ವಿದ್ಯಾರ್ಥಿಗಳಿದ್ದರೂ ಕೊಠಡಿ, ಹಾಸ್ಟೆಲ್‌ ಕೊರತೆ

KannadaprabhaNewsNetwork |  
Published : Jul 19, 2025, 01:00 AM IST
೧೭ ವೈಎಲ್‌ಬಿ ೧ಕುಕನೂರು ಪಟ್ಟಣದಲ್ಲಿ ಶಿಥಿಲಾವಸ್ಥೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಪಿಡಬ್ಲುಡಿ ಎಇಇ ಮಲ್ಲಿಕಾರ್ಜುನ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶಶಿಧರ ಸಕ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. | Kannada Prabha

ಸಾರಾಂಶ

ಸರ್ಕಾರ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಸತಿ ನಿಲಯಗಳ ಹೆಚ್ಚಳ ಮತ್ತು ಈಗ ಇರುವ ಹಾಸ್ಟೆಲ್‌ಗಳಲ್ಲಿ ಹೆಚ್ಚುವರಿ ಕೊಠಡಿಗಳ ಬೇಡಿಕೆಯಂತೆ ನಿರ್ಮಿಸಬೇಕಿದೆ. ಯಲಬುರ್ಗಾ ಹಾಗೂ ಕುಕನೂರು ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ೧೬ ವಸತಿ ನಿಲಯಗಳಿವೆ. ಈ ಪೈಕಿ ೧೧ ಮೆಟ್ರಿಕ್ ಪೂರ್ವ ವಸತಿ ನಿಲಯಗಳಿಗೆ ಪ್ರವೇಶ ಪಡೆಯಲು ೧೦೪೮ ಅರ್ಜಿ ಬಂದಿವೆ.

ಪಾಲಾಕ್ಷ ಬಿ. ತಿಪ್ಪಳ್ಳಿ

ಯಲಬುರ್ಗಾ:

ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಶಾಲೆ- ಕಾಲೇಜುಗಳ ಸಂಖ್ಯೆ ಹೆಚ್ಚಿದ್ದರೂ ಅದಕ್ಕೆ ಅನುಗುಣವಾಗಿ ಶಾಲಾ-ಕಾಲೇಜು ಕೊಠಡಿ ಮತ್ತು ಹಾಸ್ಟೆಲ್ ಇಲ್ಲದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ.

ಸರ್ಕಾರ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಸತಿ ನಿಲಯಗಳ ಹೆಚ್ಚಳ ಮತ್ತು ಈಗ ಇರುವ ಹಾಸ್ಟೆಲ್‌ಗಳಲ್ಲಿ ಹೆಚ್ಚುವರಿ ಕೊಠಡಿಗಳ ಬೇಡಿಕೆಯಂತೆ ನಿರ್ಮಿಸಬೇಕಿದೆ. ಯಲಬುರ್ಗಾ ಹಾಗೂ ಕುಕನೂರು ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ೧೬ ವಸತಿ ನಿಲಯಗಳಿವೆ. ಈ ಪೈಕಿ ೧೧ ಮೆಟ್ರಿಕ್ ಪೂರ್ವ ವಸತಿ ನಿಲಯಗಳಿಗೆ ಪ್ರವೇಶ ಪಡೆಯಲು ೧೦೪೮ ಅರ್ಜಿ ಬಂದಿವೆ. ಆ ಪೈಕಿ ೪೮೧ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗಿದೆ. ಇದರ ಹೊರತಾಗಿಯೂ ಎಸ್‌ಸಿ ವರ್ಗದ ೩೧೮, ಎಸ್ಟಿ ವರ್ಗದ ೧೧೬ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಿಕ್ಕಿಲ್ಲ. ಮೆಟ್ರಿಕ್ ನಂತರದ ೪ ಹಾಸ್ಟೆಲ್‌ಗಳಿಗೆ ೪೪೦ ಅರ್ಜಿ ಬಂದಿದ್ದು, ೨೪೯ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗಿದೆ. ೧೦೪ ವಿದ್ಯಾರ್ಥಿಗಳಿಗೆ ಪ್ರವೇಶ ಭಾಗ್ಯ ಸಿಕ್ಕಿಲ್ಲ. ಅರ್ಜಿ ಸಲ್ಲಿಸಿದ ಎಲ್ಲ ಎಸ್‌ಸಿ, ಎಸ್ಟಿ ಮಕ್ಕಳಿಗೆ ಪ್ರವೇಶಾತಿ ಕೊಡುವ ನಿಯಮವಿದ್ದರೂ ಹೆಚ್ಚುವರಿ ನಿಲಯ ಮತ್ತು ಕೊಠಡಿಗಳ ಸಮಸ್ಯೆಯಿಂದ ಸಾಧ್ಯವಾಗುತ್ತಿಲ್ಲ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ನಂತರದ ೨೦ ವಸತಿ ನಿಲಯಗಳಿಗೂ ವಿದ್ಯಾರ್ಥಿಗಳಿಂದ ಸಾವಿರಾರು ಅರ್ಜಿ ಬಂದಿವೆ. ವಸತಿ ನಿಲಯಗಳ ಕೊರತೆ, ಹೆಚ್ಚುವರಿ ಕೊಠಡಿ ಇಲ್ಲದಿರುವ ಪರಿಣಾಮ ವಿದ್ಯಾರ್ಥಿಗಳು ವಸತಿ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ.

ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳ ಕಲಿಕೆ ಮೊಟಕುಗೊಳ್ಳಬಾರದು ಎನ್ನುವ ಸದುದ್ದೇಶದಿಂದ ಪ್ರಾಥಮಿಕ ಮತ್ತು ನೂತನ ಪ್ರೌಢಶಾಲೆಗಳನ್ನು ಹೆಚ್ಚಾಗಿ ಪ್ರಾರಂಭಿಸಲಾಗಿದೆ. ಅಲ್ಲದೆ ಪ್ರಾಥಮಿಕ ಶಾಲೆಯನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಣಗೊಳಿಸಲಾಗಿದೆ. ಸ್ಥಳೀಯವಾಗಿಯೇ ಮಕ್ಕಳು ಶಿಕ್ಷಣ ಪಡೆಯಲು ಅನುಕೂಲ ಕಲ್ಪಿಸಲಾಗಿದೆ. ಆ ನಿಟ್ಟಿನಲ್ಲಿ ಕಳೆದ ಏಳೆಂಟು ವರ್ಷಗಳಿಂದ ಸರ್ಕಾರ ಮೆಟ್ರಿಕ್ ಪೂರ್ವ ವಸತಿ ನಿಲಯ ಮಂಜೂರು ಮಾಡಿಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ.

ಶಿಥಿಲಾವಸ್ಥೆಯಲ್ಲಿ ಹಾಸ್ಟೆಲ್‌:

