ಕಾಂಗ್ರೆಸ್‌ ಸರ್ಕಾರದ 7 ತಿಂಗಳಲ್ಲಿ ಅಭಿವೃದ್ಧಿ ಸ್ಥಗಿತ

KannadaprabhaNewsNetwork |  
Published : Dec 19, 2023, 01:45 AM IST
ಹೊನ್ನಾಳಿ-ನ್ಯಾಮತಿ  | Kannada Prabha

ಸಾರಾಂಶ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು 7 ತಿಂಗಳಾದರೂ ಈ ವರೆಗೆ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳ ಹಮ್ಮಿಕೊಳ್ಳುವಲ್ಲಿ ಸಿದ್ದರಾಮಯ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ:ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಟೀಕೆ

* ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಟೀಕೆ । ರಾಜ್ಯ ಸರ್ಕಾರದ ವೈಫಲ್ಯಗಳ ಖಂಡಿಸಿ ಬಿಜೆಪಿ ಮಂಡಲದಿಂದ ಪ್ರತಿಭಟನೆ

ಕನ್ನಡಪ್ರಭ ವಾರ್ತೆ ಹೊನ್ನಾಳಿ

ಹಲವು ಸುಳ್ಳು ಭರವಸೆಗಳ ನಾಡಿನ ಜನತೆಗೆ ನೀಡಿ ಆಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ತನ್ನ ಹೊಣೆಗಾರಿಕೆ ಮರೆತು ಆಡಳಿತ ವ್ಯವಸ್ಥೆಯಲ್ಲಿ ಸಂಪೂರ್ಣ ವಿಫಲವಾಗಿದೆ. ರಾಜ್ಯದ 223 ತಾಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದರೂ ಯಾವುದೇ ಭರವಸೆಗಳ ಜನರ ನಿರೀಕ್ಷೆಯಂತೆ ಪೂರೈಸಿಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ರಾಜ್ಯ ಸರ್ಕಾರವನ್ನು ಟೀಕಿಸಿದರು.

ಹೊನ್ನಾಳಿ, ನ್ಯಾಮತಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ಸೋಮವಾರ ರಾಜ್ಯ ಸರ್ಕಾರದ ವೈಫಲ್ಯಗಳ ಖಂಡಿಸಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು 7 ತಿಂಗಳಾದರೂ ಈ ವರೆಗೆ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳ ಹಮ್ಮಿಕೊಳ್ಳುವಲ್ಲಿ ಸಿದ್ದರಾಮಯ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಭೀಕರ ಬರಗಾಲದಿಂದ ರೈತರ ಬದುಕು ಸಂಕಷ್ಟಕ್ಕೀಡಾಗಿದ್ದು, ಸರ್ಕಾರ ಕಾಟಾಚಾರಕ್ಕೆ ಬೆಳೆಹಾನಿ ಸಮೀಕ್ಷೆ ನಡೆಸಿ ಪರಿಹಾರ ನೀಡದೆ ರೈತರ ತಲೆ ಮೇಲೆ ಚಪ್ಪಡಿ ಕಲ್ಲು ಎಳೆಯುವ ಕೆಲಸ ಮಾಡಿದೆ ಎಂದು ಹೇಳಿದರು.

ರೈತರಿಗೆ ಬರ ಪರಿಹಾರವಾಗಿ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ. ರೈತರಿಗಾಗಿ ₹25 ಸಾವಿರ ಕೋಟಿ ಹಣ ಮೀಸಲಿರಿಸಬೇಕು. ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿಯವರು ರೈತರು ಅಸಲು ಕಟ್ಟಿದರೆ ಬಡ್ಡಿಮನ್ನಾ ಮಾಡಲಾಗುವುದು ಎಂದಿದ್ದಾರೆ. ವಾಸ್ತವವಾಗಿ ರೈತರು ಅಸಲು ಸಾಲ ಕಟ್ಟಲಾಗದ ಪರಿಸ್ಥಿತಿಯಲ್ಲಿದ್ದಾರೆ ಇದಕ್ಕಾಗಿ ರೈತರ ಸಂಪೂರ್ಣ ಸಾಲವನ್ನೇ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ರೈತರಿಗೆ ಕೇಂದ್ರ ಸರ್ಕಾರ ಪಿಎಂ ಕಿಸಾನ್ ಯೋಜನೆಯಡಿ ₹6 ಸಾವಿರ ಅಂದಿನ ಬಿಜೆಪಿ ರಾಜ್ಯ ಸರ್ಕಾರ 4 ಸಾವಿರ ರೈತರ ಖಾತೆಗೆ ಜಮೆ ಮಾಡುತ್ತಿತ್ತು ಆದರೆ ಈಗ ಕಾಂಗ್ರೆಸ್‌ ಸರ್ಕಾರ ₹4 ಸಾವಿರ ರೈತರ ಖಾತೆಗೆ ಹಾಕುವುದು ನಿಲ್ಲಿಸಿದ್ದು. ಕೂಡಲೇ ಈ ಮೊತ್ತವನ್ನು ರೈತರ ಖಾತೆಗೆ ಹಾಕಬೇಕು ಎಂದು ಒತ್ತಾಯಿಸಿದರು.

