ಬೆಂಗಳೂರು: ಮಾದಿಗ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪ ಸಂಬಂಧ ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ದಾಖಲಾಗಿರುವ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದ ದೂರನ್ನು ವಿಚಾರಣೆಗೆ ಅಂಗೀಕರಿಸಿ ಸಮನ್ಸ್ ಜಾರಿಗೊಳಿಸಿದ ದಾವಣಗೆರೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಹಿನ್ನೆಲೆಯಲ್ಲಿ ದಲಿತ ಸಮುದಾಯದ ಕೆಲ ಮುಖಂಡರು ಬಿ.ಪಿ. ಹರೀಶ್ ಅವರಿಗೆ ಅಭಿನಂದನೆ ಸಲ್ಲಿಸಲು ಬಂದಿದ್ದರು. ಈ ವೇಳೆ ಬಿಜೆಪಿ ಸರ್ಕಾರ ಮೀಸಲಾತಿ ಹೆಚ್ಚಿಸಿದ್ದರೂ ದಲಿತರು ನಮಗೆ ಮತ ಹಾಕಿಲ್ಲ.‘ಅಪ್ಪನಿಗೆ ಹುಟ್ಟಿದ ಮಾದಿಗರು ಮಾತ್ರ ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಹೇಳಿಕೆ ನೀಡಿದ್ದರು.
ಇದರ ವಿಡಿಯೋ ವೈರಲ್ ಆಗಿತ್ತು. ಈ ಸಂಬಂಧ ಬಿ. ಹನುಮಂತಪ್ಪ ಹಾಗೂ ಇತರರು ಹರಿಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ವಿರುದ್ಧ ದಲಿತರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಹಾಗೂ ಐಪಿಸಿ ಸೆಕ್ಷನ್ಗಳಡಿ ಎಫ್ಐಆರ್ ದಾಖಲಾಗಿತ್ತು. ಇದನ್ನು ವಿಚಾರಣೆಗೆ ಅಂಗೀಕರಿಸಿದ್ದ ದಾವಣಗೆರೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬಿ.ಪಿ. ಹರೀಶ್ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು.- - -
(ಸಾಂದರ್ಭಿಕ ಚಿತ್ರ)