ಸಚಿವ ಬಸವರಾಜ ರಾಯರಡ್ಡಿ ಜನ್ಮದಿನ ಅಂಗವಾಗಿ ಯಲಬುರ್ಗಾ ಪಟ್ಟಣದ ಶ್ರೀ ವಿಜಯ ದುರ್ಗಾದೇವಿ ದೇವಸ್ಥಾನದಲ್ಲಿ ನೂರಾರು ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ರೋಗಿಗಳಿಗೆ ಹಣ್ಣು, ಹಾಲು ಹಾಗೂ ಹಣ್ಣು-ಹಂಪಲು ವಿತರಿಸಿದರು. ರಕ್ತದಾನ ಶಿಬಿರ ನಡೆಯಿತು.
ಯಲಬುರ್ಗಾ: ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳು ರಾಜ್ಯ ಹಾಗೂ ರಾಷ್ಟ್ರಕ್ಕೆ ಮಾದರಿಯಾಗಿದ್ದು, ಉನ್ನತ ಶಿಕ್ಷಣ ಸಚಿವ ಹಾಗೂ ಶಾಸಕ ಬಸವರಾಜ ರಾಯರಡ್ಡಿ ಕೊಡುಗೆ ಮಹತ್ವದ್ದಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆರಿಬಸಪ್ಪ ನಿಡಗುಂದಿ ಹೇಳಿದರು.
ಪಟ್ಟಣದ ಶಾಸಕರ ಗೃಹ ಕಚೇರಿಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕೊಪ್ಪಳ ಹಾಗೂ ರಾಯರಡ್ಡಿ ಅಭಿಮಾನಿಗಳ ಬಳಗದ ವತಿಯಿಂದ ಸಚಿವ ಬಸವರಾಜ ರಾಯರಡ್ಡಿ ಅವರ ೭೦ನೇ ಜನ್ಮದಿನ ಅಂಗವಾಗಿ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬಸವರಾಜ ರಾಯರಡ್ಡಿ ನಾಲ್ಕೂವರೆ ದಶಕಗಳಿಗೂ ಹೆಚ್ಚು ಕಾಲದ ತಮ್ಮ ರಾಜಕೀಯ ಜೀವನದಲ್ಲಿ ಅಭಿವೃದ್ಧಿಪರ ಹಾಗೂ ಜನಪರ ಕೆಲಸ ಮಾಡಿದ್ದಾರೆ. ಅಪಾರ ರಾಜಕೀಯ ಅನುಭವ ಹೊಂದಿರುವ ಅವರು ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ ಎಂದರು.
ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್ ಕೊರ್ಲಹಳ್ಳಿ, ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಆನಂದ ಉಳ್ಳಾಗಡ್ಡಿ, ಬಿ.ಎಂ. ಶಿರೂರು, ಈಶ್ವರ ಅಟಮಾಳಗಿ ಮಾತನಾಡಿದರು.
ವಿವಿಧ ಸೇವಾ ಕಾರ್ಯಕ್ರಮ: ಸಚಿವ ಬಸವರಾಜ ರಾಯರಡ್ಡಿ ಅವರ ಜನ್ಮದಿನ ಅಂಗವಾಗಿ ರಾಯರಡ್ಡಿ ಅಭಿಮಾನಿಗಳ ಬಳಗದಿಂದ ಪಟ್ಟಣದ ಶ್ರೀ ವಿಜಯ ದುರ್ಗಾದೇವಿ ದೇವಸ್ಥಾನದಲ್ಲಿ ನೂರಾರು ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಹಣ್ಣು, ಹಾಲು ಹಾಗೂ ಹಣ್ಣು-ಹಂಪಲು ವಿತರಿಸಲಾಯಿತು.
ಆನಂತರ ಶಾಸಕರ ಗೃಹ ಕಚೇರಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದ್ದು, ಅಭಿಮಾನಿಗಳು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಈ ಸಂದರ್ಭ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು. ಬಳಿಕ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.
ನನ್ನ ಹುಟ್ಟುಹಬ್ಬದ ಅಂಗವಾಗಿ ಯಲಬುರ್ಗಾ ಕ್ಷೇತ್ರ ಸೇರಿದಂತೆ ರಾಜ್ಯದ ವಿವಿಧ ಭಾಗಗಳ ಜನರು ಅಭಿಮಾನದಿಂದ ಶುಭ ಹಾರೈಸಿರುವುದಕ್ಕೆ ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆ ಹಾಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಚಿವ ಬಸವರಾಜ ರಾಯರಡ್ಡಿ ಹೇಳಿದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದ ರಾಜ್ಯ ಸರ್ಕಾರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ. ಯಲಬುರ್ಗಾ ಕ್ಷೇತ್ರದಲ್ಲಿಯೂ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.