ಅರಕಲಗೂಡಲ್ಲಿ ಅಭಿವೃದ್ಧಿ ಕಾರ್ಯಗಳಾಗಬೇಕಿದೆ: ಮಲ್ಲಿಕಾರ್ಜುನ ಸ್ವಾಮೀಜಿ ಸಲಹೆ

KannadaprabhaNewsNetwork |  
Published : Jun 30, 2025, 12:34 AM IST
ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ಗ್ಯಾರಂಟಿ ಅನುಷ್ಠಾನ ಯೋಜನೆ ಅಧ್ಯಕ್ಷ ಎಚ್. ಪಿ. ಶ್ರೀಧರ್‌ಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಮತ್ತು ಕೃಷಿ, ವಿವಿಧ ಕ್ಷೇತ್ರದ ಸಾಧಕರ ಸನ್ಮಾನ ಸಮಾರಂಭದದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಪಾಲಕರನ್ನು ಸನ್ಮಾನಿಸಲಾಯಿತು. ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಶ್ರೀ ಬಸವರಾಜೇಂದ್ರ ಸ್ವಾಮೀಜಿ, ಮೊಹಮದ್ ರಿಜ್ವಾನ್, ಶ್ರೀಧರ್‌ಗೌಡ ಇತರರಿದ್ದರು. | Kannada Prabha

ಸಾರಾಂಶ

ಯುವಕರ ಕಣ್ಮಣಿಯಾಗಿ ಕೆಲಸ ಮಾಡುತ್ತಿರುವ ಶ್ರೀಧರ್ ಗೌಡರ ಹೆಸರು ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಬಡ ವಿದ್ಯಾರ್ಥಿಗಳಿಗೆ 16 ಲಕ್ಷ ರು. ವಿದ್ಯಾರ್ಥಿ ವೇತನ ಕೊಡಿಸಿರುವೆ. ಕ್ಷೇತ್ರದಲ್ಲಿ ಎಲ್ಲ ರಾಜಕಾರಣಿಗಳಿಗಿಂತ ಮಿಗಿಲಾಗಿ ಜನರ ಕಷ್ಟಗಳಿಗೆ ಸ್ಪಂದಿಸುವ ಗುಣ ಹೊಂದಿರುವ ಇವರ ಶ್ರೇಷ್ಠ ವ್ಯಕ್ತಿತ್ವಕ್ಕೆ ತಕ್ಕ ಫಲ ಸಿಗುವಂತಾಗಲಿ.

ಕನ್ನಡಪ್ರಭ ವಾರ್ತೆ ಅರಕಲಗೂಡು

ಹೇಮಾವತಿ, ಕಾವೇರಿ ಎರಡು ಜೀವ ನದಿಗಳು ಹರಿಯುತ್ತಿರುವ ತಾಲೂಕಿನಲ್ಲಿ ದೇಶವೇ ತಿರುಗಿ ನೋಡುವಂತಹ ಅಭಿವೃದ್ಧಿ ಕಾರ್ಯಗಳು ಆಗಬೇಕಾಗಿದೆ ಎಂದು ದೊಡ್ಡಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.

ತಾಲೂಕಿನ ಕೊಣನೂರು ವಿನುತ ಕನ್ವೆನ್ಷನ್ ಹಾಲ್‌ನಲ್ಲಿ ಗ್ಯಾರಂಟಿ ಅನುಷ್ಠಾನ ಯೋಜನೆ ಅಧ್ಯಕ್ಷ ಎಚ್. ಪಿ. ಶ್ರೀಧರ್ ಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಮತ್ತು ಕೃಷಿ, ವಿವಿಧ ಕ್ಷೇತ್ರದ ಸಾಧಕರ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಗಳು, ಪ್ರಕೃತಿದತ್ತವಾಗಿ ತಾಲೂಕು ಸಂಪದ್ಭರಿತವಾಗಿದೆ. ಆದರೆ ಅಭಿವೃದ್ಧಿ ಪಥದತ್ತ ಸಾಗುವ ಮೂಲಕ ಹಿಂದುಳಿದ ತಾಲೂಕಿನಿಂದ ಹೊರಬರಬೇಕಿದೆ. ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಶೇ.99ರಷ್ಟು ಜನತೆಗೆ ತಲುಪಿಸುವ ಮೂಲಕ ಉತ್ತಮ ಸಾಧನೆ ಮಾಡಿರುವ ಯೋಜನೆ ಅಧ್ಯಕ್ಷ ಶ್ರೀಧರ್ ಗೌಡರು ಮಹಾನ್ ಸಾಧಕರಾಗಿದ್ದಾರೆ. ಜನಸೇವೆಯ ತುಡಿತ ಹೊಂದಿರುವ ಇಂತಹ ಜನಪರ ವ್ಯಕ್ತಿಗಳಿಗೆ ಹೆಚ್ಚಿನ ಅಧಿಕಾರ ಪ್ರಾಪ್ತಿಯಾಗಲಿ ಎಂದು ಆಶಿಸಿದರು.

