ಹರಪನಹಳ್ಳಿ: ಮಕ್ಕಳಲ್ಲಿರುವ ನ್ಯೂನತೆ ಆರಂಭಿಕ ಹಂತದಲ್ಲೇ ಗುರುತಿಸಿ ಸೂಕ್ತ ಚಿಕಿತ್ಸೆ, ಪುನಶ್ಚೇತನ ಹಾಗೂ ವಿಶೇಷ ಶಿಕ್ಷಣದ ಮೂಲಕ ಅವರ ಭವಿಷ್ಯ ಉತ್ತಮಗೊಳಿಸುವ ನಿಟ್ಟಿನಲ್ಲಿ ಪೋಷಕರು ಹಾಗೂ ಸಮಾಜ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ವಿ.ಅಂಜಿನಪ್ಪ ಹೇಳಿದರು.
ಮಕ್ಕಳ ಬೆಳವಣಿಗೆಯ ಹಂತದಲ್ಲಿ ಕಂಡುಬರುವ ದೈಹಿಕ,ಮಾನಸಿಕ, ಬೌದ್ಧಿಕ, ಶ್ರವಣ, ದೃಷ್ಟಿ ಸೇರಿದಂತೆ ವಿವಿಧ ರೀತಿಯ ನ್ಯೂನತೆ ಆರಂಭಿಕ ಹಂತದಲ್ಲೇ ಗುರುತಿಸಿದರೆ ಅಗತ್ಯವಿರುವ ಚಿಕಿತ್ಸೆ ಮತ್ತು ಪುನಶ್ಚೇತನ ಸೇವೆ ಸಮಯಕ್ಕೆ ಸರಿಯಾಗಿ ಒದಗಿಸಲು ಸಾಧ್ಯವಾಗುತ್ತದೆ. ಇದರಿಂದ ಮಕ್ಕಳ ಕಲಿಕೆಯ ಸಾಮರ್ಥ್ಯ ಹಾಗೂ ಆತ್ಮವಿಶ್ವಾಸ ಹೆಚ್ಚಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ರತ್ನ ಬೆಣ್ಣೆ ಮಾತನಾಡಿ, ಮಕ್ಕಳಲ್ಲಿ ಯಾವುದೇ ರೀತಿಯ ಬೆಳವಣಿಗೆ ವಿಳಂಬ ಅಥವಾ ನ್ಯೂನತೆ ಕಂಡುಬಂದರೆ ಪೋಷಕರು ಆತಂಕಪಡುವ ಅಗತ್ಯವಿಲ್ಲ. ಬದಲಾಗಿ ತಜ್ಞರ ಸಲಹೆ ಪಡೆದು ಆರಂಭಿಕ ಹಂತದಲ್ಲೇ ಅಗತ್ಯ ಚಿಕಿತ್ಸೆ ಹಾಗೂ ಪುನಶ್ಚೇತನ ಸೇವೆ ಕೊಡಿಸಬೇಕು. ಇಂತಹ ಕಾರ್ಯಕ್ರಮ ಗ್ರಾಮೀಣ ಹಾಗೂ ನಗರ ಪ್ರದೇಶದ ಮಕ್ಕಳಿಗೆ ತಲುಪುವಂತಾಗಬೇಕು.ಅರ್ಹ ಮಕ್ಕಳಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಕುರಿತು ಪೋಷಕರಲ್ಲಿ ಜಾಗೃತಿ ಮೂಡಿಸುವುದು ಕೂಡ ಮುಖ್ಯವಾಗಿದೆ ಎಂದರು.ಸ್ಮಿತಾ ಗೌಡ ಮಾತನಾಡಿ, ಮಕ್ಕಳ ಬೆಳವಣಿಗೆಗೆ ಸಂಬಂಧಿಸಿದಂತೆ ಪೋಷಕರು, ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು, ಶಿಕ್ಷಕರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸುವ ಅಗತ್ಯವಿದೆ. ಆರಂಭಿಕ ಹಂತದಲ್ಲೇ ಸಮಸ್ಯೆ ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡುವುದರಿಂದ ಮಕ್ಕಳ ಭವಿಷ್ಯ ಉತ್ತಮಗೊಳಿಸಲು ಸಾಧ್ಯವಾಗಲಿದೆ ಎಂದರು.