ಉದ್ಯಾನವನ ಅಭಿವೃದ್ಧಿಪಡಿಸಿ ನಿರ್ವಹಿಸಿ

KannadaprabhaNewsNetwork |  
Published : Sep 28, 2024, 01:32 AM IST
ಸಭೆಯನ್ನು ಉದ್ದೇಶಿಸಿ ಸಚಿವ ಎಚ್.ಕೆ.ಪಾಟೀಲ ಮಾತನಾಡಿದರು.  | Kannada Prabha

ಸಾರಾಂಶ

ಹಿಂದುಳಿದ, ಅಲ್ಪಸಂಖ್ಯಾತರ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಸುತ್ತಿರುವ ವಸತಿ ಶಾಲೆಗಳಲ್ಲಿ ಗುಣಮಟ್ಟದ ಆಹಾರ ಪೂರೈಕೆಯಾಗುವಂತೆ ನೋಡಿಕೊಳ್ಳಬೇಕು

ಗದಗ: ಜಿಲ್ಲಾಡಳಿತ ಭವನ, ಎಸ್.ಪಿ.ಆಫೀಸ್, ಎಸಿ ಆಫೀಸ್, ಜಿಮ್ಸ್ ಸೇರಿದಂತೆ ಸರ್ಕಾರಿ ಶಾಲಾ ಕಾಲೇಜು ಹಾಗೂ ಹಾಸ್ಟೆಲ್‌ಗಳಲ್ಲಿ ತೋಟಗಾರಿಕೆ ಇಲಾಖೆಯಿಂದ ಉದ್ಯಾನವನ ಅಭಿವೃದ್ಧಿಪಡಿಸಿ ನಿರ್ವಹಿಸಬೇಕು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಅವರು ಶುಕ್ರವಾರ ಜಿಪಂ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿನ 7 ತಾಲೂಕುಗಳಲ್ಲಿ ತಲಾ ಒಂದು ಲಕ್ಷ ಗಿಡ ನೆಡುವ ಕೆಲಸವಾಗಬೇಕು. ಸಸಿ ನೆಡುವ ಕಾರ್ಯಕ್ರಮದ ಯೋಜನೆ ತಯಾರಿಸಿ ವಿವರವಾದ ಮಾಹಿತಿಯೊಂದಿಗೆ ಆಯಾ ತಾಲೂಕಿನ ಜನಪ್ರತಿನಿಧಿಗಳ ಮಾರ್ಗದರ್ಶನ ಪಡೆದು ಕೆಲಸ ನಿರ್ವಹಿಸಬೇಕು.

ಗದಗ ತಾಲೂಕಿನಲ್ಲಿ 8 ಗ್ರಾಮಗಳಲ್ಲಿ ಸ್ಮಶಾನದ (ರುದ್ರಭೂಮಿಯ) ಸಮಸ್ಯೆಯಿದ್ದು, ಈ ಕುರಿತು ನ.1 ರೊಳಗೆ ರುದ್ರಭೂಮಿಗೆ ಸ್ಥಳ ಗುರುತಿಸಿ ಕ್ರಮ ಕೈಗೊಳ್ಳಬೇಕು. ರುದ್ರಭೂಮಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇರುವ ಹಾಗೇ ನೊಡಿಕೊಳ್ಳಬೇಕು. ಸಾರ್ವಜನಿಕರಿಗೆ ಪಡಿತರ ಚೀಟಿ ವಿತರಣೆ ಮಾಡುವಾಗ ಯಾವುದೇ ಅವ್ಯವಹಾರ ಆಗದಂತೆ ನೋಡಿಕೊಳ್ಳಬೇಕು.