ಕೆಸವತ್ತೂರು ವಿರಕ್ತ ಮಠದ ಶ್ರೀ ಬಸವರಾಜೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿ, ಯುವಕರ ಕಣ್ಮಣಿಯಾಗಿ ಕೆಲಸ ಮಾಡುತ್ತಿರುವ ಶ್ರೀಧರ್ ಗೌಡರ ಹೆಸರು ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಬಡ ವಿದ್ಯಾರ್ಥಿಗಳಿಗೆ 16 ಲಕ್ಷ ರು. ವಿದ್ಯಾರ್ಥಿ ವೇತನ ಕೊಡಿಸಿರುವೆ. ಕ್ಷೇತ್ರದಲ್ಲಿ ಎಲ್ಲ ರಾಜಕಾರಣಿಗಳಿಗಿಂತ ಮಿಗಿಲಾಗಿ ಜನರ ಕಷ್ಟಗಳಿಗೆ ಸ್ಪಂದಿಸುವ ಗುಣ ಹೊಂದಿರುವ ಇವರ ಶ್ರೇಷ್ಠ ವ್ಯಕ್ತಿತ್ವಕ್ಕೆ ತಕ್ಕ ಫಲ ಸಿಗುವಂತಾಗಲಿ ಎಂದರು.

ಕೊಣನೂರು ಮೊಮ್ಮಿನ್ ಮಸೀದಿ ಧರ್ಮಗುರು ಮೊಹಮದ್ ರಿಜ್ವಾನ್ ಆಶೀರ್ವಚನ ನೀಡಿ, ಜಾತಿ, ಮತದ ಭಾವನೆ ಮನೆಯೊಳಗಿರಬೇಕು. ಮನೆಯಿಂದ ಹೊರಗೆ ದೇಶದ ಹಿತಕ್ಕಾಗಿ ನಾವೆಲ್ಲ ಭಾರತೀಯರು ಎಂಬ ಭಾವನೆಯಿಂದ ಒಟ್ಟಾಗಿ ಶ್ರಮಿಸಬೇಕು. ಈ ನಿಟ್ಟಿನಲ್ಲಿ ಶ್ರೀಧರ್‌ ಗೌಡರ ಸೇವೆ ಸಾಮರಸ್ಯದ ಪ್ರತೀಕವಾಗಿದೆ ಎಂದು ಬಣ್ಣಿಸಿದರು.

ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಪಿ. ಶ್ರೀಧರ್ ಗೌಡ ಮಾತನಾಡಿ, ತಾಲೂಕಿನಲ್ಲಿ ಎರಡು ನದಿಗಳು ಹರಿದರೂ ಹಿಂದುಳಿದ ತಾಲೂಕೆಂಬ ಹಣೆಪಟ್ಟಿ ಹೊತ್ತಿದೆ. ಅಧಿಕಾರ ಅನುಭವಿಸಿದ ಜನಪ್ರತಿನಿಧಿಗಳಿಂದ ಇಲ್ಲಿಗೆ ಎಂಜಿನಿಯರ್ ಇಲ್ಲವೇ ಮೆಡಿಕಲ್ ಕಾಲೇಜು ತರುವುದಕ್ಕಾಗದಿದ್ದರೂ ಕನಿಷ್ಠ ಒಂದು ಡಿಪ್ಲೊಮಾ ಕಾಲೇಜು ತರಲು ಸಾಧ್ಯವಾಗದಿರುವುದು ದುರಂತದ ಸಂಗತಿ. ಕೈಗಾರಿಕೆಗಳನ್ನು ತರಲಾಗದ ಕಾರಣದಿಂದ ಪದವಿ ಪಡೆದ ಸಾವಿರಾರು ಯುವಕರು ಉದ್ಯೋಗ ಇಲ್ಲದೆ ಇಲ್ಲಿಯ ರೈತರ ಗಂಡು ಮಕ್ಕಳಿಗೆ ಹೆಣ್ಣು ಸಿಗದ ಪರಿಸ್ಥಿತಿ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಸಿಕ್ಕರೂ ಗೆಲ್ಲಲು ಸಾಧ್ಯವಾಗಲಿಲ್ಲ. ಸೋಲಿಗೆ ಎದೆಗುಂದದೆ ಪಕ್ಷದ ಕಚೇರಿ ತೆರೆದು ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ಜನರೇ ನನಗೆ ಶಕ್ತಿ, ಅವರಿಗೆ ತೊಂದರೆ ಆಗದಂತೆ ರಕ್ಷಣೆ ನೀಡುವ ಜವಾಬ್ದಾರಿ ನನ್ನದಾಗಿದೆ ಎಂದು ತಿಳಿಸಿದರು.

ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಟಿ. ಸೋಮಶೇಖರ್, ಹಳ್ಳಿಮೈಸೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೇಗೌಡ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಗೊರೂರು ರಂಜಿತ್, ತಾಲೂಕು ಮಜುಂದಾರ್ ಕಾಂಗ್ರೆಸ್ ಘಟಕದ ಅಧ್ಯಕ್ಷ ರಂಗನಾಥ್, ಹಾರಂಗಿ ಮಹಾ ಮಂಡಲ ಮಾಜಿ ಅಧ್ಯಕ್ಷ ಸರಗೂರು ದೊಡ್ಡೇಗೌಡ, ವಕೀಲರಾದ ಪ್ರಶಾಂತ್, ರಾಜೇಶ್, ಮುಖಂಡರಾದ ಲಕ್ಷ್ಮಣ್, ಲೋಕೇಶ್, ಜಾಕೀರ್ ಹುಸೇನ್, ಸಲೀಂ, ಸುಬಾನ ಷರೀಫ್, ಜುಬೇರ್, ದಶರಥ, ಮಲ್ಲೇಶ್, ಓಡನಹಳ್ಳಿ ಕುಮಾರ್‌ ಇತರರಿದ್ದರು. ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳು, ಪಾಲಕರು ಹಾಗೂ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