ಶಿವಮೊಗ್ಗ: ಡಿ.ದೇವರಾಜ ಅರಸುರವರ ಜನ್ಮ ದಿನಾಚರಣೆ ಸಮಾರಂಭವನ್ನು ಆ.20 ರಂದು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು.
ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಆಹ್ವಾನಿಸಲು ಸೂಚಿಸಿದ ಅವರು, ಆ.20 ರಂದು ಕುವೆಂಪು ರಂಗಮಂದಿರದಲ್ಲಿ ಜಯಂತಿ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ತಾಕೀತು ಮಾಡಿದರು.
ನಗರದ ಮುಖ್ಯ ಭಾಗಗಳಲ್ಲಿ ಪಾಲಿಕೆಯಿಂದ ಫ್ಲೆಕ್ಸ್ಗಳನ್ನು ಅಳವಡಿಸಬೇಕು. ತೋಟಗಾರಿಕೆ ಮತ್ತು ಪಾಲಿಕೆಯವರು ವೇದಿಕೆ ಅಲಂಕಾರ ಮಾಡಬೇಕು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಲಘು ಉಪಹಾರದ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದ ಅವರು, ಮುಖಂಡರು ಉಲ್ಲೇಖಿಸಿದ ಉಪನ್ಯಾಸಕರಿಂದ ಅರಸುರವರ ಕುರಿತು ಉಪನ್ಯಾಸ ನೀಡಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಶಾಲಾ-ಕಾಲೇಜು ಮಟ್ಟದಲ್ಲಿ ಅರಸು ರವರ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಿ, ಜಯಂತಿ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ನೀಡಬೇಕು. ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಹಿಂದುಳಿದ ವರ್ಗಗಳಿಗಾಗಿ ಸೇವೆ ಸಲ್ಲಿಸಿದ ಓರ್ವರನ್ನು ಗುರುತಿಸಿ ಸನ್ಮಾನಿಸಲಾಗುವುದು. ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಗುವುದು ಎಂದರು.
ಅರಸುರವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಮನವಿ ಮಾಡಿದರು.
ಹಿಂದುಳಿದ ವರ್ಗಗಳ ಜಾತಿ ಒಕ್ಕೂಟದ ಅಧ್ಯಕ್ಷ ವಿ.ರಾಜು ಮಾತನಾಡಿ, ದೇವರಾಜ ಅರಸು ಭವನದ ನಿರ್ಮಾಣ ಪೂರ್ಣಗೊಳ್ಳಲು ಅಗತ್ಯವಾದ ಅನುದಾನ ತಂದು ಕಾಮಗಾರಿಯನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಬೇಕು. ಹಾಗೂ ಸಮುದಾಯ ಭವನವನ್ನು ಇಲಾಖೆಯ ಆಡಳಿತ ಕಚೇರಿ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳದೇ, ಭವನದ ನಿರ್ಮಾಣದ ಉದ್ದೇಶದ ಆಶಯಗಳನ್ವಯ ಬಳಕೆ ಮಾಡಿಕೊಳ್ಳಬೇಕೆಂದು ಕೋರಿದರು.
ದೇವರಾಜ ಅರಸು ಸಮುದಾಯ ಭವನ ಕಟ್ಟಡ ನಿರ್ಮಾಣದ ಅಂದಾಜು ಮೊತ್ತಕ್ಕಿಂತ ಹೆಚ್ಚಾದ ಕಾರಣ ಕಾಮಗಾರಿ ಅರ್ಧಕ್ಕೆ ನಿಂತಿದೆ. ಇದೀಗ ಕಾಮಗಾರಿ ಪೂರ್ಣಗೊಳ್ಳಲು ಅವಶ್ಯಕತೆ ಇರುವ 1.7 ಕೋಟಿ ರು. ಮೊತ್ತದ ಅಂದಾಜು ಪಟ್ಟಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿ ಅನುದಾನ ನೀಡುವಂತೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಮನವಿ ಮಾಡಲಾಗುವುದು. ಅನುದಾನ ಬಿಡುಗಡೆಯಾದ ತಕ್ಷಣ ಕಾಮಗಾರಿ ಆರಂಭಿಸಿ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಭರವಸೆ ನೀಡಿದರು.