ಸಮಾಜ ಕಲ್ಯಾಣ ಇಲಾಖೆಯ ಬಹುತೇಕ ವಸತಿ ನಿಲಯ ಕಟ್ಟಡಗಳು ನಾಲ್ಕೈದು ದಶಕಗಳ ಕಾಲ ಹಳೆಯದಾಗಿದ್ದು, ಶಿಥಿಲಾವಸ್ಥೆ ತಲುಪಿವೆ. ಈಗಿರುವ ಕಟ್ಟಡಗಳಲ್ಲಿ ಹೆಚ್ಚುವರಿ ಕೊಠಡಿ, ಶೌಚಾಲಯ ನಿರ್ಮಿಸಿದರೆ ಅಗತ್ಯಕ್ಕೆ ತಕ್ಕಷ್ಟು ಮಕ್ಕಳಿಗೆ ವಸತಿ ಸೌಲಭ್ಯ ಕೊಡಬಹುದು. ಈ ಬಗ್ಗೆ ಸಂಬಂಧಿಸಿದ ಇಲಾಖೆ ಮೇಲಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಯಲಬುರ್ಗಾ ಪಟ್ಟಣದಲ್ಲಿ ಮೆಟ್ರಿಕ್ ಪೂರ್ವ ಬಾಲಕಿಯರ ಅಂಬೇಡ್ಕರ್ ವಸತಿ ನಿಲಯ ನಿರ್ಮಿಸಬೇಕಿದೆ. ಈಗಿರುವ ಹಳೆಯ ಕಟ್ಟಡ ಶಿಥಿಲಗೊಂಡಿದ್ದು ಬೇರೆಡೆ ನಡೆಸಲಾಗುತ್ತಿದೆ. ಕುಕನೂರು ತಾಲೂಕಿನ ಮಂಗಳೂರು ಗ್ರಾಮದಲ್ಲಿ ಮೆಟ್ರಿಕ್ ಪೂರ್ವ ಬಾಲಕಿಯರ ಅಂಬೇಡ್ಕರ್ ವಸತಿ ನಿಲಯ ಹಳೆಯದಾಗಿದ್ದು, ನೂತನ ಕಟ್ಟಡವಾಗಬೇಕು. ಹಿರೇವಂಕಲಕುಂಟಾ ಭಾಗದಲ್ಲಿ ಹೆಚ್ಚುವರಿ ವಸತಿ ನಿಲಯಗಳ ಅವಶ್ಯಕತೆ ಇದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ಯಲಬುರ್ಗಾ ಹಾಗೂ ಕುಕನೂರು ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಹೆಚ್ಚುವರಿ ಕೊಠಡಿ, ಶೌಚಾಲಯ ನಿರ್ಮಿಸಬೇಕಿದೆ. ಕೆಕೆಆರ್‌ಡಿಬಿ ಅನುದಾನದಲ್ಲಿ ಶಿಥಿಲಗೊಂಡ ಹಳೆಯ ಕಟ್ಟಡ ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು, ಶಾಸಕ ಬಸವರಾಜ ರಾಯರಡ್ಡಿ ಅವರಿಗೆ ಮನವಿ ಸಲ್ಲಿಸಲಾಗಿದೆ.

ಶಶಿಧರ ಸಕ್ರಿ, ಸಹಾಯಕ ನಿರ್ದೇಶಕ, ಸಮಾಜ ಕಲ್ಯಾಣ ಇಲಾಖೆ, ಯಲಬುರ್ಗಾಕ್ಷೇತ್ರದಲ್ಲಿ ಸಮಾಜ ಕಲ್ಯಾಣ ಹಾಗೂ ಬಿಸಿಎಂ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ನಂತರದ ನಿಲಯಗಳ ಪ್ರವೇಶಾತಿಗಾಗಿ ಸಾವಿರಾರು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಸತಿ ನಿಲಯಗಳಿಲ್ಲ. ಇದರಿಂದ ಮಕ್ಕಳು ವಸತಿ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಬಸವರಾಜ ರಾಯರಡ್ಡಿ ಅವರು ಶಾಸಕರಾಗಿ ಎರಡು ವರ್ಷ ಕಳೆದರೂ ವಸತಿ ನಿಲಯಗಳಿಗೆ ಹೆಚ್ಚುವರಿ ಕೊಠಡಿ, ಮೂಲಸೌಲಭ್ಯ ಕಲ್ಪಿಸಲು ವಿಫಲರಾಗಿದ್ದಾರೆ.

ಮಲ್ಲನಗೌಡ ಕೋನನಗೌಡ್ರ, ಜೆಡಿಎಸ್ ಜಿಲ್ಲಾ ವಕ್ತಾರ, ಕೊಪ್ಪಳ

PREV

Latest Stories

ನ್ಯಾಯಾಂಗದ ಸ್ವಾತಂತ್ರ್ಯ ರಕ್ಷಣೆಗೆ ಕ್ರಮ : ನ್ಯಾ.ವಿಭು
ಕೃಷ್ಣಾ ಮೇಲ್ದಂಡೆ-3 ಭೂಸ್ವಾಧೀನಕ್ಕೆ 2.01 ಲಕ್ಷ ಕೋಟಿ ಬೇಕು : ಸಚಿವ ಕೃಷ್ಣ
ನಮ್ಮ ಗ್ಯಾರಂಟಿ ಯೋಜನೆ ದೇಶಕ್ಕೇ ಮಾದರಿ - ಟೀಕಿಸಿದ್ದ ಬಿಜೆಪಿಯೇ ಕಾಪಿ ಮಾಡಿದೆ : ಡಿಸಿಎಂ ಡಿಕೆಶಿ