ಹೊನ್ನಾಳಿ ಮಂಡಲ ಬಿಜೆಪಿ ಅಧ್ಯಕ್ಷ ಜೆ.ಕೆ.ಸುರೇಶ್, ಮಾಜಿ ಅಧ್ಯಕ್ಷ ಡಿ.ಜಿ.ರಾಜಪ್ಪ, ನೆಲಹೊನ್ನೇ ಮಂಜಪ್ಪ, ಆರಕೆರೆ ನಾಗರಾಜ್, ಧರ್ಮಪ್ಪ, ಸಿ.ಆರ್.ಶಿವಾನಂದ, ಕುಬೇರಪ್ಪ, ಬಿ.ಬೀರಪ್ಪ ಸೇರಿ ಅನೇಕರು ಮಾತನಾಡಿದರು. ದಿಡಗೂರು ಫಾಲಾಕ್ಷಪ್ಪ, ಎಂ.ಎಸ್ ಫಾಲಾಕ್ಷಪ್ಪ, ಮಾದೇನಹಳ್ಳಿ ಕೆ.ಇ.ನಾಗರಾಜಪ್ಪ, ಪೇಟೆ ಪ್ರಶಾಂತ್, ಮಾರುತಿ ನಾಯ್ಕ, ಸುರೇಂದ್ರನಾಯ್ಕ ಹಲವು ಮುಖಂಡರು, ಸಾವಿರಾರು ಕಾರ್ಯಕರ್ತರಿದ್ದರು.

ರಾಜ್ಯಪಾಲರಿಗೆ ಸಲ್ಲಿಕೆ:

ಪಟ್ಟಣದ ಟಿ.ಬಿ.ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ತಾಲೂಕು ಕಚೇರಿ ಬಳಿ ಬಂದು ಈ ಸಂದರ್ಭದಲ್ಲಿ ಸಾರ್ವಜನಿಕರ ಉದ್ದೇಶಿಸಿ ಮಾತನಾಡಿ ಈ ಮನವಿಯ ಸ್ಥಳೀಯ ಅಧಿಕಾರಿಗಳಿಗೆ ನೀಡದೇ ರಾಜ್ಯಪಾಲರಿಗೆ ನೇರವಾಗಿ ಸಲ್ಲಿಸಲಾಗುವುದು ಎಂದು ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಎಸ್ಸಿ, ಎಸ್‌ಟಿ ಅನುದಾನ ದುರ್ಬಳಕೆ

ರೈತರ ಮಕ್ಕಳಿಗೆ ವಿದ್ಯಾನಿಧಿ ವಿದ್ಯಾರ್ಥಿವೇತನ, ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವಿನ ವ್ಯವಸ್ಥೆ ತುರ್ತಾಗಿ ಮಾಡಬೇಕು, ಹಾಲು ಉತ್ಪಾದಕರಿಗೆ ಹೆಚ್ಚಿನ ಪ್ರೋತ್ಸಾಹ ಧನ ನೀಡಬೇಕು, ಸರ್ಕಾರ ಎಸ್ಸಿ, ಎಸ್ಟಿ ಕಲ್ಯಾಣಕ್ಕಾಗಿ ಮೀಸಲಿಟ್ಟ ₹11500 ಕೋಟಿ ದುರ್ಬಳಕೆ ಮಾಡಿದ್ದು, ಕೂಡಲೇ ಸಂಬಂಧಿಸಿದ ವರ್ಗಗಳಿಗೆ ಅನುದಾನವನ್ನು ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿಡಬೇಕು ಎಂದು ರೇಣುಕಾಚಾರ್ಯ ಒತ್ತಾಯಿಸಿದರು.

ರಾಜ್ಯ ಸರ್ಕಾರ 10 ಕೆ.ಜಿ.ಅಕ್ಕಿ ಕೊಡಲಿ

ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿಯೋಜನೆ ಹಣ ಇನ್ನೂ ಶೇ.60ರಷ್ಟು ಮಹಿಳೆಯರ ಖಾತೆಗಳಿಗೆ ಹಣ ಸಂದಾಯವಾಗಿಲ್ಲ. ಕಾನೂನುಗಳ ಸಡಿಲಗೊಳಿಸಿ ಪ್ರತಿ ಮಹಿಳೆಯರಿಗೂ ಈ ಯೋಜನೆ ಲಾಭ ದೊರೆಯುವಂತೆ ಮಾಡಬೇಕು. ಕೇಂದ್ರ ಸರ್ಕಾರದ ಅಕ್ಕಿ ಜೊತೆಗೆ ರಾಜ್ಯ ಸರ್ಕಾರ 10 ಕೆ.ಜಿ.ಅಕ್ಕಿ ಪ್ರತಿಯೊಬ್ಬ ಬಡವರಿಗೆ ಕೂಡಲೇ ಬಿಡುಗಡೆ ಮಾಡಬೇಕು.

ಎಂ.ಪಿ.ರೇಣುಕಾಚಾರ್ಯ, ಮಾಜಿ ಸಚಿವ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಗು ಸಾವಿನ ಶಾಕ್‌ನಿಂದ ತಾಯಿಯೂ ಆತ್ಮ*ತ್ಯೆ
ಗ್ಯಾಸ್‌ಗಾಗಿ ಆಟೋ ಚಾಲಕರ ಯುದ್ಧ! - ಬಂಕ್‌ಗಳ ಮುಂದೆ ರಾತ್ರಿ ಇಡೀ ಜಾಗರಣೆ