ಹಿಂದುಳಿದ, ಅಲ್ಪಸಂಖ್ಯಾತರ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಸುತ್ತಿರುವ ವಸತಿ ಶಾಲೆಗಳಲ್ಲಿ ಗುಣಮಟ್ಟದ ಆಹಾರ ಪೂರೈಕೆಯಾಗುವಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳು ಅನಿರೀಕ್ಷಿತವಾಗಿ ಹಾಸ್ಟೆಲ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಮನೆ ಮನೆಗಳಿಗೆ ನಲ್ಲಿ ಮೂಲಕ ನೀರು ಸರಬರಾಜು ಮಾಡುವ ಜೆಜೆಎಂ ಯೋಜನೆಯಡಿ ಸಮರ್ಪಕ ನಿರ್ವಹಣೆಗೆ ಕ್ರಮ ವಹಿಸಬೇಕು. ನೀರು ವೃಥಾ ಪೋಲಾಗದಂತೆ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆ ಸಮರ್ಪಕವಾಗಿ ಆಗಬೇಕು ಎಂದರು.

ವಿಪ ಸದಸ್ಯ ಎಸ್.ವಿ.ಸಂಕನೂರ ಮಾತನಾಡಿ, ಜಿಲ್ಲೆಯಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಯ ಕಡೆ ಹೆಚ್ಚು ಗಮನ ಹರಿಸಬೇಕು. ಜಿಲ್ಲೆಯು ಉನ್ನತ ಸ್ಥಾನದಲ್ಲಿ ಬರಲು ಕ್ರಿಯಾ ಯೋಜನೆ ರೂಪಿಸಬೇಕು. ಇತ್ತೀಚೆಗೆ ಸುರಿದ ಮಳೆಯಿಂದ ಬೆಟಗೇರಿಯ ಟರ್ನಲ್ ಪೇಟೆಯಲ್ಲಿನ ರಸ್ತೆ ಯಲ್ಲಿನ ಮನೆಗಳಿಗೆ ನೀರು ನುಗ್ಗಿ ತೊಂದರೆಯಾಗಿದೆ. ನಗರಸಭೆಯವರು ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಂಡು ಮಳೆ ನೀರು ಗಟಾರುಗಳಲ್ಲಿ ಸರಾಗವಾಗಿ ಹರಿದು ಹೋಗುವಂತೆ ಕ್ರಮ ವಹಿಸಬೇಕು ಎಂದರು.

ನರಗುಂದ ಶಾಸಕ ಸಿ.ಸಿ. ಪಾಟೀಲ ಮಾತನಾಡಿ, ರೈತರಿಗೆ ವಿತರಿಸಲಾಗುವ ರಸಗೊಬ್ಬರದ ಗುಣಮಟ್ಟದ ಪರೀಕ್ಷೆ ನಡೆಸಬೇಕು. ಅರ್ಹ ಫಲಾನುಭವಿಗಳಿಗೆ ಕೃಷಿ ಯಂತ್ರೋಪಕರಣಗಳ ವಿತರಣೆ ಮಾಡುವಾಗ ವಿನಾಕಾರಣ ವಿಳಂಬ ಮಾಡಬಾರದು ಎಂದರು.

ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಜಿಲ್ಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆ ಸಮರ್ಪಕ ರೀತಿಯಲ್ಲಿ ಆಗಬೇಕು. ಕುಡಿಯುವ ನೀರಿನ ಸಮಸ್ಯೆಯಿರುವ ಪ್ರದೇಶಗಳಲ್ಲಿ ಬೋರ್ ವೆಲ್ ಮೂಲಕ ನೀರು ಸರಬರಾಜಿಗೆ ಕ್ರಮ ವಹಿಸಬೇಕು. ಹಮ್ಮಿಗಿಯಲ್ಲಿ ನೀರು ಪೂರೈಕೆಯ ಪೈಪ್‌ಲೈನ್ ದುರಸ್ತಿಯಿದ್ದು ರಿಪೇರಿಗಾಗಿ ವಿವರವಾದ ಪ್ರೊಜೆಕ್ಟ್ ತಯಾರು ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ, ರೋಣ ಶಾಸಕ ಜಿ.ಎಸ್. ಪಾಟೀಲ ಮಾತನಾಡಿ, ಅಕಾಲಿಕ ಮಳೆಯಿಂದ ಹಾನಿಗೊಳಗಾದ ತೋಟಗಾರಿಕಾ ಪ್ರದೇಶದ ಸರ್ವೇ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಜನತಾ ದರ್ಶನ ಕಾರ್ಯಕ್ರಮದಲ್ಲಿ ಸ್ವೀಕರಿಸಿದ ಅರ್ಜಿ ಶೀಘ್ರವಾಗಿ ವಿಲೇವಾರಿಯಾಗುವಂತೆ ಕ್ರಮ ಕೈಕೊಳ್ಳಬೇಕು.

ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಮಾತನಾಡಿ, ಕಂದಾಯ ಇಲಾಖೆಯಲ್ಲಿ ವಿವಿಧ ಯೋಜನೆಗಳ ಸೌಲಭ್ಯ ಒದಗಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಗೆ ನೇರವಾಗಿ ಅವರ ಖಾತೆಗಳಿಗೆ ಹಣ ಜಮೆ ಮಾಡಲಾಗುತ್ತಿದೆ. ಸಕಾಲ ಯೋಜನೆಯಡಿ ಸ್ವಿಕೃತ ಅರ್ಜಿಗಳು ನಿಗದಿತ ಕಾಲದಲ್ಲಿಯೇ ವಿಲೇವಾರಿಯಾಗುತ್ತಿದ್ದು, ರಾಜ್ಯದಲ್ಲಿಯೇ ಜಿಲ್ಲೆಯು ಅಗ್ರಸ್ಥಾನದಲ್ಲಿದೆ ಎಂದು ತಿಳಿಸಿದರು.

ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಮಾತನಾಡಿ, ಜಿಲ್ಲೆಯಲ್ಲಿ ಸೆ. 25 ರವರೆಗೆ ವಾಡಿಕೆ ಮಳೆ 467 ಮಿ.ಮೀ ಇದ್ದು, ವಾಸ್ತವ ಮಳೆ 424 ಮಿ.ಮೀ ಆಗಿರುತ್ತದೆ. 311771 ಹೆಕ್ಟೇರ್ ಪ್ರದೇಶ ಬಿತ್ತನೆಯಾಗಿದೆ. ರೈತರಿಗೆ ವಿತರಣೆಗೆ 12504 ಮೆಟ್ರಿಕ್ ಟನ್ ರಸಗೊಬ್ಬರದ ಲಭ್ಯತೆ ಇದೆ ಎಂದು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ತೋಟಗಾರಿಕೆ, ಶಿಕ್ಷಣ, ಜೆಜೆಎಂ. ಹೆಸ್ಕಾಂ ಸೇರಿದಂತೆ ವಿವಿಧ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲಾಯಿತು.

ಸಭೆಯಲ್ಲಿ ಜಿಪಂ ಸಿಇಓ ಭರತ್ ಎಸ್, ಡಿಎಫ್ಓ ಲೇಖರಾಜ್, ಹೆಚ್ಚುವರಿ ಎಸ್ಪಿ ಎಂ.ಬಿ. ಸಂಕದ. ಪ್ರಗತಿ ಪರಿಶೀಲನಾ ಸಮಿತಿ ಸಭೆಯ ಅಧಿಕಾರೇತರ ಸದಸ್ಯ ಎಸ್.ಎನ್. ಬಳ್ಳಾರಿ, ಪ್ರಭು ಮೇಟಿ, ಎಸ್.ಡಿ. ಮಕಾನದಾರ, ಶಾರದಾ ಹಿರೇಗೌಡರ, ತಾಲೂಕು ತಹಸೀಲ್ದಾರರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

PREV

Recommended Stories

ಗ್ರಾಮೀಣ ಭಜನಾ ಮಂಡಳಿಗಳಲ್ಲಿ ತತ್ವಪದಗಳು ಜೀವಂತ
ರಾಮದುರ್ಗ ಧನಲಕ್ಷ್ಮೀ ಶುಗರ್ ಚುನಾವಣೆ: ಸತತ 4ನೇ ಬಾರಿಗೆ ಯಾದವಾಡರ ನೇತೃತ್ವಕ್ಕೆ ಜಯ