಭ ವಾರ್ತೆ ಹಾಸನ
ಘಟನಾ ಸ್ಥಳದಲ್ಲಿ ನಾಲ್ಕು ಪುಟಗಳ ಡೆತ್ನೋಟ್ ಪತ್ತೆಯಾಗಿರುವುದು ಪ್ರಕರಣಕ್ಕೆ ಮತ್ತಷ್ಟು ಕುತೂಹಲ ಮತ್ತು ಗಂಭೀರತೆ ತಂದಿದ್ದು, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೂಲತಃ ಕೊಡಗು ಜಿಲ್ಲೆಯವರಾದ ತಿಮ್ಮಯ್ಯ ಅವರು ಕಳೆದ ಹಲವು ವರ್ಷಗಳಿಂದ ಸರ್ಕಾರಿ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಪ್ರಸ್ತುತ ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ಉಪತಹಸೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು, ಹಿಂದೆ ಸುಮಾರು ಮೂರು ವರ್ಷಗಳ ಕಾಲ ಹಾಸನ ಜಿಲ್ಲೆಯಲ್ಲಿಯೂ ಸೇವೆ ಸಲ್ಲಿಸಿದ್ದರು. ಈ ಅವಧಿಯಲ್ಲಿ ಸಾರ್ವಜನಿಕರು, ಸಹೋದ್ಯೋಗಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರೆಂದು ತಿಳಿದುಬಂದಿದೆ. ಕರ್ತವ್ಯ ನಿರ್ವಹಣೆಯಲ್ಲಿ ಶಿಸ್ತು, ಪ್ರಾಮಾಣಿಕತೆ ಮತ್ತು ಸರಳ ಸ್ವಭಾವಕ್ಕೆ ಹೆಸರುವಾಸಿಯಾಗಿದ್ದ ತಿಮ್ಮಯ್ಯ ಅವರ ಅಕಾಲಿಕ ನಿಧನ ಆಡಳಿತ ವಲಯದಲ್ಲಿ ಆಘಾತ ಉಂಟುಮಾಡಿದೆ.
ತಿಮ್ಮಯ್ಯ ಅವರು ಹಾಸನ ನಗರದ ಚನ್ನಪಟ್ಟಣದ ದ್ಯಾವಮ್ಮ ಬಡಾವಣೆಯಲ್ಲಿ ತಮ್ಮ ಕುಟುಂಬದೊಂದಿಗೆ ವಾಸವಾಗಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಅವರು ಲಾಡ್ಜಲ್ಲಿ ತಂಗಿದ್ದರೆಂಬ ಮಾಹಿತಿ ಲಭ್ಯವಾಗಿದ್ದು, ಘಟನೆಯ ದಿನವೂ ಬಿಎಂ ರಸ್ತೆಯಲ್ಲಿರುವ ಖಾಸಗಿ ಲಾಡ್ಜನ ಕೊಠಡಿಯಲ್ಲಿ ಒಬ್ಬರೇ ಇದ್ದರೆಂದು ಹೇಳಲಾಗಿದೆ. ಬೆಳಗ್ಗೆ ಸಾಕಷ್ಟು ಸಮಯ ಕಳೆದರೂ ಕೊಠಡಿ ಬಾಗಿಲು ತೆರೆಯದಿರುವುದು ಹಾಗೂ ಯಾವುದೇ ಪ್ರತಿಕ್ರಿಯೆ ದೊರೆಯದ ಹಿನ್ನೆಲೆ ಲಾಡ್ಜ್ ಸಿಬ್ಬಂದಿಗೆ ಅನುಮಾನ ಉಂಟಾಗಿದೆ. ಬಳಿಕ ಪರಿಶೀಲನೆ ನಡೆಸಿದಾಗ ತಿಮ್ಮಯ್ಯ ಅವರು ಕೊಠಡಿಯೊಳಗೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.ಡೆತ್ನೋಟ್ ಪತ್ತೆ:
ಪ್ರಾಥಮಿಕ ತನಿಖೆಯ ಪ್ರಕಾರ ಆತ್ಮಹತ್ಯೆಗೆ ವೈಯಕ್ತಿಕ, ಕುಟುಂಬ ಅಥವಾ ಇತರೆ ಯಾವ ಕಾರಣಗಳಿವೆಯೋ ಎಂಬ ಎಲ್ಲಾ ಆಯಾಮಗಳಲ್ಲೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ತಿಮ್ಮಯ್ಯ ಅವರ ಮೊಬೈಲ್ ಫೋನ್, ದಾಖಲೆಗಳು ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ಡೆತ್ನೋಟ್ನಲ್ಲಿರುವ ಮಾಹಿತಿಯ ಆಧಾರದ ಮೇಲೂ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ವರದಿ ಬಂದ ಬಳಿಕ ಸಾವಿನ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ. ಪ್ರಕರಣವನ್ನು ಬಡಾವಣೆ ಪೊಲೀಸ್ ಠಾಣೆಯಲ್ಲಿ ದಾಖಲಿಸಿಕೊಂಡಿರುವ ಪೊಲೀಸರು, ಆತ್ಮಹತ್ಯೆಯ ಹಿಂದಿನ ನಿಖರ ಕಾರಣಗಳು, ಡೆತ್ನೋಟ್ನಲ್ಲಿರುವ ಅಂಶಗಳು ಹಾಗೂ ಇತರೆ ಸಂಬಂಧಿತ ಮಾಹಿತಿಗಳ ಕುರಿತು ಸಮಗ್ರ ತನಿಖೆ ನಡೆಸುತ್ತಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕವೇ ಘಟನೆಯ ಸಂಪೂರ್ಣ ಸತ್ಯಾಂಶ ಹೊರಬೀಳಲಿದೆ.