ಭಟ್ಕಳ: ರಾಜ್ಯ ಸರ್ಕಾರ ಜನತೆಗೆ 5 ಗ್ಯಾರಂಟಿ ಯೋಜನೆ ಕೊಟ್ಟು ಅಭಿವೃದ್ಧಿ ಕೆಲಸ ಮಾಡುತ್ತಿದೆ. ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ 24 ಗಂಟೆ ವಿದ್ಯುತ್ ಮತ್ತು ಕುಡಿಯುವ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್ ವೈದ್ಯ ಹೇಳಿದರು.
ಭಟ್ಕಳ ಕ್ಷೇತ್ರಕ್ಕೆ 5 ಸಾವಿರ ಮನೆಗಳನ್ನು ಸರ್ಕಾರದಿಂದ ಕೇಳಲಾಗಿದೆ. ಈಗಾಗಲೇ 913 ಮನೆಗಳು ಮಂಜೂರಿಯಾಗಿದೆ. ಮತ್ತೆ 2 ಸಾವಿರ ಮನೆಗಳು ಬಂದರೆ ಸೂರಿಲ್ಲದವರಿಗೆ ಸೂರು ಒದಗಿಸಿದಂತಾಗುತ್ತದೆ. ಜಾಲಿ ಪಪಂ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ಒದಗಿಸುವುದಾಗಿ ಭರವಸೆ ನೀಡಿದ ಸಚಿವರು, ಈಗಾಗಲೇ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಯೋಜನೆಗೆ ₹87 ಕೋಟಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮಂಜೂರಿಯಾಗುವ ವಿಶ್ವಾಸ ಇದೆ ಎಂದರು.
ಭಟ್ಕಳ ಪುರಸಭೆ ವ್ಯಾಪ್ತಿಯಲ್ಲಿ ₹37 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಕಾಮಗಾರಿ ಆರಂಭಿಸಲಾಗಿದೆ. ನಗರೋತ್ಥಾನ ಕಾಮಗಾರಿ ನಡೆಯುತ್ತಿದೆ. ಹಿಂದೆ ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಮಂಜೂರಾದ ಯೋಜನೆಗಳನ್ನು ಈಗ ಅನುಷ್ಠಾನಗೊಳಿಸುವಂತಾಗಿದೆ. ಬಂದರು-ಸಾಗರ ರಸ್ತೆಯನ್ನು ₹25 ಕೋಟಿ ವೆಚ್ಚದಲ್ಲಿ ಕಾಂಕ್ರೀಟಿಕರಣ ಮಾಡಲಾಗುತ್ತಿದೆ. ಕ್ಷೇತ್ರದಲ್ಲಿ ಕುಡಿಯುವ ನೀರು, ವಿದ್ಯುತ್, ರಸ್ತೆ, ವಸತಿ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದೇನೆ. ಕೆಲಸ ಮಾಡುವ ಇಚ್ಛಾಶಕ್ತಿ ಇದ್ದರೆ ಎಲ್ಲವನ್ನೂ ಮಾಡಬಹುದಾಗಿದೆ. ಜನರು ಹೇಳದೇ ಇದ್ದರೂ ನಾನೇ ಖುದ್ದಾಗಿ ಸ್ಥಳಕ್ಕೆ ತೆರಳಿ ಅಗತ್ಯ ಕೆಲಸ ಮಾಡುವಲ್ಲಿ ಮುಂದಾಗಿದ್ದೇನೆ ಎಂದರು.ಉಪಸ್ಥಿತರಿದ್ದ ಜಾಲಿ ಪಪಂ ಉಪಾಧ್ಯಕ್ಷ ಇಮ್ರಾನ್ ಲಂಕಾ ಜಾಲಿ ಪಪಂ ವ್ಯಾಪ್ತಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ಒದಗಿಸುವಂತೆ ಸಚಿವರಲ್ಲಿ ಮನವಿ ಮಾಡಿದರು.