ಶೈಕ್ಷಣಿಕ ಅಭಿವೃದ್ಧಿಯಿಂದ ಸಮಾಜದ ಅಭಿವೃದ್ಧಿ ಸಾಧ್ಯ

KannadaprabhaNewsNetwork | Published : Dec 13, 2024 12:47 AM

ಸಾರಾಂಶ

ಚಳ್ಳಕೆರೆ: ಶೈಕ್ಷಣಿಕ ಅಭಿವೃದ್ಧಿಯ ಮೂಲಕ ದೇಶ ಮತ್ತು ಸಮಾಜದ ಅಭಿವೃದ್ಧಿ ಸಾಧ್ಯ. ಪ್ರಸ್ತುತ ವಿಜ್ಞಾನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಶಿಕ್ಷಣ ಕೊಡುಗೆ ಅಪಾರ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲೂ ಸಹ ಹೊಸ, ಹೊಸ ಮಾದರಿ ತಯಾರಿಕೆ ಬಗ್ಗೆ ಹೆಚ್ಚು ಆಸಕ್ತಿ ಮೂಡುತ್ತಿರುವುದು ಸಂತಸ ತಂದಿದೆ ಎಂದು ಡಿಡಿಪಿಐ ಎಂ.ಆರ್.ಮಂಜುನಾಥ ಹೇಳಿದರು.

ಚಳ್ಳಕೆರೆ: ಶೈಕ್ಷಣಿಕ ಅಭಿವೃದ್ಧಿಯ ಮೂಲಕ ದೇಶ ಮತ್ತು ಸಮಾಜದ ಅಭಿವೃದ್ಧಿ ಸಾಧ್ಯ. ಪ್ರಸ್ತುತ ವಿಜ್ಞಾನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಶಿಕ್ಷಣ ಕೊಡುಗೆ ಅಪಾರ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲೂ ಸಹ ಹೊಸ, ಹೊಸ ಮಾದರಿ ತಯಾರಿಕೆ ಬಗ್ಗೆ ಹೆಚ್ಚು ಆಸಕ್ತಿ ಮೂಡುತ್ತಿರುವುದು ಸಂತಸ ತಂದಿದೆ ಎಂದು ಡಿಡಿಪಿಐ ಎಂ.ಆರ್.ಮಂಜುನಾಥ ಹೇಳಿದರು.

ತಾಲೂಕಿನ ತಳಕು ಗ್ರಾಮದ ವೆಂಕಣ್ಣಯ್ಯ ವಿದ್ಯಾಸಂಸ್ಥೆಯ ಮಾರುತಿಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸ್ಮಾರ್ಟ್‌ ಕ್ಲಾಸ್‌, ಕಂಪ್ಯೂಟರ್ ಲ್ಯಾಬ್ ಹಾಗೂ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಈ ಶಾಲೆಯಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಕೌಶಲ್ಯವನ್ನು ಪ್ರದರ್ಶಿಸಲು ವಸ್ತುಪ್ರದರ್ಶನ ಉತ್ತಮ ವೇದಿಕೆಯಾಗಿದೆ. ಸುತ್ತಮುತ್ತಲ ಹತ್ತಾರು ಗ್ರಾಮಗಳ ನೂರಾರು ವಿದ್ಯಾರ್ಥಿಗಳು ವಿವಿಧ ಮಾದರಿಗಳನ್ನು ಅಚ್ಚುಕಟ್ಟಾಗಿ ತಯಾರಿಸಿ ಪ್ರದರ್ಶನಕ್ಕಿಟ್ಟಿದ್ದಾರೆ. ಇದರಿಂದ ವಿದ್ಯಾರ್ಥಿಗಳಲ್ಲಿರುವ ಜ್ಞಾನ ಹಾಗೂ ಜಾಣ್ಮೆ ತಿಳಿದಿದೆ. ಶಿಕ್ಷಕರು ಇಂತಹ ವಿದ್ಯಾರ್ಥಿಗಳಿಗೆ ಹೆಚ್ಚು ಮಾರ್ಗದರ್ಶನ ನೀಡಿದರೆ ಅವರು ಮುಂದಿನ ದಿನಗಳಲ್ಲಿ ಸಮಾಜಕ್ಕೆ ಉತ್ತಮ ಕೊಡುಗೆ ಕೊಡಲು ಸಮರ್ಥರಾಗುತ್ತಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯ ಶಿಕ್ಷಕ, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಿ.ಸುರೇಶ್ ಮಾತನಾಡಿ, ಕ್ರಿಯಾಶೀಲ ಕಾರ್ಯಕ್ರಮಗಳಿಂದ ಮಾತ್ರ ವಿದ್ಯಾರ್ಥಿಗಳ ಕೌಶಲ್ಯ ಪ್ರಗತಿ ಸಾಧ್ಯ. ಕಳೆದ ಆರು ವರ್ಷಗಳಿಂದ ನಿರಂತರವಾಗಿ ವಸ್ತು ಪ್ರದರ್ಶನ ಏರ್ಪಡಿಸುವ ಮೂಲಕ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಲಾಗುತ್ತಿದೆ. ವಿಶೇಷವಾಗಿ ಶಿಕ್ಷಣ ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳು, ಗ್ರಾಮಸ್ಥರು, ಪೋಷಕರು ಹೆಚ್ಚಿನ ಸಹಕಾರ ನೀಡಿದ್ದಾರೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಿ.ಬಿ.ಮಹಂತೇಶ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿ.ಟಿ.ವೀರೇಶ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ರಾಜಕುಮಾರ್, ಕಾರ್ಯದರ್ಶಿ ಡಿ.ಎಸ್.ಪಾಲಯ್ಯ, ಎನ್‌ಪಿಎಸ್ ಅಧ್ಯಕ್ಷ ಎಚ್.ಒ.ರಾಜಣ್ಣ, ಸದಾಶಿವ, ಅಶೋಕ್, ಕೆ.ಎಸ್.ಶ್ರೀಕಾಂತ್, ಪಿಎಸ್‌ಐ ಲೋಕೇಶ್, ಪಿ.ಮಹಂತೇಶ್, ಮಾರುತಿಭಂಡಾರಿ, ಸಿಆರ್‌ಪಿಟಿ.ವಿ.ತಿಪ್ಪೇಸ್ವಾಮಿ, ಪಿ.ನಾಗರಾಜು, ಎನ್.ಟಿ.ಬಸವರಾಜು, ಗ್ರಾಪಂ ಸದಸ್ಯರಾದ ರಾಮು, ಮಹಂತೇಶ್, ಶಿಕ್ಷಕರಾದ ಅಶೋಕ್, ಭೀಮಾನಾಯ್ಕ, ಮೋಹನ್, ಬೋರಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

Share this article